ರಾಜ್ಯದ ಆರ್ಥಿಕತೆ ನೋಡಿಯೇ ₹10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ: ಸಿದ್ದರಾಮಯ್ಯ
ರಾಜ್ಯದ ಆರ್ಥಿಕತೆ ಕುಸಿಯುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ, ಹಣಕಾಸಿನ ವ್ಯವಸ್ಥೆ ನೆಲ ಕಚ್ಚಿದೆ ಎಂದೆಲ್ಲ ಆರೋಪಿಸಿ ಬಿಜೆಪಿ ನಾಯಕರು ಮಾತನಾಡಿದ್ದಾರೆ. ಆ ಮೂಲಕ ಜನರನ್ನು ಸಶಕ್ತಗೊಳಿಸುತ್ತಿರುವ ನಮ್ಮ ಗ್ಯಾರಂಟಿ ಹಾಗೂ ಇನ್ನಿತರೆ ಯೋಜನೆಗಳನ್ನು ಟೀಕಿಸಿದ್ದಾರೆ. ವಾಸ್ತವವೇನೆಂದರೆ, ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸುತ್ತಿದ್ದಾಗ ನಮ್ಮ ಆರ್ಥಿಕ ವ್ಯವಸ್ಥೆಯನ್ನು ಪಾತಾಳಕ್ಕೆ ಕುಸಿಯುವಂತೆ ಮಾಡಿದ್ದರು. ಆದರೆ ವಿರೋಧ ಪಕ್ಷದಲ್ಲಿ ಕೂತು ದೊಡ್ಡ ಅರ್ಥಶಾಸ್ತ್ರಜ್ಞರಂತೆ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬಿಜೆಪಿಯವರ ಅರಾಜಕ ಆರ್ಥಿಕ ನಿರ್ವಹಣೆಗಳಿಂದಾಗಿ ಪಾತಾಳದತ್ತ ಕುಸಿಯುತ್ತಿದ್ದ ರಾಜ್ಯದ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಇದನ್ನು ಸಹಿಸಿಕೊಳ್ಳಲಾಗದೆ ಅಥವಾ ಅರಿತುಕೊಳ್ಳಲಾರದೆ ಬಿಜೆಪಿಯವರು ಮಾತಾಡುತ್ತಿರುವುದು ದುರಂತ. ಸರ್ಕಾರ ಆಡಳಿತ ನಡೆಸುತ್ತಿದ್ದಾಗ ಬಜೆಟ್ಗಳಲ್ಲಿ ನಿಗದಿ ಮಾಡಿದ್ದಕ್ಕಿಂತ ಏಳು ಪಟ್ಟು ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ತೆಗೆದುಕೊಂಡಿದ್ದರು. ಕಾಮಗಾರಿಗಳನ್ನು ಬೇಕಾಬಿಟ್ಟಿ ತೆಗೆದುಕೊಂಡು ಅನುದಾನ ಒದಗಿಸದೆ ಬಿಟ್ಟು ಹೋಗಿದ್ದಾರೆ. ಬಿಜೆಪಿ ಸರ್ಕಾರದ ಈ ಆರ್ಥಿಕ ದುರಾಡಳಿತ, ಬೇಜವಾಬ್ದಾರಿತನ, ಭ್ರಷ್ಟಾಚಾರಯುತ ಕಾಮಗಾರಿಗಳ ನಿರ್ವಹಣೆಯನ್ನು ಕೇವಲ ಒಂದೆರಡು ವರ್ಷಗಳಲ್ಲಿ ದುರಸ್ತಿ ಮಾಡಲು ಸಾಧ್ಯವೆ? ಎಂದು ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಕರ್ನಾಟಕದಿಂದ ವರ್ಷಕ್ಕೆ 4.5 ಲಕ್ಷ ಕೋಟಿಗೂ ಹೆಚ್ಚಿನ ತೆರಿಗೆ ಸಂಗ್ರಹಿಸುತ್ತಿದೆ. ಇದರಲ್ಲಿ ಬಿಡಿಗಾಸನ್ನು ಮಾತ್ರ ರಾಜ್ಯಕ್ಕೆ ಕೊಡುತ್ತಿದೆ. ಈ ಕುರಿತು ಬಿಜೆಪಿ ನಾಯಕರು ಎಂದಾದರೂ ಬಾಯಿ ಬಿಟ್ಟಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ಇಷ್ಟರ ನಡುವೆಯೂ ರಾಜ್ಯದ ಆರ್ಥಿಕತೆ ಸಧೃಡವಾಗಿದೆ. ನಮ್ಮ ಎರಡು ವರ್ಷಗಳ ಬಜೆಟ್ ಗಾತ್ರದ ಸರಾಸರಿ ಬೆಳವಣಿಗೆ ಶೇ.18.3 ರಷ್ಟಿದೆ. ಬಿಜೆಪಿಯ 4 ವರ್ಷಗಳ ಅಧಿಕಾರಾವಧಿಯಲ್ಲಿ ಕೇವಲ ಶೇ 5ರಷ್ಟಿತ್ತು. ರಾಜ್ಯದ ಸ್ವಂತ ತೆರಿಗೆಯ ಬೆಳವಣಿಗೆ ಶೇ 15ರಷ್ಟಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ 11ರಷ್ಟು ಮಾತ್ರ ಇತ್ತು ಎಂದು ಲೆಕ್ಕ ಬಿಚ್ಚಿಟ್ಟಿದ್ದಾರೆ.
ನಮ್ಮ ಬಂಡವಾಳ ವೆಚ್ಚವೂ ಸಹ ನಮ್ಮ ಅಕ್ಕಪಕ್ಕದಲ್ಲಿರುವ ಪ್ರಗತಿಪರವೆನ್ನಿಸಿಕೊಂಡ ರಾಜ್ಯಗಳಿಗಿಂತ ಉತ್ತಮವಾಗಿದೆ. ಬಿಜೆಪಿಯವರು ಎಷ್ಟೇ ಪಿತೂರಿ ಮಾಡಿ ಕರ್ನಾಟಕಕ್ಕೆ ನಿರಂತರವಾಗಿ ದ್ರೋಹ ಮಾಡುತ್ತಿದ್ದರೂ ಸಹ ಕರ್ನಾಟಕವು ತಲೆ ಎತ್ತಿ ನಿಲ್ಲುತ್ತಿದೆ. ದೆಹಲಿಯಲ್ಲಿರುವ ಕೇಂದ್ರ ಸರ್ಕಾರದ ದ್ರೋಹಗಳನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ. ನಮ್ಮ ಆರ್ಥಿಕತೆಯನ್ನು ಉಳಿಸಿ ಬೆಳೆಸುವುದು ಹೇಗೆ ಎಂದು ನಮಗೆ ಗೊತ್ತಿದೆ ಎಂದಿದ್ದಾರೆ.

ಬೊಮ್ಮಾಯಿ ಅವರು ಜಲಸಂಪನ್ಮೂಲ ಸಚಿವರಾಗಿದ್ದರೂ ಸಹ ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೊಡಬೇಕಾದ ಅನುದಾನಗಳನ್ನು ಕೊಡಲಿಲ್ಲ. ಆದರೆ ನಮ್ಮ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಮಾಡಿ ಮುಗಿಸಲು ತೀರ್ಮಾನಿಸಿದೆ. ನಮ್ಮ ಆರ್ಥಿಕತೆ ಚೆನ್ನಾಗಿದೆ, ನಮ್ಮ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬ ಕಾರಣಕ್ಕೆ ಇತ್ತೀಚೆಗೆ ನಡೆದ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ 10.27 ಲಕ್ಷ ಕೋಟಿಗಳಿಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಒಪ್ಪಂದಗಳಾಗಿವೆ. ಇದನ್ನೆಲ್ಲ ಗಮನಿಸಿಯೆ ರಾಜಕೀಯ ಕಾರಣಗಳಿಂದ ಬಿಜೆಪಿಯವರು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಕುರಿತು ಟೀಕೆಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ. ಮತ್ತೊಮ್ಮೆ ತಿಳಿಸಬಯಸುವುದೇನೆಂದರೆ ನಮ್ಮ ರಾಜ್ಯದ ಆರ್ಥಿಕತೆ ಬಿಜೆಪಿಯ ದ್ರೋಹವನ್ನು ಮೆಟ್ಟಿ ನಿಲ್ಲುವಷ್ಟು ಸದೃಢವಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.












Click it and Unblock the Notifications