2021-22 ನೇ ಸಾಲಿನ SSLC ಪರೀಕ್ಷಾ ಪದ್ಧತಿ ಬಗ್ಗೆ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದೇನು?
ಬೆಂಗಳೂರು, ನ. 03: ಪ್ರಸಕ್ತ ಸಾಲಿನ 2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆ ಯಾವ ರೀತಿ ಇರಲಿದೆ ಎಂಬ ಗೊಂದಲಗಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತೆರೆ ಎಳೆದಿದ್ದಾರೆ. ಕೊರೊನಾ ಪೂರ್ವದಲ್ಲಿ ನಡೆಯುತ್ತಿದ್ದ ಪರೀಕ್ಷಾ ಮಾದರಿಯಲ್ಲಿ 2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯುತ್ತವೆ. ಪ್ರಶ್ನೆಪತ್ರಿಕೆಗಳೂ ಸಹ ಹಳೆಯ ಮಾದರಿಯಲ್ಲಿಯೇ ಇರಲಿವೆ ಎಂದು ಸಚಿವ ಬಿ.ಸಿ. ನಾಗೇಶ್ 'ಒನ್ ಇಂಡಿಯಾ ಕನ್ನಡ'ಕ್ಕೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಒಂದೂವರೆ ವರ್ಷದಿಂದ ಶಾಲೆಗಳು ಬಂದ್ ಆಗಿದ್ದವು. 2020-21 ನೇ ಸಾಲಿನಲ್ಲಿ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು. ಆದರೆ, ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಉತ್ತೀರ್ಣ ಮಾಡಲು ಮಾನದಂಡ ಅನುಸರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಬಹು ಅಯ್ಕೆ ಪ್ರಶ್ನೆ ಪತ್ರಿಕೆ ನೀಡಲಾಗಿತ್ತು. ಮೂರು ವಿಷಯಗಳನ್ನು ಒಂದು ವಿಷಯವನ್ನಾಗಿ ಮಾಡಿ ಎರಡು ದಿನ ಪರೀಕ್ಷೆ ನಡೆಸಲಾಗಿತ್ತು. ಅಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತೀರ್ಮಾನವನ್ನು ಪ್ರಕಟಿಸಿದ್ದರು. ರಾಜ್ಯದಲ್ಲಿ ಸಾರ್ವಜನಿಕ ಟೀಕೆಗೆ ಗುರಿಯಾದರೂ, ಕೊರೊನಾ ಸೋಂಕು ಮಕ್ಕಳಲ್ಲಿ ಕಾಣಿಸಿರಲಿಲ್ಲ.
2020-21ನೇ ಸಾಲಿನ ಎಸ್ಎಸ್ಎಲ್ಸಿ ಪ್ರರೀಕ್ಷೆ ಕೇವಲ ಎರಡೇ ದಿನ ನಡೆದಿತ್ತು. ಇದಕ್ಕಾಗಿ ತಲಾ ಮೂರು ವಿಷಯಗಳಿಗೆ ಸಂಬಂಧಪಟ್ಟಂತೆ ಒಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗಿತ್ತು. ಪರೀಕ್ಷೆಗೆ ಹಾಜರಾಗಿದ್ದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿಯೂ ಬಹು ಆಯ್ಕೆ ಮದರಿ ಪ್ರಶ್ನೆ ಪತ್ರಿಕೆ ಇರಲಿದೆಯಾ ಎಂಬ ಗೊಂದಲ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಲ್ಲಿ ಮೂಡಿದೆ.
ಗೊಂದಲಕ್ಕೆ ತೆರೆಎಳೆದ ಶಿಕ್ಷಣ ಸಚಿವ
2021-22 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವ ಸಂಬಂಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಹಳೆಯ ಪದ್ಧತಿಯಂತೆ ಪರೀಕ್ಷೆ ನಡೆಯಲಿದೆ. ಈ ವಿಚಾರದಲ್ಲಿ ಯಾವುದೇ ಗೊಂದಲವೂ ಬೇಡ, ಶಾಲೆಗಳು ಆತಂಕ ಪಡೆಯುವುದು ಬೇಡ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈ ಹಿಂದಿನ ಪದ್ದತಿಯಂತೆ ಪ್ರತಿ ವಿಷಯಕ್ಕೂ 80 ಅಂಕದಂತೆ ಲಿಖಿತ ಪರಿಕ್ಷೆ ನಡೆಯಲು ತೀರ್ಮಾನಿಸಲಾಗಿದೆ. ಹಳೇ ಪ್ರಶ್ನೆ ಪತ್ರಿಕೆ ಪದ್ಧತಿಯಲ್ಲಿಯೇ ಈ ಶೈಕ್ಷಣಿಕ ವರ್ಷದ ಪರೀಕ್ಷೆ ಇರಲಿದ್ದು, ಈ ಮಾದರಿಯಲ್ಲಿಯೇ ಶಿಕ್ಷಕರು ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ವರ್ಷ ಕೊರೊನಾ ಸೋಂಕು ಇತ್ತು. ಪರೀಕ್ಷೆ ನಡೆಸುವ ಪರಿಸ್ಥಿತಿಯಲ್ಲಿ ಶಿಕ್ಷಣ ಇಲಾಖೆ ಇರಲಿಲ್ಲ. ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಮಾಡಲಾಗಿತ್ತು. ಆದರೆ, ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡುವ ವಿಚಾರದಲ್ಲಿ ಗೊಂದಲ ಏರ್ಪಟ್ಟಿತ್ತು. ಹೀಗಾಗಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಅನಿವಾರ್ಯವಾಗಿ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ನೀಡಲಾಗಿತ್ತು. ಈ ಶೈಕ್ಷಣಿಕ ವರ್ಷದಲ್ಲಿ ಕೇವಲ 40 ದಿನ ಕಡಿಮೆ ಆಗಿದೆ. ಪೂರ್ಣ ಪ್ರಮಾಣದಲ್ಲಿ ಪಠ್ಯ ಕ್ರಮ ಮುಗಿಸಲು ಎಲ್ಲಾ ಶಾಲೆಗಳಿಗೆ ಸೂಚಿಸಲಾಗಿದೆ. ಹೀಗಾಗಿ ಈ ವರ್ಷ ಈ ಹಿಂದಿನ ಪದ್ಧತಿಯಂತೆ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಸಚಿವರಾದ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಬಂದರೆ ಬದಲಾವಣೆ ಚಿಂತನೆ:
ಸದ್ಯದ ಪರಿಸ್ಥಿತಿಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿ ವರೆಗೆ ಭೌತಿಕ ತರಗತಿಗಳು ಆರಂಭವಾಗಿವೆ. ಶಾಲೆಗಳಿಗೆ ಆಸಕ್ತಿಯಿಂದ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ. ಹೀಗಾಗಿ ಮುಂದೆ ಯಾವುದೇ ಆತಂಕ ಇಲ್ಲದೇ ಶಾಲೆಗಳು ನಡೆಯಲಿವೆ. ಒಂದು ವೇಳೆ ಕೊರೊನಾ ಮೂರನೇ ಅಲೆ ಬಂದ ಪಕ್ಷದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷಾ ಪದ್ಧತಿ ಬದಲಾವಣೆ ಬಗ್ಗೆ ಚಿಂತನೆ ನಡೆಸಲಾಗುವುದು. ಸದ್ಯದ ಪರಿಸ್ಥಿತಿಯಲ್ಲಿ 80/20 ಮಾದರಿ ಲಿಖಿತ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದ್ದೇವೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಮಕ್ಕಳನ್ನು ಪರೀಕ್ಷೆಗೆ ತಯಾರಿ ಮಾಡಬೇಕು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.