ಕೊರೊನಾವೈರಸ್ ಭೀತಿ ನಡುವೆ ಎಸ್ಎಸ್ಎಲ್ ಸಿ ಪರೀಕ್ಷೆ
ಬೆಂಗಳೂರು, ಜೂನ್.25: ನೊವೆಲ್ ಕೊರೊನಾವೈರಸ್ ಹರಡುವಿಕೆ ಭೀತಿ ನಡುವೆಯೂ ಎಸ್ಎಸ್ಎಲ್ ಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಿದೆ. ರಾಜ್ಯದಲ್ಲಿ ಈ ಬಾರಿ ಒಟ್ಟು 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
Recommended Video
ಕರ್ನಾಟಕದಲ್ಲಿ ಒಟ್ಟು 2879 ಎಸ್ಎಸ್ಎಲ್ ಸಿ ಪರೀಕ್ಷೆ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಒಂದು ಹಾಲ್ನಲ್ಲಿ ಕೇವಲ 18 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲಿಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಮಾಸ್ಕ್ ಧರಿಸಿಕೊಂಡೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕು ಎಂಬ ಕಟ್ಟುನಿಟ್ಟಿನ ನಿಯಮವನ್ನು ಜಾರಿಗೊಳಿಸಲಾಗಿದೆ.
ಇನ್ನು, ಕೊರೊನಾವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಎಲ್ಲ ವಿದ್ಯಾರ್ಥಿಗಳ ದೈಹಿಕ ತಾಪಮಾನ ಪರೀಕ್ಷೆ ನಡೆಸಲಾಗುತ್ತದೆ. ಹೆಚ್ಚು ತಾಪಮಾನ ಉಳ್ಳವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ತೀರ್ಮಾನಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿಯ ನಿಯೋಜನೆ
ಕೊರೊನಾ ವೈರಸ್ ಹರಡುವಿಕೆ ಭೀತಿ ಹಿನ್ನೆಲೆ ಬಹಳ ಎಚ್ಚರಿಕೆಯಿಂದ ಸರ್ಕಾರವು ಪರೀಕ್ಷೆ ನಡೆಸುತ್ತಿದೆ. ಹೀಗಾಗಿ ಎಸ್ಎಸ್ಎಲ್ ಸಿ ಪರೀಕ್ಷೆ ಕಾರ್ಯಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ 81265 ಜನರನ್ನು ನಿಯೋಜಿಸಲಾಗಿದೆ. ಪೊಲೀಸರು, ಆರೋಗ್ಯ ಸಿಬ್ಬಂದಿ ಸೇರಿ ಒಟ್ಟು 90 ಸಾವಿರ ಜನ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಎಲ್ಲ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರು ಒಂದರಲ್ಲೇ 1,13,800 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಎಕ್ಸಾಂ ಹಾಲ್ ನಲ್ಲಿ ಸಿಸಿ ಕ್ಯಾಮರಾ ಅಳವಡಿಕೆ
ರಾಜ್ಯದಲ್ಲಿ ತೆರೆದಿರುವ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಎಕ್ಸಾಮಿನೇಷನ್ ಚೀಫ್ ಸೇರಿದಂತೆ ಮೂವರು ಅಧಿಕಾರಿಗಳು ನಿಯೋಜನೆ ಮಾಡಲಾಗಿರುತ್ತದೆ. ಇದರ ಜೊತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಹಾಕಲಾಗಿದ್ದು, ಜಾಗೃತಿ ದಳವು ತೀವ್ರ ನಿಗಾ ವಹಿಸಲಿದೆ.

ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಸೂಚನೆ
ಬೆಳಗ್ಗೆ 7 ಗಂಟೆಗೆ ಪರೀಕ್ಷೆ ಕೇಂದ್ರಕ್ಕೆ ಹಾಜರ್ ಆಗುವ ಸಿಬ್ಬಂದಿ ಪರೀಕ್ಷೆ ಆರಂಭಿಸುವ ಮುನ್ನ ತಿಂಡಿ ಸೇವನೆಗೆ ಅವಕಾಶವಿರುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳೇ ಕುಡಿಯುವುದಕ್ಕೆ ಬಿಸಿ ನೀರನ್ನು ತಮ್ಮ ಮನೆಗಳಿಂದ ತೆಗೆದುಕೊಂಡು ಬರುವುದು ಉತ್ತಮ. ಇದರ ಜೊತೆಗೆ ಪರೀಕ್ಷೆ ಕೇಂದ್ರಗಳಲ್ಲೂ 250 ಮಿಲಿ ನೀರಿನ ಬಾಟಲಿಗಳ ವ್ಯವಸ್ಥೆ ಇರುತ್ತದೆ. ಪೋಷಕರು ಮಕ್ಕಳನ್ನು ಬಿಟ್ಟು ಮನೆಗೆ ಹೋಗಿ. ಪರೀಕ್ಷೆ ಮುಗಿದ ಬಳಿಕ ನಿಮ್ಮ ಮಕ್ಕಳನ್ನು ಕರೆದೊಯ್ಯಲು ಬರುವುದು ಸೂಕ್ತ. ಈ ವೇಳೆ ಪೋಷಕರೂ ಕೂಡಾ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಸೂಚಿಸಲಾಗಿದೆ.

SSLC ವಿದ್ಯಾರ್ಥಿಗಳಿಗೆ ಎಚ್ಚರಿಕೆ ಜೊತೆಗೆ ಸಿಎಂ ಶುಭಾಷಯ
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನೂ ಮಾಡಿದೆ. ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ, ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.












Click it and Unblock the Notifications