Karnataka Rains: ಕೆಲವೇ ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ರೌದ್ರಾವತಾರ ತಾಳಲಿದ್ದಾನೆ ಮಳೆರಾಯ
Karnataka Rains: ರಾಜ್ಯದಲ್ಲಿ ಮಳೆರಾಯ ಮತ್ತೆ ಆರ್ಭಟವನ್ನು ಶುರು ಮಾಡಿದ್ದಾನೆ. ಕಳೆದ ಒಂದು ವಾರದಿಂದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಇದೀಗ ಮತ್ತೆ ಯಥಾಸ್ಥಿತಿಗೆ ಬರುತ್ತಿದೆ. ಮತ್ತೊಂದೆಡೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆ ಸುರಿಯುತ್ತಿದೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ರಣ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.
ರಾಜ್ಯ ರಾಜಧಾನಿಯಲ್ಲಿ ಇಂದು (ಅಕ್ಟೋಬರ್ 17) ಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದಿಂದ ಬಿಸಿಲಿನ ವಾತಾವರಣ ಮುಂದುವರೆದಿದಿದೆ. ಇನ್ನು ಸಂಜೆ ಅಥವಾ ರಾತ್ರಿ ವೇಳೆಗೆ ನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಈಗಾಗಲೇ ಕಳೆದ ಮೂರು ದಿನಗಳಿಂದ ನಗರದಲ್ಲಿ ಕತ್ತಲಿನ ವಾತಾವರಣ ನಿರ್ಮಾಣವಾಗಿ ಮಳೆರಾಯನ ಬಿಡುವಿಲ್ಲದೇ ಅಬ್ಬರಿಸಿದ್ದ. ಆದರೆ ಇಂದು ಮೋಡ ಸರಿದು ಸೂರ್ಯ ಪ್ರತ್ಯಕ್ಷ ಆಗಿದ್ದಾನೆ. ಇನ್ನೂ ಬಹುತೇಕ ಜಿಲ್ಲೆಗಳಲ್ಲೂ ಕೂಡ ಮಳೆರಾಯ ಇಂದು (ಅಕ್ಟೋಬರ್ 17) ಸ್ವಲ್ಪ ಮಟ್ಟಿಗೆ ಬಿಡುವು ನೀಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದರ ನಡುವೆಯೂ ಹಲವು ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬಂಗಾಳ ಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಅಬ್ಬರಿಸಿದ್ದ ಮಳೆ ಇದೀಗ ಸ್ವಲ್ಪ ಮಟ್ಟಿಗೆ ತಗ್ಗಿದೆ. ಇದರ ನಡುವೆಯೂ ಉತ್ತರ ಒಳನಾಡಿನ ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಗೆಯೇ ಇಂದು ಇನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾಸನ, ಕೊಡಗು, ಬೀದರ್, ಧಾರವಡ, ಬೆಳಗಾವಿ, ಬಳ್ಳಾರಿ, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಈ ಬಾರಿ ಮುಂಗಾರು ರಾಜ್ಯಕ್ಕೆ ಜೂನ್ ಆರಂಭದಲ್ಲಿ ಎಂಟ್ರಿ ಕೊಟ್ಟಿದ್ದು, ರಾಜ್ಯದೆಲ್ಲೆಡೆ ವ್ಯಾಪಕವಾಗಿ ಭಾರೀ ಮಳೆಯಾಗಿತ್ತು. ಈ ಹಿನ್ನೆಲೆ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ಪ್ರಮುಖ ಜಲಾಶಯಗಳು ತುಂಬಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮತ್ತೊಂದೆಡೆ ನೋಡುವುದಾದರೆ, ಭಾರೀ ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳು ಕೂಡ ಸೃಷ್ಟಿಯಾಗಿದ್ದವು.
ಅದೇನೇ ಇರಲಿ ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ರೈತರ ಮುಖದಲ್ಲಿ ಮಂದಹಾಸವೇ ಇಲ್ಲದಂತಾಗಿತ್ತು. ಆದರೆ, ಈ ಬಾರೀ ಅಂದರೆ, 2024ರ ಜೂನ್ ಆರಂಭವಾಗುತ್ತಿದ್ದಂತೆ ಗ್ರಾಂಡ್ ಎಂಟ್ರಿ ಕೊಟ್ಟ ಮುಂಗಾರು ಕೆರೆ-ಕಟ್ಟೆಗಳು, ಜಲಾಶಯಗಳು ತುಂಬಿ ಬೋರ್ಗರೆಯುವಂತೆ ಮಾಡಿದ್ದು, ಇದರಿಂದ ಅನ್ನದಾತ ಸಂತೃಪ್ತಿಯಾಗಿದ್ದಾನೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರಿಸಿ ಬೊಬ್ಬೆರೆದಿದ್ದ.












Click it and Unblock the Notifications