ಎಸ್ಎಸ್ಎಲ್ಸಿ ಪರೀಕ್ಷೆ: ಅಡ್ಡಗೋಡೆ ಮೇಲೆ ದೀಪವಿಟ್ಟ ಶಿಕ್ಷಣ ಸಚಿವರು
ಚಾಮರಾಜನಗರ, ಮಾರ್ಚ್ 21: "ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಮುಂದೂಡುವ ಯಾವುದೇ ಚಿಂತನೆ ಇಲ್ಲ" ಎಂದು ಒಂದು ದಿನದ ಹಿಂದೆ ಹೇಳಿದ್ದ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸಚಿವ ಸುರೇಶ್ ಕುಮಾರ್, ಈಗ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.
"ನಾವಿವತ್ತು ಮಾರ್ಚ್ 21ನೇ ತಾರೀಕಿನಲ್ಲಿದ್ದೇವೆ. ಎಸ್ಎಸ್ಎಲ್ಸಿ ಪರೀಕ್ಷೆಗಳು 27ನೇ ತಾರೀಕಿನಿಂದ ಆರಂಭವಾಗಲಿದೆ. ಸೋಮವಾರದಂದು (ಮಾ 23) ಬೆಳಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಸುಧಾಕರ್ ಜೊತೆ ಮಾತುಕತೆ ನಡೆಸಲಿದ್ದೇನೆ" ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
SSLC ಪರೀಕ್ಷೆಗಳನ್ನು ಮುಂದೂಡುವ ಚಿಂತನೆ ಇಲ್ಲ: ಸಚಿವ ಸುರೇಶ್ ಕುಮಾರ್
"ಪರೀಕ್ಷೆಯ ದಿನಾಂಕ ನಿಗದಿಯಾಗಿದೆ. ಬಂದ ವಿದ್ಯಾರ್ಥಿಗಳಿಗೆ ಯಾವರೀತಿ ಸೌಲಭ್ಯಗಳನ್ನು ನೀಡಬೇಕು ಎನ್ನುವುದರ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ನಿಗದಿತ ದಿನಾಂಕದಂದೇ ಪರೀಕ್ಷೆ ನಡೆಯಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ".
"ಇಬ್ಬರು ಸಚಿವರು ಮತ್ತು ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ, ಸೋಮವಾರ, ಶಿಕ್ಷಣ ಇಲಾಖೆ ಅಂತಿಮ ನಿರ್ಧಾರವನ್ನು ಪ್ರಕಟಿಸುತ್ತದೆ" ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
"ಈಗಿನ ಪರಿಸ್ಥಿತಿಯಲ್ಲಿ ಪ್ರತೀದಿನ ನಿರ್ಧಾರವನ್ನು ತೆಗೆದುಕೊಳ್ಲಬೇಕಾಗುತ್ತದೆ. ವಿದ್ಯಾರ್ಥಿಗಳ ಹಿತಾದೃಷ್ಟಿಯನ್ನು ನೋಡಿಕೊಂಡು ಅಂತಿಮ ನಿರ್ಧಾರಕ್ಕೆ ಬರುತ್ತೇವೆ" ಎಂದು ಸಚಿವರು ತಿಳಿಸಿದ್ದಾರೆ.
ಕೊರೊನಾದಿಂದ ಶಿಕ್ಷಕರನ್ನು ಕಾಪಾಡಿ; ಶಿಕ್ಷಣ ಸಚಿವರಿಗೊಂದು ಪತ್ರ
"ಶಿಕ್ಷಣ ಇಲಾಖೆಯಿಂದ ಖಚಿತವಾದ, ಎಲ್ಲರ ಹಿತ ಕಾಪಾಡುವ ನಿರ್ಧಾರ ಸೋಮವಾರದಂದು ಬರಲಿದೆ" ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.