ಉಕ್ರೇನ್ನಲ್ಲಿ ನವೀನ್ ಸಾವಿಗೆ ನೀಟ್ ಕಾರಣ: ನಾರಾಯಣಗೌಡ
ಕನ್ನಡದ ಹುಡುಗ ನವೀನ್ ಶೇಖರಪ್ಪ ಉಕ್ರೇನ್ ನಲ್ಲಿ ರಷ್ಯಾ ಪಡೆಗಳ ದಾಳಿಗೆ ಸಿಲುಕಿ ಮೃತಪಟ್ಟಿದ್ದಾನೆ, ಈ ಸಾವಿನ ಹೊಣೆ ಹೊರುವವರು ಯಾರು? ಒಂದೆಡೆ ಸೀಟಿಗೆ ಕೋಟಿಗಟ್ಟಲೆ ಹಣ ಬಾಚುವ ಕ್ಯಾಪಿಟೇಷನ್ ಲಾಬಿ, ಇನ್ನೊಂದೆಡೆ ಕನ್ನಡಿಗರ ಹಕ್ಕುಗಳನ್ನು ಕಸಿಯುತ್ತಿರುವ ನೀಟ್ ಎಂಬ ಷಡ್ಯಂತ್ರ. ಬಲಿಯಾಗುತ್ತಿರುವುದು ಕನ್ನಡಿಗರು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ ಆರೋಪಿಸಿದ್ದಾರೆ.
ಸ್ವಾತಂತ್ರ್ಯಾನಂತರ ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ದೇಶದ ಇತರೆಲ್ಲ ರಾಜ್ಯಗಳಿಗಿಂತ ಹೆಚ್ಚು ಸಾಧಿಸಿರುವುದು ಕರ್ನಾಟಕ ರಾಜ್ಯ. ಒಟ್ಟು 69 ಮೆಡಿಕಲ್ ಕಾಲೇಜುಗಳೊಂದಿಗೆ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಆದರೆ ಕನ್ನಡದ ಮಕ್ಕಳಿಗೇ ಮೆಡಿಕಲ್ ಸೀಟು ಇಲ್ಲ. ನೀಟ್ ಹೆಸರಲ್ಲಿ ನಮ್ಮ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ.
21 ಕೋಟಿ ಜನಸಂಖ್ಯೆಯ ಉತ್ತರಪ್ರದೇಶ ರಾಜ್ಯದಲ್ಲಿ 6.5 ಕೋಟಿ ಜನಸಂಖ್ಯೆಯ ಕರ್ನಾಟಕದಲ್ಲಿ ಇರುವಷ್ಟು ಮೆಡಿಕಲ್ ಕಾಲೇಜುಗಳು ಇಲ್ಲ! ನೀಟ್ ಜಾರಿಗೆ ಬಂದಿದ್ದು ಈ ಕಾರಣಕ್ಕೆ. ಕರ್ನಾಟಕದ ಕಾಲೇಜುಗಳಲ್ಲಿ ಉತ್ತರ ಭಾರತೀಯರನ್ನು ತುಂಬುವ ಯೋಜನೆಯೇ ನೀಟ್. ಮತ್ತೇನೂ ಅಲ್ಲ.

75 ವರ್ಷಗಳಿಂದ ಕನ್ನಡದ ನೆಲದಲ್ಲಿ, ಕನ್ನಡಿಗರ ದುಡ್ಡಿನಲ್ಲಿ, ಕನ್ನಡಿಗರ ಪರಿಶ್ರಮದಿಂದ ಅರವತ್ತಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಸ್ಥಾಪನೆಯಾಗಿವೆ. ಆದರೆ ನೀಟ್ ನಿಂದಾಗಿ ಮೊದಲಿನ ಹಾಗೆ ಕನ್ನಡಿಗರಿಗೆ ಸುಲಭ ಪ್ರವೇಶವಿಲ್ಲ. ಈ ಯಾವ ವ್ಯವಸ್ಥೆಯನ್ನೂ ಮಾಡಿಕೊಳ್ಳದ ರಾಜ್ಯಗಳ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನಡೆಸಬೇಕು.
ನೀಟ್ ನಿಂದಾಗಿ ಮೆಡಿಕಲ್ ಸೀಟು ಸಿಗದೆ ಹಲವಾರು ಪ್ರತಿಭಾವಂತ ಕನ್ನಡದ ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಮ್ಮ ಕನ್ನಡದ ಮಕ್ಕಳಿಗೆ ಕರ್ನಾಟಕದಲ್ಲಿಯೇ ಅವಕಾಶ ಸಿಗದೆ ಸಾಯುವಂತೆ ಮಾಡುತ್ತಿರುವ ಈ ಕೆಟ್ಟ ವ್ಯವಸ್ಥೆ ನಮಗೆ ಬೇಕೆ? ಇದೆಂಥ ನ್ಯಾಯ? ಇದನ್ನೆಲ್ಲ ನೋಡಿಕೊಂಡು ನಾವು ಸುಮ್ಮನಿರಬೇಕೆ?
Recommended Video
ನೀಟ್ ವಿಷಯದಲ್ಲಿ ತಮಿಳುನಾಡು ಮೊದಲಿನಿಂದಲೂ ಧ್ವನಿ ಎತ್ತುತ್ತ ಬಂದಿದೆ. ನಮ್ಮ ಕರ್ನಾಟಕದ ರಾಜಕಾರಣಿಗಳಿಗೆ ಇದರ ಅರಿವೂ ಇಲ್ಲ. ಕನ್ನಡಿಗರ ಹಿತಾಸಕ್ತಿ ಕಾಪಾಡಬೇಕಾದ ರಾಜಕೀಯ ಪಕ್ಷಗಳು ಕನ್ನಡಿಗರ ಪಾಲಿಗೆ ಸತ್ತು ಹೋಗಿವೆ. ಇದರ ಪರಿಣಾಮವಾಗಿ ಕನ್ನಡದ ಮಕ್ಕಳು ನಲುಗುವಂತಾಗಿದೆ.












Click it and Unblock the Notifications