ರಾಜ್ಯ ಬಜೆಟ್ನಲ್ಲಿ ಅರ್ಚಕರಿಗೆ ಭರ್ಜರಿ ಗುಡ್ನ್ಯೂಸ್: ತಸ್ತೀಕ್ ಮೊತ್ತ 72,000ಕ್ಕೆ ಹೆಚ್ಚಳ
ಬೆಂಗಳೂರು, ಮಾರ್ಚ್ 07: ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. 4 ಲಕ್ಷ ಕೋಟಿ ರೂಪಾಯಿ ಗಿಂತಲೂ ಹೆಚ್ಚಿನ ಗಾತ್ರದ ಕಾಂಗ್ರೆಸ್ ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಅನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅರ್ಚಕರಿಗೆ ಗುಡ್ನ್ಯೂಸ್ ಸಿಕ್ಕಿದೆ.
2025-26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಮುಜರಾಯಿ ಇಲಾಖೆಗೆ ನೀಡಿರುವ ಅನುದಾದ ವಿವರ ಈ ಕಳೆಗಿನಂತಿದೆ.

* ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ 25,551 ಧಾರ್ಮಿಕ ಸಂಸ್ಥೆಗಳ/ ದೇವಾಲಯಗಳಲ್ಲಿರುವ ಅರ್ಚಕರಿಗೆ ಪ್ರಸ್ತುತ ಪಾವತಿಸುತ್ತಿರುವ ವಾರ್ಷಿಕ ತಸ್ತೀಕ್ ಮೊತ್ತವನ್ನು 60,000 ರೂ.ಗಳಿಂದ 72,000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
* ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವೇತನ ಮತ್ತಿತರ ಭತ್ಯೆಗಳನ್ನು ಇದುವರೆವಿಗೂ ದೇವಾಲಯಗಳ ನಿಧಿಯಿಂದ ಭರಿಸಲಾಗುತ್ತಿತ್ತು. 2025-26 ನೇ ಸಾಲಿನಿಂದ ಇವರುಗಳ ವೇತನವನ್ನು ಸರ್ಕಾರದ ವತಿಯಿಂದ ಪಾವತಿಸಲು ಕ್ರಮವಹಿಸಲಾಗುವುದು ಎನ್ನುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿದೆ.
* ರಾಜ್ಯದ ಪ್ರಮುಖ 400 ದೇವಾಲಯ ಹಾಗೂ ಹೊರ ರಾಜ್ಯಗಳಲ್ಲಿರುವ ರಾಜ್ಯ ಛತ್ರಗಳಲ್ಲಿ ಲಭ್ಯವಿರುವ ಅಂದಾಜು 3,500 ಕೊಠಡಿಗಳಲ್ಲಿ ಯಾತ್ರಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಮತ್ತು ಕೊಠಡಿಗಳ ಕಾಯ್ದಿರಿಸುವಿಕೆ ಹಾಗೂ ನಿರ್ವಹಣೆ ಮಾಡಲು 'ಕರ್ನಾಟಕ ದೇವಾಲಯಗಳ ವಸತಿ ಕೋಶ'ವನ್ನು ಸ್ಥಾಪಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
* ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮವನ್ನು ಧಾರ್ಮಿಕ ಹಾಗೂ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು. ಹಾಗೂ ರಾಜ್ಯದಲ್ಲಿ ಒತ್ತುವರಿಯಾಗಿರುವ 328 ದೇವಾಲಯಗಳ ಆಸ್ತಿಗಳನ್ನು ಸಂರಕ್ಷಿಸಲು ಒತ್ತುವರಿಯನ್ನು ತೆರವುಗೊಳಿಸಲಾಗುವುದು. 'ಭೂ-ವರಾಹ' ಯೋಜನೆಯಡಿಯಲ್ಲಿ ಈ ದೇವಾಲಯಗಳ ಸ್ಥಿರಾಸ್ತಿಗಳನ್ನು ದಾಖಲೀಕರಣಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಬಜೆಟ್ನಲ್ಲಿ ತಿಳಿಸಿದೆ.












Click it and Unblock the Notifications