ಉತ್ತರ ಕರ್ನಾಟಕ ಭಾಗಕ್ಕೆ ಮಹಾರಾಷ್ಟ್ರದಿಂದ 4 ಟಿಎಂಸಿ ನೀರು
ಬೆಂಗಳೂರು, ಏಪ್ರಿಲ್ 04 : ಬರ ಪರಿಹಾರ ಕಾಮಗಾರಿಗಳ ವಿಚಾರದಲ್ಲಿ ಲೋಪವಾದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕೃಷ್ಣಾ ಮತ್ತು ಭೀಮಾ ನದಿಗೆ ತಲಾ 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ರಾಜ್ಯಕ್ಕೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತೀವ್ರ ಬರಗಾಲಕ್ಕೆ ತುತ್ತಾಗಿರುವ ಉತ್ತರ ಕರ್ನಾಟಕ ಭಾಗದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ನಡೆಸಿದರು. [ಜಲಾಶಯಗಳ ನೀರು ಕುಡಿಯುವ ನೀರಿಗಾಗಿ ಮಾತ್ರ]

ಬಾಗಲಕೋಟೆ, ಗದಗ, ಹಾವೇರಿ, ಬಳ್ಳಾರಿ, ಬೀದರ್, ಬೆಳಗಾವಿ, ಧಾರವಾಡ, ಕಲಬುರ್ಗಿ, ರಾಯಚೂರು, ವಿಜಯಪುರ, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಂವಾದದಲ್ಲಿ ಭಾಗವಹಿಸಿದ್ದರು. [ಕರ್ನಾಟಕದಲ್ಲಿ ಭೀಕರ ಬರಗಾಲ, ಹೇಳುವವರಿಲ್ಲ ಕೇಳುವವರಿಲ್ಲ]
ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು ಸಭೆಯ ವಿವರಗಳನ್ನು ನೀಡಿದರು.
* ಕೃಷ್ಣಾ ಮತ್ತು ಭೀಮಾ ನದಿಗೆ ತಲಾ 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಇದಕ್ಕೆ ಅಲ್ಲಿಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸಚಿವರಾದ ಎಂ.ಬಿ. ಪಾಟೀಲ್ ಮತ್ತು ಎಸ್.ಆರ್. ಪಾಟೀಲ್ ಅವರ ನೇತೃತ್ವದ ನಿಯೋಗ ಶೀಘ್ರವೇ ಮಹಾರಾಷ್ಟ್ರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದೆ.
* ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು 15 ದಿನಗಳಿಗೊಮ್ಮೆ ಬರ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಬೇಕು. ಸ್ಥಳೀಯ ಶಾಸಕರನ್ನು ಭೇಟಿಯಾಗಿ ಸಮಾಲೋಚಿಸಬೇಕು. ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಬೇಕು. ಬರ ಪರಿಹಾರ ಕಾಮಗಾರಿ ವಿಚಾರದಲ್ಲಿ ಯಾವುದೇ ತೊಡಕು ಕಂಡು ಬಂದರೆ ಸಂಬಂಧಪಟ್ಟ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿ ಸಮಸ್ಯೆ ನಿವಾರಿಸಬೇಕು.
* ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮೇವು ಬ್ಯಾಂಕ್, ಗೋಶಾಲೆಗಳಿಗೂ ಭೇಟಿ ಕೊಡಬೇಕು. ಮೇವು ದಾಸ್ತಾನು, ಜಾನುವಾರುಗಳ ಔಷಧ ಸಂಗ್ರಹಿಸಿರುವ ಕುರಿತು ಮಾಹಿತಿ ಪಡೆಯಬೇಕು. ಆಗಾಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಅದೇ ರೀತಿ ಜಿಲ್ಲಾ ಉಸ್ತುವಾರಿ ಮಂತ್ರಿಗಳೂ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಬೇಕು.

* ಜಲಾಶಯಗಳಲ್ಲಿ ಈಗ ಲಭ್ಯವಿರುವ ನೀರನ್ನು ಕುಡಿಯುವ ನೀರು ಪೂರೈಕೆಗೆ ಮಾತ್ರ ಬಳಸಿಕೊಳ್ಳಬೇಕು. ಬೇರೆ ಉದ್ದೇಶಕ್ಕೆ ನೀರು ಬಳಸಿಕೊಳ್ಳುವಂತಿಲ್ಲ. ಕುಡಿಯುವ ನೀರಿಗೆ ತೊಂದರೆ ಆಗದಂತೆ ವಿದ್ಯುತ್ ಸರಬರಾಜು ಮಾಡಲು ಇಂಧನ ಇಲಾಖೆ ಅಧಿಕಾರಿಗಳಿಗೂ ತಾಕೀತು ಮಾಡಲಾಗಿದೆ. ಹೊಸದಾಗಿ ಕೊರೆಯುವ ಕೊಳವೆ ಬಾವಿಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಒದಗಿಸುವಂತೆಯೂ ಸೂಚಿಸಲಾಗಿದೆ.
* 12 ಜಿಲ್ಲೆಗಳ 270 ಗ್ರಾಮಗಳಲ್ಲಿ ಪ್ರಸ್ತುತ 667 ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸುವಂತೆ ಸೂಚಿಸಲಾಗಿದೆ. ಅಂತಹ ಹಳ್ಳಿಗಳಿಗೆ ಯಾವುದಾದರೂ ಮೂಲಕ ಮೂಲಕ ನೀರು ಒದಗಿಸಲು ಆದೇಶಿಸಿದೆ. [ಈ ಬಾರಿ ವಾಡಿಕೆಗಿಂತ ಹೆಚ್ಚು ಸುರಿಯಲಿದೆ ಮುಂಗಾರು ಮಳೆ]
* ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಟಾಸ್ಕ್ ಫೋರ್ಸ್ ಗಳಿಗೆ ತಲಾ 50 ಲಕ್ಷ ರೂ. ಬಿಡುಗಡೆ ಮಾಡಿದೆ. ಎಲ್ಲ ಕ್ಷೇತ್ರಗಳಲ್ಲಿ ಕ್ರಿಯಾ ಯೋಜನೆ ಸಿದ್ಧವಾಗಿದೆ. ಆಗದಿದ್ದರೆ ತಕ್ಷಣ ಸಿದ್ಧಪಡಿಸುವಂತೆ ಸೂಚಿಸಿದೆ. ಆಯಾ ತಾಲೂಕಿನ ತಹಸೀಲ್ದಾರರು, ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಕೃಷಿ ಸಹಾಯಕರು ಸೇರಿದಂತೆ ಕೆಳ ಹಂತದ ಅಧಿಕಾರಿಗಳು ಸಮಸ್ಯೆ ಇರುವ ಗ್ರಾಮಗಳಿಗೆ ತೆರಳಿ ವಾಸ್ತವ ಸ್ಥಿತಿ ತಿಳಿದುಕೊಳ್ಳಬೇಕು.
* 2015-16ನೇ ಸಾಲಿನಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಈ ಜಿಲ್ಲೆಗಳಿಗ 275 ಕೋಟಿ ರೂ. ಬಿಡುಗಡೆ ಮಾಡಿದೆ. ಅದರಲ್ಲಿ 175 ಕೋಟಿ ರೂ. ವೆಚ್ಚವಾಗಿದೆ. ಇತ್ತೀಚೆಗೆ 30 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಯಿಸುವುದರ ಜೊತೆಗೆ ಖಾಸಗಿ ಬೋರವೆಲ್ ಗಳನ್ನೂ ಬಳಸಿಕೊಳ್ಳಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ.
* ಬರ ಪರಿಹಾರ ಕಾಮಗಾರಿಗಳಿಗೆ ನೆರವು ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕೇಂದ್ರದ ಅಧಿಕಾರಿಗಳ ತಂಡವೂ ಅಧ್ಯಯನ ನಡೆಸಿ ಹೋಗಿದೆ. ಕಂದಾಯ ಸಚಿವ ಶ್ರೀನಿವಾಸ ಪ್ರಸಾದ್ ಮತ್ತು ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಕೇಂದ್ರ ಸಚಿವರನ್ನು ಭೇಟಿಯಾಗಿ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.












Click it and Unblock the Notifications