Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿಗಾಲ ಮುಗಿಯುತ್ತಾ ಬಂದಿದ್ದು, ಬೇಸಿಗೆಗೂ ಮುನ್ನ ತಾಪಮಾನ ಏರಿಕೆಯಾಗುತ್ತಲೇ ಇದೆ. ಇದರ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಫೆಬ್ರವರಿ 26) 8 ಗಂಟೆವರೆಗೂ ಚಳಿಯ ವಾತಾವರಣ ಇದ್ದು, ಬಳಿಕ ರಣಬಿಸಿಲು ಮುಂದುವರೆದಿದೆ. ಸಂಜೆವರೆಗೂ ಇದೇ ರೀತಿಯ ವಾತಾವರಣ ಇರಲಿದೆ ಎನ್ನುವ ಮುನ್ಸೂಚನೆ ಇದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಇಂದು ಬಹುತೇಕ ಭಾಗಗಳಲ್ಲಿ ತಾಪಮಾನ 35-39 ಡಿಗ್ರಿ ಸೆಲ್ಸ್ಯಸ್ವರೆಗೆ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆ ಈ ವಾರಂತ್ಯದಲ್ಲಿ ತಮಿಳುನಾಡು, ಹಿಮಾಚಲಪ್ರದೇಶ, ಉತ್ತರಾಖಂಡ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೇಸಿಗೆಗೂ ಮುನ್ನ ಫೆಬ್ರವರಿಯಲ್ಲೇ ಹಲವೆಡೆ ಅತೀ ಹೆಚ್ಚು ತಾಪಮಾನ ದಾಖಲಾಗಿದೆ. ಇದರಿಂದ ಜನರು ಬೇಸತ್ತಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಂತೂ ತಾಪಮಾನದಲ್ಲಿ ಭಾರೀ ಏರಿಕೆಯಾಗುತ್ತಲೇ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಈಗಾಗಲೇ ತಾಪಮಾನ 39 ಡಿಗ್ರಿಯವರೆಗೆ ತಲುಪಿದೆ.
ಈ ನಡುವೆಯೇ ಕರಾವಳಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇದ್ದು, ಕೆಲವೆಡೆ ತುಂತುರು ಮಳೆ ಸುರಿಯುವ ಸಾಧ್ಯತೆಯಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ದಕ್ಷಿಣ ಕನ್ನಡದಲ್ಲಿ ಮೋಡ, ಬಿಸಿಲಿನ ಕಣ್ಣಾಮುಚ್ಚಾಲೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಳೆದ ವರ್ಷ ಅಂದರೆ 2024ರ ಜೂನ್ ಆರಂಭವಾಗುತ್ತಿದ್ದಂತೆ ಮುಂಗಾರು ಮಳೆ ಆರ್ಭಟಿಸಿದ ಪರಿಣಾಮ ರಾಜ್ಯದಲ್ಲಿನ ಪ್ರಮುಖ ಜಲಾಶಯಗಳು, ಕೆರೆ-ಕಟ್ಟೆಗಳು, ಹಳ್ಳಗಳು ತುಂಬಿ ಹರಿದಿದ್ದವು.
ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಇದೀಗ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸಂಪೂರ್ಣ ನೀರು ಇರುವ ಹಿನ್ನೆಲೆ ಈ ಬಾರಿ ನೀರಿನ ಅಬಾವ ಎದುರಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಆದರೂ ಈ ಬಾರಿ ಅಂದರೆ, 2025ರಲ್ಲಿ ಉತ್ತಮ ಮಳೆಯಾದರೆ, ಜಲಾಶಯಗಳು ಮತ್ತೆ ತುಂಬುವುದರಲ್ಲಿ ಯಾವುದೇ ಅನುಮಾನವಿಲ್ಲ.
ಈ ಬಾರಿ ಮೈಲಾರಲಿಂಗೇಶ್ವರನ ಕಾರ್ಣಿಕ ತುಂಬಿದ ಕೊಡ ತುಳುಕಿತಲೇ ಪರಾಕ್ ಎಂಬ ಭವಿಷ್ಯವಾಗಿ ಆಗಿದೆ. ಇದರ ಅರ್ಥ ವಿಶ್ಲೇಕರ ಪ್ರಕಾರ, ಉತ್ತಮ ಮಳೆ, ಬೆಳೆ ಆಗುತ್ತದೆ. ಆದರೆ ಭಾರೀ ಮಳೆಯಿಂದ ಬೆಳೆಗಳು ಕಿಚ್ಚಿಕೊಂಡು ಹೋಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅಂದರೆ ಅತೀವೃಷ್ಟಿಯಾಗುವ ಸಾಧ್ಯತೆಯಿದೆ ಎಂದರ್ಥ.
ತಾಪಮಾನ ದಾಖಲೆಯ ವಿವರ: ಕಾರವಾರ, ಪಣಂಬೂರು, ಮಂಗಳೂರು, ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಿಂತಾಮಣಿ, ಮಡಿಕೇರಿ, ಶಿವಮೊಗ್ಗ, ಮೈಸೂರು, ಮಂಡ್ಯದಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗಿದೆ.
ಗರಿಷ್ಠ ತಾಪಮಾನ ಕರಾವಳಿಯಲ್ಲಿ 36-39 ಡಿಗ್ರಿ ಸೆಲ್ಸಿಯಸ್ ಇದೆ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಮತ್ತು ಹಾವೇರಿಯಲ್ಲಿ 33-36 ಡಿಗ್ರಿ ಸೆಲ್ಸಿಯಸ್, ಕಲಬುರಗಿ, ಚಿಕ್ಕಮಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್, ಚಿಂತಾಮಣಿ, ಮಡಿಕೇರಿ, ಶಿವಮೊಗ್ಗ, ಮೈಸೂರು, ಆಗುಂಬೆ, ದಾವಣಗೆರೆ, ಮಂಡ್ಯದಲ್ಲಿ 34-35 ಡಿಗ್ರಿ ಸೆಲ್ಸಿಯಸ್ನಷ್ಟಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ ನಿನ್ನೆ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications