Karnataka weather: ಈ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆ, ಹಲವೆಡೆ ಚಳಿ..ಚಳಿ
ಬೆಂಗಳೂರು, ಡಿಸೆಂಬರ್, 18: ದೇಶದ ದಕ್ಷಿಣ ಭಾಗದ ಹಲವು ರಾಜ್ಯಗಳಲ್ಲಿ ಅಬ್ಬರದ ಮಳೆಯಾಗುತ್ತಲೇ ಇದ್ದು, ಇದರಿಂದ ಈ ಭಾಗದ ಜನರು ತತ್ತರಿಸಿ ಹೋಗಿದ್ದಾರೆ. ನೆರೆಯ ತಮಿಳುನಾಡು, ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿಯತ್ತಿದೆ. ಆದರೆ ಕರ್ನಾಟಕದಲ್ಲಿ ಅಂತಹ ವಾತಾವರಣ ಏನು ಇಲ್ಲ. ಆದರೂ ರಾಜ್ಯದ ಈ ಭಾಗಗಳಲ್ಲಿ ಇನ್ನು ಎರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಸದ್ಯ ಮಳೆಯ ವಾತಾವರಣ ಇಲ್ಲ. ಆದರೆ ಮಂಜು ಮುಸುಕಿದ ವಾತಾವರಣವಂತೂ ಬಹುತೇಕ ಕಡೆ ನಿರ್ಮಾಣವಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳು ಸೇರಿಂದತೆ ಮಲೆನಾಡು ಭಾಗದ ಹಲವು ಭಾಗಗಳಲ್ಲಿ ಇಂದಿನಿಂದ (ಸೋಮವಾರ ಡಿಸೆಂಬರ್ 18) ಎರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆಯದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಶನಿವಾರ ಹಾಗೂ ಭಾನುವಾರ (ಡಿಸೆಂಬರ್ 16, 17)ರಂದು ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಆಗಿದೆ. ಅದರಲ್ಲೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಧಾರಣ ಮಳೆ ಸುರಿದಿದೆ. ಆದರೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಭಾಗದಲ್ಲಿ ಮಳೆಯಾದ ಬಗ್ಗೆ ವರದಿಯಾಗಿಲ್ಲ ಎಂದು ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯುವ ನಿರೀಕ್ಷೆಯಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಒಂದೆರಡು ಭಾಗದಲ್ಲಿ ಮಾತ್ರ ಮಳೆ ಸುರಿಯಬಹುದು. ಆದರೆ ಉತ್ತರ ಕರ್ನಾಟಕದಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ತಿಳಿಸಿದೆ.
ಮತ್ತೊಂದೆಡೆ ಮುಂದಿನ 48 ಗಂಟೆಗಳಲ್ಲಿ ಅಂದರೆ ಬುಧವಾರದವರೆಗೆ ದಕ್ಷಿಣ ಒಳನಾಡಿನ ಕೆಲವು ಭಾಗ, ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಬೀಳಬಹುದು. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಬೀಳುವ ಸೂಚನೆಯಿಲ್ಲ. ಎರಡೂ ದಿನವೂ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನವೂ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲವೆಡೆ ಸಾಧಾರಣ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮತ್ತೊಂದೆಡೆ ನೋಡುವುದಾದರೆ ಗರಿಷ್ಠ ಉಷ್ಣಾಂಶದಲ್ಲಿ ಕೊಂಚ ಕುಸಿತ ಕಾಣಲಿದೆ. ಗರಿಷ್ಠ ಉಷ್ಣಾಂಶವು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ 26 ಡಿಗ್ರಿ ಸೆಲ್ಸಿಯಸ್ನಷ್ಟು ಇದ್ದರೆ, ಕನಿಷ್ಠ ಉಷ್ಣಾಂಶದ ಪ್ರಮಾಣ 19 ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲು ಆಗಬಹುದು. ಬುಧವಾರ ಗರಿಷ್ಠ ಉಷ್ಣಾಂಶದಲ್ಲಿ ಮಾತ್ರ ಸ್ವಲ್ಪ ಏರಿಕೆ ಆಗಲಿದೆ. ಅಂದರೆ 27 ಡಿಗ್ರಿ ಸೆಲ್ಸಿಯಸ್ನಷ್ಟು ಆಗಬಹುದು. ಕನಿಷ್ಠ ಉಷ್ಣಾಂಶದಲ್ಲಿ ಹೆಚ್ಚಿನ ವ್ಯತ್ಯಾಸ ಏನೂ ಇಲ್ಲ. ಮೋಡ ಕವಿದ ವಾತಾವರಣ ಬುಧವಾರದವರೆಗೂ ಮುಂದುವರಿಯಲಿದೆ ಎಂದು ತಿಳಿಸಿದೆ.
ಕೆಲವು ದಿನಗಳಿಂದ ರಾಜ್ಯದ ಕರಾವಳಿ ಹೊರತುಪಡಿಸಿ ಎಲ್ಲೆಡೆ ಚಳಿಯ ವಾತಾವರಣ ಕಂಡುಬಂದಿದ್ದು, ಇದೇ ವಾತಾವರಣ ಇನ್ನು ಹಲವು ದಿನಗಳ ಕಾಲ ಮುಂದುವರೆಯಲಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಭಾಗದಲ್ಲಿ ಚಳಿಯ ಪ್ರಮಾಣ ಅಧಿಕವಾಗಿಯೇ ಇದೆ. ಬೆಂಗಳೂರು, ಮೈಸೂರು ಭಾಗದಲ್ಲಿ ಚಳಿಯ ಸನ್ನಿವೇಶವೇ ಇದ್ದು, ಕನಿಷ್ಠ ಉಷ್ಣಾಂಶದಲ್ಲಿ ಗಣನೀಯ ಏರಿಕೆ ಅಂತೂ ಕಂಡುಬಂದಿಲ್ಲ ಎಂದು ತಿಳಿದುಬಂದಿದೆ.
ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ನಿರ್ಮಾಣ ಆಗಿದ್ದು, ಇನ್ಮುಂದೆಯೂ ಚಳಿಯು ದಿನದಿಂದ ದಿನಕ್ಕೆ ತುಸು ಹೆಚ್ಚಾಗಲಿದೆ. ಆದ್ದರಿಂದ ಆರೋಗ್ಯದ ಮುಂಜಾಗ್ರತಾ ಕ್ರಮಕ್ಕಾಗಿ ಮಕ್ಕಳು ಸೇರಿದಂತೆ ವೃದ್ಧರು ಬೆಚ್ಚನೆಯ ಅನುಭವ ನೀಡುವ ವಸ್ತ್ರಗಳನ್ನು ಧರಿಸುವುದು ಉತ್ತಮವಾಗಿದೆ.












Click it and Unblock the Notifications