Karnataka Rains: ಭೂಮೇಲ್ಮೈ ಸ್ಟ್ರಫ್ ಸೃಷ್ಟಿ, ಮುಂದಿನ ಮೂರು ದಿನ ಆಲಿಕಲ್ಲು ಸಹಿತ ಮಳೆ, 13 ಜಿಲ್ಲೆಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಮೇ 22: ಭೂ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಲಿಕಲ್ಲು ಸಹಿತ ಭಾರೀ ಮಳೆ ಆಗುತ್ತಿದೆ. ಇದು ಮುಂದಿನ ಮೂರು ದಿನ ಮುಂದುವರಿಯುವ ನಿರೀಕ್ಷೆ ಇದೆ. ಕೆಲವು ಜಿಲ್ಲೆಗಳಿಗೆ ಸಾಧಾರಣದಿಂದ ಉತ್ತಮವಾಗಿ ಮಳೆ ಸುರಿಯಲಿದ್ದು, 13 ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತ ಹಾವಳಿ ಕಡಿಮೆಯಾಗುತ್ತಿದ್ದಂತೆ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿಯಿಂದ ಜೋರು ಮಳೆಯ ಆಗಮನವಾಗುತ್ತಿದೆ. ಕರ್ನಾಟಕದ ಒಳನಾಡಿನ ಮೂಲಕ ದಕ್ಷಿಣ ತಮಿಳುನಾಡುವರೆಗೆ ಮೇಲ್ಮೈ ಸುಳಿಗಾಳಿ (ಸ್ಟ್ರಫ್) ಸೃಷ್ಟಿಯಾಗಿದೆ. ಇದು ಭೂಮಿಯಿಂದ ಸುಮಾರು 900 ಮೀಟರ್ ನಷ್ಟು ಎತ್ತರವಿದೆ. ಇದರ ಪ್ರಭಾವದಿಂದ ಒಳನಾಡಿನ ಕೆಲವು ಜಿಲ್ಲೆಗಳಿಗೆ ಸಾಧಾರಣ ಮಳೆ, ಇನ್ನು ಕೆಲವೆಡೆ ಆಲಿಕಲ್ಲು ಸಹಿ ಧಾರಾಕಾರ ಮಳೆ ದಾಖಲಾಗಿದೆ ಎಂದು ಹವಾಮಾನ ತಜ್ಞ ಡಾ.ಪ್ರಸಾದ್ ಹೇಳಿದ್ದಾರೆ.

ಮುಂದಿನ ಮೂರು ದಿನ ಅಂದರೆ ಮೇ 25ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ ಮುಂದುವರಿಯಲಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಮಳೆ ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ವ್ಯಾಪಕ ಮಳೆ ಸಾಧ್ಯತೆ ಇದೆ. ಇನ್ನೂ ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಬೀದರ್, ಕೊಪ್ಪಳ, ಕಲಬುರಗಿ ಸೇರಿದಂತೆ ಇನ್ನಿತರ ಜಿಲ್ಲೆಗಳ ಪ್ರದೇಶಗಳಲ್ಲಿ ಉತ್ತಮ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
13ಜಿಲ್ಲೆಗಳಿಗೆ 2 ದಿನ ಯೆಲ್ಲೋ ಅಲರ್ಟ್
ಮುಂದಿನ 48ಗಂಟೆ ರಾಜ್ಯದ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ತುಮಕೂರು ಜಿಲ್ಲೆಗಳಿಗೆ ಎರಡು ದಿನ ಹಾಗೂ ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಿಗೆ ಮಂಗಳವಾರ ಒಂದು ದಿನ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ಭಾಗಗಳಲ್ಲಿ ಭಾರಿ ಮಳೆ ಸುರಿಯಲಿದೆ.
ಗಾಳಿಯ ವೇಗದಲ್ಲಿ ಏರಿಕೆ
ಕಳೆದ 24 ಗಂಟೆಗಳಲ್ಲಿ ಭಾರೀ ಮಳೆ ಜೊತೆಗೆ ಬಿರುಗಾಳಿ ಬೀಸುತ್ತಿದೆ. ಗಾಳಿಯ ವೇಗ ಮೊದಲಿಗಿಂತಲೂ ಹೆಚ್ಚಾಗಿದೆ. ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ 12 ಸೆಂಟಿ ಮೀಟರ್ ಮಳೆ ಬಿದ್ದಿದೆ. ಶಿರಾದಲ್ಲಿ 06 ಸೆಂ.ಮೀ, ರಾಮನಗರ 05ಸೆಂ.ಮೀ, ಬೆಂಗಳೂರು ನಗರದಲ್ಲಿ 04 ಸೆಂ.ಮೀ. ಮಳೆ ದಾಖಲಾಗಿದೆ.

ಮಳೆಗೆ ಬೆಂಗಳೂರಿನಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಪ್ರಮುಖ ರಸ್ತೆಗಳೇ ಜಲಾವೃತಗೊಂಡಿವೆ. ಇತ್ತ ಚಿಕ್ಕಮಗಳೂರಿನ ಚಿಕ್ಕಹಳ್ಳದಲ್ಲಿ ಮರ ಬಿದ್ದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾನೆ. ಚಾಮರಾಜನಗರದಲ್ಲಿ ಮನೆಗಳ ಮೇಲೆ ಮರ ಬಿದ್ದು ಗೋಡೆ ಕುಸಿದಿದೆ. ಕ್ರೀಡಾಂಗಣಗಳು ಮಳೆ ನೀರು ತುಂಬಿ ನದಿಯಂತಾಗಿವೆ.
ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಗರಿಷ್ಠ ತಾಪಮಾನ 33 ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ.












Click it and Unblock the Notifications