Karnataka Monsoon: ಬೆಂಗಳೂರು ಸೇರಿ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ: ಇಲ್ಲಿದೆ ನೋಡಿ ಐಎಂಡಿ ಮುನ್ಸೂಚನೆ
Karnataka Weather: ಮುಂಗಾರು ಸಮಯದಲ್ಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಕ್ಷೀಣಿಸಿದೆ. ಇನ್ನೂ ಜುಲೈ 17ರಿಂದ ರಾಜ್ಯ ರಾಜಧಾನಿ ಬೆಂಗಳೂರು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಉಳಿದ ಕಡೆಗಳಲ್ಲಿ ಒಣಹವೆ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು (ಜುಲೈ 17) ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ನಗರದ ಹಲವೆಡೆ ಸಾಧಾರಣ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಹಾಗೆಯೇ ಶುಕ್ರವಾರ ಸಹ ಬೆಂಗಳೂರು ಸೇರಿ ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಎಂಟ್ರಿ ಕೊಡುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಬೆಂಗಳೂರಿನ ತಾಪಾಮನದ ವಿವರ
ಬೆಂಗಳೂರಿನಲ್ಲಿಂದು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಇದರ ನಡುವೆಯೂ ಇಷ್ಟು ದಿನ ಬಿಸಿನ ಬೇಗೆಗೆ ಬೆಂದಿದ್ದ ನಗರದ ಜನರಿಗೆ ಗುರುವಾರ ಮಳೆರಾಯ ತಂಪೆರೆದಿದ್ದಾನೆ. ನಿನ್ನೆ ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಕಲವೆಡೆ ಮಳೆಯಾಗಿರುವ ವರದಿಯಾಗಿದೆ.
ಭಾರಿ ಮಳೆ ಮುನ್ಸೂಚನೆ
ಕೆಲವೇ ಕ್ಷಣಗಳಲ್ಲಿ ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಜುಲೈ 17 ರಿಂದ 21ರ ವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಭಾಗಗಳಲ್ಲಿ ಭಾರಿ ಮಳೆಯಾಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಭಾಗಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿಡೆದೆ ಒಣಹವೆ ವಾತಾವರಣವೇ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಕೆಲವೆಡೆ ಸುರಿದ ಭಾರಿ ಮಳೆಯಿಂದಾಗಿ ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿತ್ತು. ಆದರೆ ಇದೀಗ ಮತ್ತೆ ತಾಪಮಾನದ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಲವು ಪ್ರಮುಖ ಡ್ಯಾಂಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಲಿದೆ. ಈ ಪರಿಸ್ಥಿತಿ ನಿರ್ಮಾಣವಾಗಲು ಪ್ರಮುಖ ಕಾರಣ ಅಂದ್ರೆ 'ಎಲ್ ನಿನೊ' ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಳೆ ಕಡಿಮೆಯಾಗಲು ಪ್ರಮುಖ ಕಾರಣವೇನು?
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮತ್ತೆ ಕೈಕೊಟ್ಟಿದ್ದು, ಕೃಷಿಕರು, ಜನರಲ್ಲಿ ಆತಂಕ ಮನೆ ಮಾಡಿದೆ. ಈಗಲೇ ಹಿಂಗಾದ್ರೆ ಮುಂಗಾರು ಅವಧಿ ಮುಗಿದ ಮೇಲೆ ಇನ್ನೇನು ಗತಿ ಕಾದಿದೆಯೋ ಎನ್ನುವ ಆತಂಕದಲ್ಲಿದ್ದಾರೆ. ಈ ನಡುವೆಯೇ ಇತ್ತೀಚೆಗಷ್ಟೇ ಹವಾಮಾನ ಇಲಾಖೆ ಆತಂಕದ ವಿಚಾರ ಹೊರಹಾಕಿದ್ದು, ಎಲ್ ನಿನೊ ಎಫೆಕ್ಟ್ನಿಂದ ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಮಳೆಯ ಪ್ರಮಾಣ ಕಡಿಮೆ ಇರಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿತ್ತು.
ಇಷ್ಟೊತ್ತಿಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಬೇಕಿತ್ತು. ಆದರೆ ವಾಡಿಕೆಯಷ್ಟು ಕೂಡ ಮಳೆ ಸುರಿಯುತ್ತಿಲ್ಲ. ಇದು ಚಿಂತೆಗೆ ಒಳಗಾಗುವಂತೆ ಮಾಡಿದೆ. ಒಟ್ಟಿನಲ್ಲಿ ಹೇಳುವುದಾದರೆ ಮಳೆರಾಯನ ಆರ್ಭಟ ಮತ್ತೆ ಯಾವಾಗ ಶುರುವಾಗಲಿದೆಯೋ ಎಂದು ರಾಜ್ಯದ ರೈತರು ಹಾಗೂ ಜನ ಮೋಡದ ಕಡೆ ಮುಖ ಮಾಡಿ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲೇ ಕೆಲವೆಡೆ ಈಗ ಮತ್ತೆ ಸಾಧಾರಣ ಮಳೆ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಮಳೆಯಾದ್ರೆ ರಾಜ್ಯದ ಜನರು ಫುಲ್ ಖುಷ್ ಆಗಲಿದ್ದಾರೆ.












Click it and Unblock the Notifications