Rain: ರಾಜ್ಯದಲ್ಲಿ ಮುಂಗಾರು ಅಬ್ಬರ; ಮುಂದಿನ 3 ದಿನ ಈ ಭಾಗದಲ್ಲಿ ಹೈ ಅಲರ್ಟ್, ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ (Southwest Monsoon) ಪ್ರಭಾವ ಮುಂದುವರಿದಿದ್ದು, ಕರಾವಳಿ ಕರ್ನಾಟಕ ಭಾಗದಲ್ಲಿ ಸಾಮಾನ್ಯ ಸ್ಥಿತಿಯಲ್ಲಿದೆ. ಕರಾವಳಿಯ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದರೆ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಸುರಿದಿರುವ ವರದಿಯಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಭಾಗದಲ್ಲಿ ಗರಿಷ್ಠ ಪ್ರಮಾಣದ ಮಳೆ ದಾಖಲಾಗಿದೆ. ಮುಂಗಾರು ಚುರುಕಾಗಿರುವುದರಿಂದ ಇಂದಿನಿಂದ ಜೂನ್ 12ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.
ನಿನ್ನೆಯೇ ಕಾಲಿಟ್ಟ ಮುಂಗಾರು
ದೇಶದಲ್ಲಿ ನೈಋತ್ಯ ಮುಂಗಾರು ಮಾರುತಗಳು ಅತ್ಯಂತ ವೇಗವಾಗಿ ಮುನ್ನಡೆಯುತ್ತಿದ್ದು, ದೇಶದ ಪ್ರಮುಖ ರಾಜ್ಯಗಳಿಗೆ ಅಧಿಕೃತವಾಗಿ ಪ್ರವೇಶಿಸಿವೆ. ಜೂನ್ 6ರಂದೇ ಮುಂಗಾರು ಮಾರುತಗಳು ಕರ್ನಾಟಕದ ಬಹುತೇಕ ಭಾಗಗಳು, ಇಡೀ ಗೋವಾ ರಾಜ್ಯ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ತಮಿಳುನಾಡಿನ ಬಹುಪಾಲು ಪ್ರದೇಶಗಳನ್ನು ಯಶಸ್ವಿಯಾಗಿ ಆವರಿಸಿಕೊಂಡಿವೆ. ಅರೇಬಿಯನ್ ಸಮುದ್ರದ ಮಧ್ಯಭಾಗ ಮತ್ತು ಬಂಗಾಳಕೊಲ್ಲಿಯ ಬಹುತೇಕ ಎಲ್ಲ ವಲಯಗಳಿಗೂ ಮುಂಗಾರು ವ್ಯಾಪಿಸಿದ್ದು, ಈಶಾನ್ಯ ಭಾರತದ ಮಿಜೋರಾಂ ಮತ್ತು ಮಣಿಪುರ ರಾಜ್ಯಗಳನ್ನೂ ತಲುಪಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 2-3 ದಿನಗಳಲ್ಲಿ ಮುಂಗಾರು ಮತ್ತಷ್ಟು ಚುರುಕಾಗಲು ವಾತಾವರಣ ಸಂಪೂರ್ಣ ಪೂರಕವಾಗಿದೆ. ಈ ಅವಧಿಯಲ್ಲಿ ಮಾನ್ಸೂನ್ ಮಾರುತಗಳು ಕರ್ನಾಟಕದ ಉಳಿದ ಭಾಗಗಳು, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣದ ಕೆಲವು ಪ್ರದೇಶಗಳು, ತಮಿಳುನಾಡಿನ ಬಾಕಿ ಉಳಿದ ಭಾಗಗಳು ಹಾಗೂ ಈಶಾನ್ಯ ಭಾರತದ ಇತರೆ ರಾಜ್ಯಗಳಿಗೆ ಸಂಪೂರ್ಣವಾಗಿ ವ್ಯಾಪಿಸಲಿವೆ ಎಂದು ಹೇಳಿದೆ.
ಮುಂಗಾರು ಇಷ್ಟು ವೇಗವಾಗಿ ಅರ್ಭಟಿಸಲು ಕರಾವಳಿ ತೀರದಲ್ಲಿ ಉಂಟಾಗಿರುವ ಚಂಡಮಾರುತದ ಪರಿಚಲನೆ ಪ್ರಮುಖ ಕಾರಣವಾಗಿದೆ. ಈ ಹಿಂದೆ ಕರಾವಳಿ ಕರ್ನಾಟಕದ ವಾತಾವರಣದಲ್ಲಿದ್ದ ಇದು ಸದ್ಯ ಸಮುದ್ರ ಮಟ್ಟದಿಂದ ಸುಮಾರು 3.1 ಕಿಲೋಮೀಟರ್ ಎತ್ತರದಲ್ಲಿ ಉತ್ತರ ಕೇರಳ ಮತ್ತು ಅದರ ಸುತ್ತಮುತ್ತಲಿನ ಪರಿಸರದಲ್ಲಿ ಕೇಂದ್ರೀಕೃತವಾಗಿದೆ. ಇದರ ನೇರ ಪರಿಣಾಮವಾಗಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಯಾವೆಲ್ಲ ಜಿಲ್ಲೆಗಳಲ್ಲಿ ಇಂದು ಮಳೆ?
ಇಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದ್ದು, ಕೆಲವು ಪ್ರದೇಶಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮುಂಗಾರು ಪ್ರಭಾವ ಹೆಚ್ಚಾಗಿದ್ದು, ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಲವಾದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇದೇ ವೇಳೆ ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಇನ್ನು ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲೂ ಬಿರುಗಾಳಿ ಸಹಿತ ಮಳೆಯ ಆರ್ಭಟ ಮುಂದುವರಿಯಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ. ರಾಜ್ಯದಾದ್ಯಂತ ಗುಡುಗು ಮತ್ತು ಮಿಂಚಿನ ಅಬ್ಬರ ಇರುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ.
ಎಲ್ಲೆಲ್ಲಿ ಮಳೆ ದಾಖಲು?
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದ್ದು, ಮಂಗಳೂರು ವಿಮಾನ ನಿಲ್ದಾಣದ ವೀಕ್ಷಣಾಲಯ ಕೇಂದ್ರದಲ್ಲಿ 9 ಸೆಂಟಿಮೀಟರ್ನಷ್ಟು ಭಾರಿ ಮಳೆ ಸುರಿದಿದೆ. ರಾಯಚೂರು ಜಿಲ್ಲೆಯ ಕುರ್ಡಿ 6 ಸೆಂಟಿಮೀಟರ್, ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿನಗರದಲ್ಲಿ 5 ಸೆಂಟಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಯಾದಗಿರಿ ಜಿಲ್ಲೆಯ ಕಕ್ಕೇರಿ 4, ಬೆಳಗಾವಿಯ ಅಥಣಿ, ದಕ್ಷಿಣ ಕನ್ನಡದ ಧರ್ಮಸ್ಥಳ ಮತ್ತು ಮೂಡುಬಿದಿರೆ, ವಿಜಯಪುರದ ಇಂಡಿ, ಉತ್ತರ ಕನ್ನಡದ ಕಾರವಾರ, ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ ನಗರ ಮತ್ತು ಸಿದ್ದಾಪುರ, ರಾಯಚೂರಿನ ಲಿಂಗಸಗೂರು, ಗದಗ ಜಿಲ್ಲೆಯ ಶಿರಹಟ್ಟಿ ಹಾಗೂ ಕೊಪ್ಪಳದ ಯಲಬುರ್ಗಾ ವ್ಯಾಪ್ತಿಯಲ್ಲಿ ತಲಾ 3 ಸೆಂ.ಮೀನಷ್ಟು ಮಳೆಯಾಗಿದೆ.













Click it and Unblock the Notifications