Karnataka Ratna : ಪುನೀತ್ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ದಿನಾಂಕ ಘೋಷಣೆ
ಬೆಂಗಳೂರು, ಆಗಸ್ಟ್, 05: "ದಿವಂಗತ ನಟ ಡಾ. ಪುನೀತ್ ರಾಜ್ಕುಮಾರ್ಗೆ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಬೆಂಗಳೂರಿನ ಲಾಲ್ಬಾಗ್ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಬಸವರಾಜ ಬೊಮ್ಮಾಯಿ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, "ಪ್ರಶಸ್ತಿ ಕೊಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು. ರಾಜ್ಕುಮಾರ್ ಅವರ ಕುಟುಂಬದ ಸದಸ್ಯರು ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು" ಎಂದರು.

"1922ರಿಂದ ಫಲಪುಷ್ಪ ಪ್ರದರ್ಶನ ನಿರಂತರವಾಗಿ ನಡೆಯುತ್ತಿದೆ. ಪ್ರತಿ ವರ್ಷ ಅತಿ ಹೆಚ್ವು ಜನರನ್ನು ಆಕರ್ಷಿಸುತ್ತಿದೆ. ಈ ಬಾರಿ ಸ್ವಾತಂತ್ರ್ಯೋತ್ಸವದ ಅಮೃತ ವರ್ಷಾಚರಣೆಯ ಅಂಗವಾಗಿ ಸಂಭ್ರಮ ತುಂಬಿದೆ. ಫಲಪುಷ್ಪ ಪ್ರದರ್ಶನಕ್ಕೆ ವಿಶೇಷ ಕಳೆ ಬಂದಿದೆ. ಮುಂದಿನ 10 ದಿನಗಳ ಕಾಲ ಪ್ರತಿ ದಿನ ಲಕ್ಷಾಂತರ ಜನ ಬರುವ ನಿರೀಕ್ಷೆ ಇದೆ" ಎಂದು ಮುಖ್ಯಮಂತ್ರಿಗಳು ಹೇಳಿದರು.
"ಈ ಬಾರಿ ಡಾ. ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥ ವಿಶೇಷವಾದ ಪ್ರದರ್ಶನ ಏರ್ಪಟ್ಟಿದೆ. ಹಾಗಾಗಿ ಇನ್ನಷ್ಟು ಜನರನ್ನು ಫಲಪುಷ್ಪ ಪ್ರದರ್ಶನ ಆಕರ್ಷಿಸುವ ನಿರೀಕ್ಷೆ ಇದೆ. ತೋಟಗಾರಿಕಾ ಇಲಾಖೆ ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ಅಧಿಕಾರಿಗಳು ಉತ್ತಮವಾಗಿ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಬೇಕು" ಎಂದು ಕರೆ ನೀಡಿದರು.
ಪುನೀತ್ ರಾಜ್ಕುಮಾರ್ ಬಾಲ್ಯದಿಂದಲೂ ಸಾಧನೆಯ ಹಾದಿಯವರಿಗೂ ಜನರ ಮನಸ್ಸನ್ನು ಸೂರೆ ಮಾಡವ ರೀತಿಯಲ್ಲಿ ವೈಭವಯುತವಾಗಿ ಈ ಬಾರಿಯ ಪ್ರದರ್ಶನವನ್ನು ಆಯೋಜಿಸಲಾಗಿದೆ. 212ನೇ ಫಲಪುಷ್ಪ ಪ್ರದರ್ಶನವನ್ನು ಬಹಳ ವಿಶಿಷ್ಟವಾಗಿ ಆಯೋಜಿಸಲಾಗಿದೆ.

ಗಾಜಿನ ಮನೆಯ ಸುತ್ತಲೂ ಡಾ. ಪುನೀತ್ ರಾಜ್ಕುಮಾರ್ ಮತ್ತು ಅವರ ತಂದೆ ಡಾ. ರಾಜ್ಕುಮಾರ್ ಅವರ ಫೋಟೋಗಳು ರಾರಾಜಿಸುತ್ತಿದ್ದು, ಗಮನ ಸೆಳೆದಿವೆ. ಎಲ್ಲ ವರ್ಷಕ್ಕಿಂತಲೂ ಈ ವರ್ಷ ಫಲಪುಷ್ಪ ಪ್ರದರ್ಶನವನ್ನು ನೋಡಲು ಹೆಚ್ಚಾಗಿ ಜನರು ಸೇರುವ ಸಾಧ್ಯತೆ ಇದೆ.












Click it and Unblock the Notifications