ಕರ್ನಾಟಕ ಸಂಭ್ರಮ-50; ಗೀತ ಗಾಯನ ಮೂಲಕ ನುಡಿ ನಮನ ಸಲ್ಲಿಸಲು ಸುತ್ತೋಲೆ
ಬೆಂಗಳೂರು, ಅಕ್ಟೋಬರ್ 20: ಕರ್ನಾಟಕ ಸರ್ಕಾರ 'ಕರ್ನಾಟಕ ಸಂಭ್ರಮ-50' ಆಚರಣೆ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರ 2023-24ನೇ ಸಾಲಿನ ಬಜೆಟ್ನಲ್ಲಿ 'ಕರ್ನಾಟಕ ಸಂಭ್ರಮ 50' 'ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ' ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಆಯೋಜಿಸುವ ಘೋಷಣೆ ಮಾಡಿದೆ.
ಡಾ. ಎನ್. ಮಂಜುಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ 'ಕರ್ನಾಟಕ ಸಂಭ್ರಮ-50' ಆಚರಣೆ ಕುರಿತು ಎಲ್ಲಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್ ಇವರಿಗೆ ಸುತ್ತೋಲೆ ಕಳಿಸಿದ್ದಾರೆ.

ಈ ಸುತ್ತೋಲೆಯು 'ಕರ್ನಾಟಕ ಸಂಭ್ರಮ-50'ರ ಲಾಂಛನವನ್ನು ಹಾಗೂ 2023 ನವೆಂಬರ್ 01 ರಂದು ಆಚರಿಸುವ ರಾಜ್ಯೋತ್ಸವ ವೇಳಾಪಟ್ಟಿಯಲ್ಲಿ ಕನ್ನಡಾಂಬೆಗೆ ನುಡಿನಮನ (ಗೀತಗಾಯನ) ಕಾರ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.
ಸುತ್ತೋಲೆಯ ವಿವರಗಳು; ಮುಖ್ಯಮಂತ್ರಿಗಳು 2023-24ನೇ ಸಾಲಿನ ಆಯವ್ಯಯದಲ್ಲಿ ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 1ನೇ ನವೆಂಬರ್-2023ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ - ಕನ್ನಡಿಗ - ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಘೋಷಣೆ ಮಾಡಿರುತ್ತಾರೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 'ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ' ಅಭಿಯಾನದ ನಿಮಿತ್ತವಾಗಿ 2023 ನವೆಂಬರ್ 01 ರಿಂದ 2024 ನವೆಂಬರ್ ವರೆಗೆ ರಾಜ್ಯಾದ್ಯಂತ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ದಿನಾಂಕ 04/10/2023ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ ಎಂದು ಸುತ್ತೋಲೆಯಲ್ಲಿ ವಿವರಣೆ ನೀಡಲಾಗಿದೆ.
ದಿನಾಂಕ 17/10/2023ರಂದು ಕರ್ನಾಟಕ ಸಂಭ್ರಮ-50ರ ಅಭಿಯಾನದ ಲಾಂಛನವನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದು, ಸದರಿ ಲಾಂಛನವನ್ನು ಎಲ್ಲಾ ಸರ್ಕಾರಿ/ ಅರೆ ಸರ್ಕಾರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ, ಬ್ಯಾನರ್ ಹಾಗೂ ಪತ್ರಗಳ ಮೇಲೆ ಮುದ್ರಿಸಿ ಉಪಯೋಗಿಸುವಂತೆ ತಿಳಿಸಲಾಗಿದೆ.
ನವೆಂಬರ್ 01ರಂದು ರಾಜ್ಯದಲ್ಲೆಡೆ ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ-50 ಅಭಿಯಾನದ ಅಂಗವಾಗಿ ಆಯ್ಕೆಮಾಡಿರುವ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ನುಡಿ ನಮನ (ಗೀತ ಗಾಯನ) ಸಲ್ಲಿಸುವುದು ಸರ್ಕಾರದ ಉದ್ದೇಶವಾಗಿರುತ್ತದೆ ಎಂದು ವಿವರಿಸಲಾಗಿದೆ.
ಆದ್ದರಿಂದ, ರಾಜ್ಯದ ಎಲ್ಲಾ ಜಿಲ್ಲಾಮಟ್ಟ, ತಾಲ್ಲೂಕು ಮಟ್ಟ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ 01 ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ 5 ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸುವುದು ಎಂದು ತಿಳಿಸಲಾಗಿದೆ.
1. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾಯರು
2. ಎಲ್ಲಾದರು ಇರು ಎಂತಾದರು ಇರು - ಕುವೆಂಪು
3. ಒಂದೇ ಒಂದೇ ಕರ್ನಾಟಕ ಒಂದೇ - ದ. ರಾ. ಬೇಂದ್ರೆ
4. ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ - ಚನ್ನವೀರ ಕಣವಿ
5. ಹೊತ್ತಿತೋ ಹೊತ್ತಿತು ಕನ್ನಡದ ದೀಪ - ಸಿದ್ದಯ್ಯ ಪುರಾಣಿಕ
ಸದರಿ ಹಾಡುಗಳಿಗೆ ಸಂಬಂಧಿಸಿದ ಆಡಿಯೋ ಲಿಂಕ್ ಅನ್ನು ಹಾಗೂ ಲಾಂಛನದ ಡಿಜಿಟಲ್ ಪ್ರತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರ ಮೂಲಕ ನೀಡಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಮುಂದುವರೆದು, ಶಾಲಾ ಕಾಲೇಜು, ವಿಶ್ವವಿದ್ಯಾಲಯಗಳು, ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿಗಳ ಕಚೇರಿಗಳು, ಬ್ಯಾಂಕ್ಗಳು ಹಾಗೂ ಸಂಘ ಸಂಸ್ಥೆಗಳು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಅಳವಡಿಸಿಕೊಂಡು ಕಡ್ಡಾಯವಾಗಿ ಮೇಲಿನ ಹಾಡುಗಳನ್ನು ಹಾಡುವ ಮೂಲಕ ಕನ್ನಡಾಂಬೆಗೆ ನುಡಿ ನಮನ (ಗೀತ ಗಾಯನ) ಸಲ್ಲಿಸುವಂತೆ ತಿಳಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ 'ಕರ್ನಾಟಕ ಸಂಭ್ರಮ - 50' ಕಾರ್ಯಕ್ರಮದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದರು. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.












Click it and Unblock the Notifications