ಸೋಮವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಸುರೇಶ್ ಕುಮಾರ್
ಬೆಂಗಳೂರು, ಆಗಸ್ಟ್ 07: ಕೊರೊನಾ ಸಂಕಷ್ಟದ ನಡುವೆ ಸವಾಲು ಎದುರಿಸಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಬಂದಿದೆ. ಇದೇ ಸೋಮವಾರ (ಆಗಸ್ಟ್ 10, 2020) ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.
Recommended Video
ಬಹುದೊಡ್ಡ ಸವಾಲನ್ನು ಎಳೆದುಕೊಂಡು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮಾಡಿ ಮುಗಿಸಿದ್ದರು. ಕೊರೊನಾ ವೈರಸ್ ಆತಂಕದ ಮಧ್ಯೆಯೂ ಸುರಕ್ಷಿತವಾಗಿ ಪರೀಕ್ಷೆ ಮುಗಿದಿತ್ತು. ನಂತರ ಪರೀಕ್ಷಾ ಮೌಲ್ಯಮಾಪನ ಕೂಡ ಶುರುವಾಗಿತ್ತು. ಇದೀಗ ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬರಲಿದೆ. ಎಲ್ಲಾ ಶಾಲೆಗಳಲ್ಲಿ ಏಕಕಾಲಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಇಲಾಖೆ ವೆಬ್ಸೈಟ್ನಲ್ಲಿಯೂ ಫಲಿತಾಂಶ ನೋಡಬಹುದಾಗಿದೆ.

ಪರೀಕ್ಷೆ ಬರೆದವರು
ಕಳೆದ ಜೂ. 25 ರಿಂದ ಜು. 3 ರವರೆಗೆ 2019-20ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. ಅದಾದ ಬಳಿಕ ಮೌಲ್ಯಮಾಪನ ಶುರುವಾಗಿತ್ತು. ರಾಜ್ಯಾದ್ಯಂತ ಒಟ್ಟು 7.5 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು.
ಈ ಬಾರಿ 7,43,477 ಸಾಮಾನ್ಯ ವಿದ್ಯಾರ್ಥಿಗಳು ಹಾಗೂ 20,857 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕಂಟೈನ್ಮೆಂಟ್ ಪ್ರದೇಶಗಳ 3911 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದರು. ಕೋವಿಡ್-19 ಹೊರತುಪಡಿಸಿ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 863 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಯಾವುದೇ ವಿದ್ಯಾರ್ಥಿ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗದೇ ಇರುವುದು ಈ ವರ್ಷದ ವಿಶೇಷ.

ಖಾಸಗಿ ವಿದ್ಯಾರ್ಥಿಗಳು
ಸರ್ಕಾರಿ, ಖಾಸಗಿ ವಸತಿ ನಿಲಯಗಳಲ್ಲಿದ್ದುಕೊಂಡು 1446 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನೆರೆ ರಾಜ್ಯಗಳಿಂದ 639 ವಿದ್ಯಾರ್ಥಿಗಳು ಪರೀಕ್ಷೆ ಕಟ್ಟಿದ್ದರು, ಆದರೆ 41 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ 590 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 12,644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದರು, ಆದರೆ 109 ವಿದ್ಯಾರ್ಥಿಗಳು ಗೈರು ಹಾಜರಾಗಿ, 12,535 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಕಳೆದ ವರ್ಷದ ಫಲಿತಾಂಶ
ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬೇಗನೆ ಅಂದರೆ ಏಪ್ರಿಲ್ ತಿಂಗಳಲ್ಲಿ ಪ್ರಕಟವಾಗಿತ್ತು. ಆಗ ಏಪ್ರಿಲ್ 30, 2019ರಂದು ಫಲಿತಾಂಶ ಪ್ರಕಟಿಸಲಾಗಿತ್ತು. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ ಮೂರು ತಿಂಗಳು ವಿಳಂಬವಾಗಿ ಪರೀಕ್ಷೆ ನಡೆಸಲಾಗಿತ್ತು.
ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪ್ರಕಟ ಮಾಡುತ್ತೇವೆ ಎಂದು ಸುರೇಶ್ ಕುಮಾರ್ ಹೇಳಿದ್ದರು. ಇದೀಗ ಪರೀಕ್ಷಾ ಫಲಿತಾಂಶವನ್ನು ಸೋಮವಾರ ಪ್ರಕಟ ಮಾಡುವುದಾಗಿ ಅವರು ತಿಳಿಸಿದ್ದಾರೆ.

ನೆರೆಯ ರಾಜ್ಯಗಳಲ್ಲಿ
ಪರೀಕ್ಷೆಗೆ ಸರಾಸರಿ ಶೇಕಡಾ 98ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ನೆರೆ ರಾಜ್ಯಗಳಾದ ತಮಿಳುನಾಡು, ತೆಲಂಗಾಣ, ಆಂದ್ರಪ್ರದೇಶ, ಪುದುಚೆರಿ, ಮಹಾರಾಷ್ಟ್ರಗಳು ಸೇರಿದಂತೆ ಬಹುಪಾಲು ರಾಜ್ಯ ಸರ್ಕಾರಗಳು ತಮ್ಮ ಮಂಡಳಿಗಳ ಪರೀಕ್ಷೆಗಳನ್ನು ಮಾಡದೇ ಹಿಂದೆ ಸರಿದವು. ನಾಡಿನ ಮಕ್ಕಳ ಹಿತ ಮತ್ತು ಅವರ ಭವಿಷ್ಯವನ್ನು ಗಮನದಲ್ಲಿಟುಕೊಂಡು ಪರೀಕ್ಷೆಗಳನ್ನು ನಡೆಸಲಾಗಿತ್ತು.
ಕೋವಿಡ್ ಸೋಂಕಿತ 33 ವಿದ್ಯಾರ್ಥಿಗಳಿಗೆ ಪೂರ್ವಭಾವಿಯಾಗಿ ಪರೀಕ್ಷೆಯನ್ನು ನಿರಾಕರಿಸಿ ಅವರಿಗೆ ಮುಂದಿನ ಪೂರಕ ಪರೀಕ್ಷೆಗಳಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ.












Click it and Unblock the Notifications