Karnataka Weather: ಮತ್ತೆ ಕೈಕೊಟ್ಟ ಮುಂಗಾರು.. ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಐದು ದಿನ ಭಾರಿ ಮಳೆ ಮುನ್ಸೂಚನೆ
Karnataka Rains: ರಾಜ್ಯದಲ್ಲಿ ಇದೀಗ ಮುಂಗಾರು ಚುರುಕು ಪಡೆದಿದ್ದರೂ ಸಹ ಹಲವೆಡೆ ಬರೀ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದೆ ಬಿಟ್ಟರೆ, ಮಳೆಯ ಪ್ರಮಾಣ ಕ್ಷೀಣಿಸುತ್ತಿದೆ. ಇನ್ನೂ ಕೆಲವೆಡೆ ಮಾತ್ರ ಧಾರಾಕಾರ ಮಳೆ ಮುಂದುವರೆದಿದೆ. ಮುಂದಿನ ಐದು ದಿನ ಈ ಭಾಗಗಳಲ್ಲಿ ವರುಣ ಆರ್ಭಟ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ (ಜುಲೈ 12) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಕೆಲವು ದಿನಗಳಿಂದ ನಗರದ ಕೆಲವೆಡೆ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಬಹುತೇಕ ನಗರದಲ್ಲಿ ಮಳೆ ಕ್ಷೀಣಿಸಿದ್ದು, ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಆದರೆ ಮುಂದಿನ ಐದು ದಿನ ಬೆಂಗಳೂರು ಸೇರಿದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

5 ದಿನ ಭಾರಿ ಮಳೆ ಮುನ್ಸೂಚನೆ
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ. ಅದರಲ್ಲೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ ಎಂದು ಎಚ್ಚರಿಕೆ ನೀಡಿದೆ. ಬೆಂಗಳೂರು, ಕೋಲಾರ, ಚಾಮರಾಜನಗರ, ಕೊಡಗು, ಮೈಸೂರು, ತುಮಕೂರು, ಚಿತ್ರದುರ್ಗ, ಬಳ್ಳಾರಿ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಮೋಡ ಕವಿದ ವಾತಾವರಣ ಇದ್ದರೂ, ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಬೆಂಗಳೂರಿನ ತಾಪಮಾನದ ವಿವರ
ತಾಪಮಾನದ ವಿಚಾರಕ್ಕೆ ಬಂದರೆ ಮುಖ್ಯವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜುಲೈ 12) ಗರಿಷ್ಠ ತಾಪಮಾನ ಪ್ರಮಾಣ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ ಅಂತಲೂ ತಿಳಿಸಿದೆ.
ಮಲೆನಾಡು, ಕರಾವಳಿ ಜಿಲ್ಲೆಗಳ ಭಾಗಗಳಲ್ಲಿ ಮಾತ್ರ ಭಾರೀ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನ ಕೆಲವೆಡೆ ಅಲ್ಲಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ವರುಣನ ಆರ್ಭಟದ ಪರಿಣಾಮ ರಾಜ್ಯದ ಹಲವೆಡೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದೆ.
ಮಳೆ ಕೊರತೆಯ ಎಚ್ಚರಿಕೆ
ಈ ನಡುವೆಯೇ ಹವಾಮಾನ ಇಲಾಖೆ ಆತಂಕದ ವಿಚಾರ ಹೊರಹಾಕಿದ್ದು, ಕಳೆದ ಬಾರಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಮಳೆಯ ಪ್ರಮಾಣ ಕಡಿಮೆ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಇದರಿಂದ ಕೃಷಿಕರು ಹಾಗೂ ಜನರಿಗೆ ಮುಂದಿನ ದಿನಗಳಲ್ಲಿ ಹೀಗೆ ಮುಂದುವರೆದರೆ ಏನು ಮಾಡುವುದು ಎನ್ನುವ ಭಯದಲ್ಲಿದ್ದಾರೆ. ಯಾಕಂದ್ರೆ ಇಷ್ಟೊತ್ತಿಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಬೇಕಿತ್ತು. ಆದರೆ ಈ ವಾಡಿಕೆಯಷ್ಟು ಕೂಡ ಮಳೆ ಸುರಿಯುತ್ತಿಲ್ಲ. ಇದೇ ಚಿಂತೆಗೆ ಒಳಗಾಗುವಂತೆ ಮಾಡಿದೆ. ಇಂತಹ ಸನ್ನಿವೇಷದಲ್ಲೂ ಕೆಲವೆಡೆ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವುದು ನೆಮ್ಮದಿಯ ವಿಚಾರವಾಗಿದೆ.
ಕೆಲವು ಜಿಲ್ಲೆಗಳಲ್ಲಿ ರಣಮಳೆ ಮುಂದುವರಿದ ಪರಿಣಾಮ ಗುಡ್ಡು ಕುಸಿತದಂತಹ ಘಟನೆಗಳು ಸಂಭವಿಸಿದ್ದು, ರಸ್ತೆ ಹಾಗೂ ಹೆದ್ದಾರಿಗಳ ಮೇಲೆ ಮಣ್ಣು ಸುರಿದು ವಾಹನ ಸವಾರರು ಪರದಾಡಿದ್ದಾರೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿತೇ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಲಿವೆ. ಇದು ಹೊಸದೇನಲ್ಲ, ಅವೈಜ್ಞಾನಿಕ ಕಾಮಗಾರಿಯಿಂದ ಮುಂಗಾರು ಆರಂಭ ಆಗುತ್ತಿದ್ದಂತೆ ಈ ರೀತಿಯ ಸಮಸ್ಯೆಗಳು ಸೃಷ್ಟಿಯಾಗುವುದು ಸಾಮಾನ್ಯವಾಗಿಬಿಟ್ಟಿದೆ. ಅಧಿಕಾರಿಗಳು ಮಾಡುವ ಯಡವಟ್ಟಿನಿಂದ ಮತ್ಯಾರೋ ಸಂಕಷ್ಟಕ್ಕೆ ಸಿಲುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಟ್ಟಿನಲ್ಲಿ ಕಳೆದ ಬಾರಿಗಿಂತ ಈ ಬಾರಿ ಮಳೆಯ ಪ್ರಮಾಣ ಕಡಿಮೆ ಇದ್ದು, ಇದು ಅನ್ನದಾತರು ಹಾಗೂ ಜನರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿರುವುದಂತೂ ನಿಜ.












Click it and Unblock the Notifications