Karnataka Weather: ಆಗಸ್ಟ್ 16ರವರೆಗೆ ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ
ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕಾಗುವ ಸಾಧ್ಯತೆ ಇದೆ. ಕಳೆದ ಎರಡು ಮೂರು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದಿಂದ ಉತ್ತಮ ಮಳೆಯಾಗುತ್ತಿದ್ದು ಮುಂದಿನ ಒಂದು ವಾರಗಳವರೆಗೆ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಮುಂದಿನ ವಾರ ಮತ್ತೆ ಚುರುಕುಗೊಳ್ಳಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈನಲ್ಲಿ ಕರಾವಳಿಯಲ್ಲಿ ಅಬ್ಬರಿಸಿದ್ದ ಮಳೆ ಏಕಾಏಕಿ ಕಡಿಮೆಯಾಗಿರುವುದು ಇಲ್ಲಿನ ರೈತರಲ್ಲಿ ಆತಂಕ ಮೂಡಿಸಿದೆ, ಆದರೂ ಮುಂದಿನ ವಾರ ಮಳೆ ಮತ್ತೆ ಚುರುಕುವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿರುವುದು ಆತಂಕವನ್ನು ದೂರವಾಗಿಸಿದೆ.

ಕಳೆದ 24 ಗಂಟೆಯಲ್ಲಿ ರಾಯಚೂರು, ದಾವಣಗೆರೆ, ಮೈಸೂರು, ಹಾಸನ, ಗದಗ, ದಾವಣಗೆರೆ, ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ಆಗಸ್ಟ್ 10ರ ಬೆಳಗ್ಗೆ 8.30 ಕ್ಕೆ ಕೊನೆಯಾದಂತೆ ರಾಯಚೂರು ಜಿಲ್ಲೆಯ ಲಿಂಗುಸೂಗೂರ ತಾಲೂಕಿನ ಪೈದೊಡ್ಡಿ ಎನ್ನುವಲ್ಲಿ 78.5 ಮಿಮೀ ಮಳೆಯಾಗಿದ್ದು ಅತಿ ಹೆಚ್ಚು ಮಳೆ ಬಿದ್ದ ಪ್ರದೇಶ ಎನಿಸಿಕೊಂಡಿದೆ.
ಈ ಜಿಲ್ಲೆಗಳಲ್ಲಿ ಉತ್ತಮ ಮಳೆ
ಬಳ್ಳಾರಿ, ಗದಗ, ಯಾದಗಿರಿ, ರಾಯಚೂರು, ಉಡುಪಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯಾದ್ಯಂತ ಮಳೆ ಪ್ರಮಾಣ ಕಡಿಮೆಯಾದ ನಂತರ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ. ನದಿಗಳ ಹರಿವು ಕೂಡ ಕಡಿಮೆಯಾಗಿದ್ದು, ಭೋರ್ಗರೆಯುತ್ತಿದ್ದ ಜಲಪಾತಗಳು ಸದ್ಯ ಶಾಂತವಾಗಿವೆ. ಮುಂದಿನ ದಿನಗಳಲ್ಲಿ ಮಳೆ ಚುರುಕುಗೊಳ್ಳಲಿದ್ದು, ಜಲಾಶಯಗಳು ಭರ್ತಿಯಾಗುವ ವಿಶ್ವಾಸವಿದೆ.
ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲಿ ಕೂಡ ಮಳೆ ಪ್ರಮಾಣ ಕಡಿಮೆಯಾಗಿದೆ. ಬುಧವಾರ ನಗರದ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗಿದೆ. ಗುರುವಾರ ಬೆಳಗ್ಗೆಯಿಂದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದೆ. ಗುರುವಾರ ಸಂಜೆ ನಗರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications