Get Updates
Get notified of breaking news, exclusive insights, and must-see stories!

ಕೇಂದ್ರ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಕರ್ನಾಕದ ಪ್ರಮುಖ ಬೇಡಿಕೆಗಳು: ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು, ಜನವರಿ 11: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ಶನಿವಾರ (ಜನವರಿ 10) ಕೇಂದ್ರ ಬಜೆಟ್ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಪರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪಾಲ್ಗೊಂಡು ರಾಜ್ಯದ ಪ್ರಮುಖ ಬೇಡಿಕೆಗಳ ಪಟ್ಟಿ ಸಲ್ಲಿಕೆ ಮಾಡಿದರು. ಹಾಗಾದ್ರೆ ಅದರಲ್ಲಿ ಏನೆಲ್ಲಾ ಇದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಸರಕು ಮತ್ತು ಸೇವಾ ತೆರಿಗೆ ದರ ಸರಳೀಕರಣದಿಂದ ರಾಜ್ಯಕ್ಕೆ ವಾರ್ಷಿಕ 9,000 ಕೋಟಿ ರೂಪಾಯಿ ಆದಾಯ ನಷ್ಟ ಆಗಲಿದೆ. ಈ ನಷ್ಟ ಪರಿಹಾರ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮನವಿ ಮಾಡಲಾಗಿದೆ.

Karnataka Submits Key Financial Demands at Union Pre-Budget Meeting Led by Nirmala Sitharaman

ರಾಷ್ಟ್ರ ಅಭಿವೃದ್ಧಿಯಲ್ಲಿ ಕರ್ನಾಟಕ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಆದರೆ, ಜಿಎಸ್​ಟಿ ದರ ಬದಲಾವಣೆ, ಹವಾಮಾನ ವೈಪರೀತ್ಯ, ಹೆಚ್ಚುತ್ತಿರುವ ಸಾಮಾಜಿಕ ಬದ್ಧತೆ ಹಾಗೂ ವೇಗದ ನಗರೀಕರಣದಿಂದ ಹಣಕಾಸು ಸ್ಥಿತಿ ಸಂಕೀರ್ಣ ಆಗಯತ್ತಿದೆ. ರಾಜ್ಯಗಳ ಹೊಣೆಗಾರಿಕೆಗಳು ಅವುಗಳ ಆದಾಯಗಳಿಗಿಂತ ವೇಗವಾಗಿ ವಿಸ್ತರಿಕೊಂಡಿವೆ. 2026-27 ಬಜೆಟ್​ನಲ್ಲಿ ಸರಿಯಾದ ಹಣಕಾಸು ನಿರ್ಧಾರಗಳನ್ನಯ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.‌

* ಜಿಎಸ್​ಟಿ ದರ ಸರಳೀಕರಣದ ನಂತರ, ಕರ್ನಾಟಕದ ಜಿಎಸ್​ಟಿ ಬೆಳವಣಿಗೆಯು ಶೇಕಡ 12ರಿಂದ ಶೇಕರ 5ಕ್ಕೆ ಇಳಿಕೆ ಆಗಿದೆ. ಇದರ ಪರಿಣಾಮ ಪ್ರಸಕ್ತ ವರ್ಷ ಸುಮಾರು 5,000 ಕೋಟಿ ರೂಪಾಯಿ ಕೊರತೆ ಆಗಿದ್ದು, ವಾರ್ಷಿಕ 9,000 ಕೋಟಿ ರೂಪಾಯಿ ಆದಾಯ ಕೊರತೆಯಾಗಲಿದೆ.‌

ಕೇಂದ್ರ ಸರ್ಕಾರ ಪಾನ್ ಮಸಾಲ ಮೇಲಿನ ಸೆಸ್ ಹಾಗೂ ತಂಬಾಕು ಮೇಲಿನ ಸುಂಕದ ಮೂಲಕ ತನ್ನ ನಷ್ಟವನ್ನು ಹೊಂದಿಸಿಕೊಂಡಿದೆ. ಆದರೆ, ರಾಜ್ಯಗಳಿಗೆ ಆ ಅವಕಾಶ ಇಲ್ಲದಂತಾಗಿದೆ. ಆದ್ದರಿಂದ ರಾಜ್ಯಗಳಿಗೆ ಉತ್ತಮ ಆದಾಯ ರಕ್ಷಣೆ ವ್ಯವಸ್ಥೆ ಕಲ್ಪಿಸಬೇಕು. ಈ ಮೂಲಕ ಆದಾಯ ನಷ್ಟಕ್ಕೆ ಸಂಪೂರ್ಣ ಪರಿಹಾರ ನೀಡುಬೇಕು ಎಂದು ಮನವಿ ಮಾಡಿದರು.

* ತಂಬಾಕಿನ ಮೇಲಿನ ಅಬಕಾರಿ ಸುಂಕ ಮತ್ತು ಪಾನ್ ಮಸಾಲಾ ಮೇಲಿನ ಸೆಸ್ ಅನ್ನು 50:50 ಅನುಪಾತದಲ್ಲಿ ಕೇಂದ್ರ ಹಾಗೂ ರಾಜ್ಯಗಳ ನಡುವೆ ಹಂಚಿಕೆ ಆಗಬೇಕು. ಇದರಿಂದ ಕೇಂದ್ರ ಹಾಗೂ ರಾಜ್ಯಗಳ ನಡುವಿನ ಸಂಬಂಧವ ಸಧೃಡವಾಗಲಿದೆ ಎಂದು ಹೇಳದರು.

* ಜಲಜೀವನ್ ಮಿಷನ್ ಯೋಜನೆಗೆ ಕೇಂದ್ರ ಸರ್ಕಾರ ಸರ್ಕಾರವು ಈವರೆಗೂ ₹11,786 ಕೋಟಿ ಬಿಡುಗಡೆ ಮಾಡಿರುತ್ತದೆ. ಪ್ರತಿಯಾಗಿ ರಾಜ್ಯ ಸರ್ಕಾರ ಈವರೆಗೂ ₹24,598 ಕೋಟಿ ಬಿಡುಗಡೆ ಮಾಡಿದೆ. ಜಲ ಜೀವನ್ ಮಿಷನ್ ಯೋಜನೆಯ ಕೆಲಸಗಳಿಗೆ ತೊಡಕಾಗಬಾರದು ಎಂದು ರಾಜ್ಯ ಸರ್ಕಾರವು ತನ್ನ ನಿಗದಿತ ಪಾಲಿಗಿಂತ ಹೆಚ್ಚುವರಿಯಾಗಿ ₹13,004 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಕೂಡಲೇ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಕೋರಿದರು.

* ಬೇಡಿಕೆ ಆಧಾರಿತ MGNREGAಯಿಂದ ಅನುದಾನ ಹಂಚಿಕೆ-ಆಧಾರಿತ G-RAM-Gಗೆ ಬದಲಾಯಿಸುವುದರಿಂದ ಪರಿಣಾಮಕಾರಿ ಉದ್ಯೋಗ ದಿನಗಳು ಕಡಿಮೆಯಾಗಿವೆ. ಇದರಿಂದಾಗಿ 13 ಕೋಟಿ ಮಾನವ ದಿನಗಳ ಜೀವನೋಪಾಯ ಭದ್ರತೆಯನ್ನು ಒದಗಿಸುವುದನ್ನು ಮುಂದುವರಿಸಲು, ಕರ್ನಾಟಕಕ್ಕೆ ಸುಮಾರು 2,000 ಕೋಟಿ ರೂಪಾಯಿಗಳು ಬೇಕಾಗುತ್ತವೆ. ಇದನ್ನು ಒದಗಿಸಲು ವಿತ್ತೀಯ ಅವಕಾಶ ಇರುವುದಿಲ್ಲ ಎಂದು ಹೇಳಿದರು.

ಅಲ್ಲದೆ, G-RAM-G ಯೋಜನೆಯಲ್ಲಿ ರಾಜ್ಯಗಳು ಕೂಡಾ ಅನುದಾನ ಹಂಚಿಕೆ ಮಾಡಬೇಕಾಗಿದ್ದು, ರಾಜ್ಯದ ಹೊರೆಯನ್ನು ಇದು ಹೆಚ್ಚಿಸಿದೆ. ಆದ್ದರಿಂದ ಯೋಜನಾ ವಿನ್ಯಾಸವನ್ನು ಮರುಪರಿಶೀಲಿಸಿ, ಬೇಡಿಕೆ ಆಧಾರಿತ ಉದ್ಯೋಗ ವ್ಯವಸ್ಥೆಯನ್ನು ಪುನಃ ಸ್ಥಾಪಿಸಿ, ಸಮರ್ಪಕ ಮತ್ತು ಮಿತಿರಹಿತ ಕೇಂದ್ರ ಅನುದಾನ ಒದಗಿಸುವಂತೆ ಕೋರಿದ್ದಾರೆ.

* ಹೆಚ್ಚುವರಿ ಅನುದಾನ ನೀಡುವಂತೆ ಮನವಿ: ಅನೇಕ ಬೆಳೆಗಳಲ್ಲಿ ಕಡಿಮೆ ಖರೀದಿ ಮತ್ತು ಕೊಳೆಯುವಿಕೆಯಿಂದಾಗಿ ಕನಿಷ್ಠ ಬೆಂಬಲ ಬೆಲೆ (MSP) ಖರೀದಿ ಸಾಕಷ್ಟು ಪರಿಣಾಮಕಾರಿ ಆಗಿಲ್ಲ. ಮೆಕ್ಕೆಜೋಳ, ಸೋಯಾಬೀನ್, ಮಾವು, ಮೆಣಸಿನಕಾಯಿ, ಈರುಳ್ಳಿ, ಟೊಮೇಟೊ, ಅರಿಶಿನ ಮತ್ತು ಶುಂಠಿ ಸೇರಿದಂತೆ 8 ಬೆಳೆಗಳಿಗೆ PDPS ಜಾರಿಗೆ ಕರ್ನಾಟಕವು ಪ್ರಸ್ತಾಪಿಸಿದ್ದು, 2026-27ರಲ್ಲಿ ಸಮಯೋಚಿತ ಅನುಷ್ಠಾನಕ್ಕಾಗಿ PM-AASHA ಅಡಿಯಲ್ಲಿ 796 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

* ಪಿಂಚಣಿ ಮೊತ್ತ ಹೆಚ್ಚಳಕ್ಕೆ ಮನವಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿ ಮತ್ತು ಸಹಾಯಕಿಯರಿಗೆ ಕೇಂದ್ರ ಸರ್ಕಾರ ನೀಡುವ ಗೌರವಧನವು ಹಲವು ವರ್ಷಗಳಿಂದ ಹೆಚ್ಚಳ ಆಗಿರುವುದಿಲ್ಲ. ಆದ್ದರಿಂದ ಕೇಂದ್ರ ಪಾಲನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 8,000 ರೂಪಾಯಿ, ಅಡುಗೆ ಸಿಬ್ಬಂದಿ ಮತ್ತು ಸಹಾಯಕಿಯರಿಗೆ ತಿಂಗಳಿಗೆ 5,000 ರೂಪಾಯಿ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಕಾರ್ಯಕ್ರಮದ (NSAP) ವ್ಯಾಪ್ತಿಯನ್ನು ಒಟ್ಟು ಅರ್ಹ ಫಲಾನುಭವಿಗಳ 50%ಕ್ಕೆ ವಿಸ್ತರಿಸಿ, ಪಿಂಚಣಿ ಮೊತ್ತವನ್ನು ಹೆಚ್ಚಿಸುವಂತೆ ವಿನಂತಿಸಲಾಗಿದೆ.

* ಭದ್ರಾ ಮೇಲ್ದಂಡೆ ಯೋಜನೆ: ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಮತ್ತು 2023-24 ಕೇಂದ್ರ ಆಯವ್ಯಯದಲ್ಲಿ ಘೋಷಿಸಿದಂತೆ ₹5,300 ಕೋಟಿ ಕೇಂದ್ರ ಸಹಾಯವನ್ನು ಬಿಡುಗಡೆ ಮಾಡಲು ಮಾಡಬೇಕು ಎಂದು ಮನವಿ ಮಾಡಲಾಗಿದೆ.

* ಹಣಕಾಸು ಆಯೋಗದ ಅನುದಾನ: 15ನೇ ಹಣಕಾಸು ಆಯೋಗದ ಬಾಕಿ ಅನುದಾನ ಮತ್ತು ವಿಪತ್ತು ಪರಿಹಾರ ಮೊತ್ತಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ. ವಿಶೇಷ ಅನುದಾನ 5,495 ಕೋಟಿ ರೂಪಾಯಿ, ರಾಜ್ಯ ಕೇಂದ್ರಿತ ಅನುದಾನ 6,000 ಕೋಟಿ ರೂಪಾಯಿ, 15ನೇ ಹಣಕಾಸು ಆಯೋಗದ ಅನುದಾನ ಕೊರತೆ 4,044 ಕೋಟಿ ರೂಪಾಯಿ ಇದೆ ಎಂದು ವಿವರಿಸಿದರು.

* ಪ್ರಾದೇಶಿಕ ಸಮಾನತೆ: ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶವು ಕಡಿಮೆ ಅಂಕ ಹೊಂದಿದ್ದು, ಇದನ್ನು ಉತ್ತಮಗೊಳಿಸಲು ವಾರ್ಷಿಕ 5,000 ಕೋಟಿ ರೂಪಾಯಿ ಅನುದಾನವನ್ನು ಹೆಚ್ಚುವರಿಯಾಗಿ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ. ವಿತ್ತೀಯ ಶಿಸ್ತು ಮತ್ತು ರಾಷ್ಟ್ರೀಯ ಬೆಳವಣಿಗೆಯತ್ತ ಕರ್ನಾಟಕದ ಬದ್ಧತೆಯನ್ನು ಪುನರುಚ್ಚರಿಸುತ್ತಾ, 2026-27ರ ಆಯವ್ಯಯದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಹಣಕಾಸಿನ ಸಮತೋಲನವನ್ನು ಮತ್ತು ವಿಶ್ವಾಸವನ್ನು ಪುನಃ ಸ್ಥಾಪಿಸುವಂತೆ ಸಚಿವ ಕೃಷ್ಣ ಬೈರೇಗೌಡ ಬೇಡಿಕೆ ಇಟ್ಟಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+