Karnataka Rain: ಆಗಸ್ಟ್ 2ರವರೆಗೆ ಮಳೆ ಕಡಿಮೆ: ನಂತರ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಜುಲೈ ತಿಂಗಳ ಮಧ್ಯದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿರುವ ಮಳೆ, ತಿಂಗಳ ಅಂತ್ಯದಲ್ಲಿ ಕಡಿಮೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಕೂಡ ಮಳೆ ಕೊಂಚ ಬಿಡುವು ನೀಡಿದ್ದು ಆಗಸ್ಟ್ 2ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದೆ.
ಆಗಸ್ಟ್ 3 ಮತ್ತು 4ರಿಂದ ಮತ್ತೆ ಮಳೆ ಚುರುಕುಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 2ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಕೂಡ ಮಳೆ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಮಳೆಯ ಅಬ್ಬರ ಕಡಿಮೆಯಾದ ಬಳಿಕ ಉಕ್ಕಿ ಹರಿಯುತ್ತಿದ್ದ ನದಿಗಳು ಶಾಂತವಾಗಿದ್ದು, ಜಲಾಶಯಗಳಿಗೆ ಒಳ ಹರಿವು ಕಡಿಮೆಯಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದ್ದು, ಮೂರು ದಿನಗಳ ನಂತರ ಮತ್ತೆ ಚುರುಕುಗೊಳ್ಳಲಿದೆ. ಆದರೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ.
ಎಲ್ಲಾ ಜಿಲ್ಲೆಗಳ ಮಳೆ ಮುನ್ಸೂಚನೆ
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರೆಯಲಿದೆ. ಕಲಬುರಗಿ, ಕೊಡಗು, ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ. ಚಿಕ್ಕಮಗಳೂರು, ಯಾದಗಿರಿ, ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಯಚೂರು, ಬಳ್ಳಾರಿ, ವಿಜಯನಗರ, ವಿಜಯಪುರ, ಹಾವೇರಿ, ಕೊಪ್ಪಳ, ಗದಗ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಧಾರವಾಡ, ಬೆಂಗಳೂರು ನಗರ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ, ಬಾಗಲಕೋಟೆ, ಕೋಲಾರ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.
ಜುಲೈ 31ರಂದು ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಯರ್ಲಪಾಡಿಯಲ್ಲಿ 50.5 ಮಿಮೀ ಮಳೆಯಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಹಿರ್ಗಾಣ, ಕೆರಗಾಲು, ನಲ್ಲೂರು, ನೀರೆ, ರೆಂಜಾಲದಲ್ಲಿ ಉತ್ತಮ ಮಳೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮಳೆ ಕೈಕೊಟ್ಟಿದ್ದು, ಈ ಬಾರಿ ನಿರೀಕ್ಷಿತ ಪ್ರಮಾಣಕ್ಕಿ ಕಡಿಮೆ ಮಳೆಯಾಗಿದೆ. ಜುಲೈನಲ್ಲಿ ಕೂಡ ರಾಜಧಾನಿಯಲ್ಲಿ ಉತ್ತಮ ಮಳೆಯಾಗಲಿಲ್ಲ, ಆಗಸ್ಟ್ನಲ್ಲಿ ನಿರೀಕ್ಷಿತ ಮಳೆಯಾಗುತ್ತದಾ ಎಂದು ಕಾದುನೋಡಬೇಕಿದೆ.












Click it and Unblock the Notifications