ಜೂನ್ 1ರಿಂದ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ, ಕೆಪಿಎಸ್ ಶಾಲೆಗಳಿಗೂ ಅಂದೇ ಅಡಿಗಲ್ಲು
ಬೆಂಗಳೂರು: ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವವು ಸಡಗರದಿಂದ ನೆರವೇರಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಹೊಸ ಶೈಕ್ಷಣಿಕ ವರ್ಷದ ಪೂರ್ವಸಿದ್ಧತೆಗಳ ಕುರಿತಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ರಾಜ್ಯದ ಸುಮಾರು 46,000 ಸರ್ಕಾರಿ ಶಾಲೆಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ವೀಡಿಯೊ ಸಂವಾದದ ಮೂಲಕ ಪ್ರಮುಖ ಸಭೆ ನಡೆಸಿದರು.
'ಮಹಾ ಪೋಷಕ-ಶಿಕ್ಷಕರ ಸಭೆ'ಗೆ ಚಾಲನೆ
ಶಾಲಾ ಆರಂಭದ ದಿನವೇ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಏಕಕಾಲದಲ್ಲಿ 'ಮಹಾ ಪೋಷಕ-ಶಿಕ್ಷಕರ ಸಭೆ' ನಡೆಯಲಿದೆ. ಈ ವಿಶೇಷ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವೀಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ನೇರವಾಗಿ ಸಂವಾದ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಶಂಕುಸ್ಥಾಪನೆ
ಇದೇ ಶಾಲಾ ಪ್ರಾರಂಭೋತ್ಸವದ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ 'ಕರ್ನಾಟಕ ಪಬ್ಲಿಕ್ ಸ್ಕೂಲ್' (ಕೆಪಿಎಸ್) ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೆಯೇ ರಾಜ್ಯಮಟ್ಟದಲ್ಲಿ ಶಿವಮೊಗ್ಗದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಕೆಪಿಎಸ್ ಶಾಲೆಗಳ ಉದ್ದೇಶ, ಗುಣಮಟ್ಟ ಮತ್ತು ಅಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ಪೋಷಕರಿಗೆ ಸ್ಪಷ್ಟ ಮಾಹಿತಿ ಒದಗಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅತ್ಯುತ್ತಮ ಫಲಿತಾಂಶಕ್ಕೆ ಅಭಿನಂದನೆ
ಇತ್ತೀಚಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ದಾಖಲಾದ ಐತಿಹಾಸಿಕ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಶಿಕ್ಷಕರು ಹಾಗೂ ಅಧಿಕಾರಿಗಳ ಹಗಲಿರುಳಿನ ಶ್ರಮವನ್ನು ಸಚಿವ ಮಧು ಬಂಗಾರಪ್ಪ ಅವರು ಶ್ಲಾಘಿಸಿದರು. ಇಲಾಖೆಯ 29 ಅಂಶಗಳ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದು, ಪಾರದರ್ಶಕ ಮೌಲ್ಯಮಾಪನ ಮತ್ತು ರಾಜ್ಯಮಟ್ಟದಲ್ಲಿ ಸಿದ್ಧಪಡಿಸಿದ ಪ್ರಶ್ನೆಪತ್ರಿಕೆಗಳ ಮೂಲಕ ಉಚಿತವಾಗಿ ನಡೆಸಲಾದ ಪೂರ್ವಸಿದ್ಧತಾ ಪರೀಕ್ಷೆಗಳು ಈ ಸಾಧನೆಗೆ ಕಾರಣವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹೊಸ ಶೈಕ್ಷಣಿಕ ವರ್ಷಕ್ಕೆ ಪ್ರಮುಖ ಮಾರ್ಗಸೂಚಿಗಳು
ದಾಖಲಾತಿ ಹೆಚ್ಚಳ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ವಿಶೇಷ ಅಭಿಯಾನ ನಡೆಸಬೇಕು. ಅರ್ಧಕ್ಕೆ ಶಾಲೆ ಬಿಟ್ಟ ಅಥವಾ ಅನುತ್ತೀರ್ಣರಾದ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ಕರೆತರಬೇಕು.
ದೋಷಮುಕ್ತ ಬಿಸಿಯೂಟ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಬಿಸಿಯೂಟದ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ಬಾರದಂತೆ ಎಚ್ಚರ ವಹಿಸುವುದು ಕಡ್ಡಾಯ.
ಸಕಾಲದಲ್ಲಿ ಸೌಲಭ್ಯ: ಶಾಲಾ ವರ್ಷದ ಆರಂಭದಲ್ಲೇ ಪಠ್ಯಪುಸ್ತಕಗಳು, ಸಮವಸ್ತ್ರಗಳು ಸೇರಿದಂತೆ ಅಗತ್ಯ ಸಾಮಗ್ರಿಗಳು ವಿದ್ಯಾರ್ಥಿಗಳಿಗೆ ತಲುಪಬೇಕು.
ನಿರಂತರ ಪರಿಶೀಲನೆ: ಶಿಕ್ಷಣಾಧಿಕಾರಿಗಳು (DDPI, BEO, CRP) ಕಚೇರಿ ಕೆಲಸಕ್ಕಷ್ಟೇ ಸೀಮಿತವಾಗದೆ, ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಶಿಕ್ಷಣದ ಗುಣಮಟ್ಟ ಮತ್ತು ಶಿಕ್ಷಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡಬೇಕು.
"ಎಸ್ಎಸ್ಎಲ್ಸಿ ಒಂದು ಅರ್ಹತಾ ಪರೀಕ್ಷೆಯಾಗಿದ್ದು, ಉನ್ನತ ಶಿಕ್ಷಣಕ್ಕೆ ಸೇತುವೆಯಂತಿದೆ. ವಿದ್ಯಾರ್ಥಿಗಳೇ ಕರ್ನಾಟಕದ ಮಾನವ ಸಂಪನ್ಮೂಲದ ಮೂಲಾಧಾರವಾಗಿದ್ದಾರೆ. ಹೀಗಾಗಿ, ಎಸ್ಎಸ್ಎಲ್ಸಿ ಫಲಿತಾಂಶದ ಸಂಪೂರ್ಣ ಸುಧಾರಣೆಗೆ ಪ್ರತಿಯೊಬ್ಬ ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಬೇಕು" ಎಂಬ ಮುಖ್ಯಮಂತ್ರಿಗಳ ಆಶಯವನ್ನು ಸಚಿವರು ಸಭೆಯಲ್ಲಿ ತಿಳಿಸಿದರು.













Click it and Unblock the Notifications