Karnataka Weather: ಮುಂದಿನ ಐದನೇ ದಿನ ಒಳನಾಡಿಗೆ ಭಾರಿ ಮಳೆ, ಹವಾಮಾನ ವರದಿ ತಿಳಿಯಿರಿ
ಬೆಂಗಳೂರು, ಮೇ 15: ಕರ್ನಾಟಕ ರಾಜ್ಯದಲ್ಲಿ ಅಬ್ಬರಿಸಿದ್ದ ಮಳೆ ತುಸು ಕಡಿಮೆಯಾದಂತೆ ಕಂಡ ಬಂದರೂ ಸಹಿತ ಪೂರ್ಣ ಪ್ರಮಾಣದಲ್ಲಿ ಮಳೆ ತಗ್ಗಿಲ್ಲ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿ ಸಹಿತ ಉತ್ತಮ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ಬಹುತೇಕ ಒಣಹವೆಯ ವಾತಾವರಣವೇ ಮುಂದುವರಿಯಲಿದೆ. ಮುಂದಿನ ಐದು ದಿನಗಳಲ್ಲಿ ಮೇ 20ವರೆಗಿನ ಹವಾಮಾನ ಮಾಹಿತಿ ಪ್ರಕಾರ, ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ತುಂತುರು ಮಳೆ ಬರುವ ಸಾಧ್ಯತೆ ಇದೆ. ಆದರೆ ಐದನೇ ದಿನ (ಮೇ 20) ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಡಿಕೇರಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಬರುವ ಸಾಧ್ಯತೆ ಇದೆ.

ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಒಣಹವೆ ಕಂಡು ಬಂದರೆ, ನಂತರದ ಎರಡು ದಿನ ಹಗುರ ಮಳೆ ಬರಲಿದೆ ಎಂದು ಅಂದಾಜಿಸಲಾಗಿದೆ. ಉಳಿದಂತೆ ಯಾವುದೇ ಗಂಭೀರ ಪ್ರಮಾಣದ ಹವಾಮಾನ ಬದಲಾವಣೆಗಳು ಇಲ್ಲ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಗರಿಷ್ಠ ತಾಪಮಾನ ದಾಖಲು
ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನುಳಿದಂತೆ ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರಗಳಲ್ಲಿ ತಲಾ 39 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನದಿಂದ ಮಳೆ ಅಬ್ಬರ ಕ್ಷಿಣಿಸಿದೆ. ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ಮೋಚಾ ಚಂಡಮಾರುತದ ಅಬ್ಬರ ಇಳಿಮುಖವಾಗಿದೆ ಎಂದ ತಿಳಿದು ಬಂದಿದೆ. ಈ ಕಾರಣದಿಂದ ಮಳೆರಾಯ ತಣ್ಣಗಾಗಿದ್ದಾನೆ. ನಗರದಲ್ಲಿ ಇಂದು ಸೋಮವಾರ ಬೆಳಗ್ಗೆಯಿಂದಲೇ ಬಿರು ಬಿಸಿಲಿನ ವಾತಾವರಣ ಕಂಡು ಬಂದಿದೆ. ಮುಂದಿನ ನಾಲ್ಕು ದಿನಗಳವರೆಗೆ ನಗರದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ನಂತರ ಒಂದು ದಿನ ಜೋರು ಮಳೆ ಬರುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.












Click it and Unblock the Notifications