Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ದಾಖಲಾಗುವ ಮಳೆ ಮತ್ತು ತಾಪಮಾನದ ವಿವರ
ಕರ್ನಾಟಕ, ಮೇ, 30: ರಾಜ್ಯದ ಹಲವೆಡೆ ಮುಂಗಾರಿಗೂ ಮುಂಚೆಯೇ ಅಬ್ಬರಿಸಿದ ಮಳೆರಾಯ ಜನರ ಜೀವನವನ್ನೇ ಕಿತ್ತುಕೊಂಡಿದ್ದಾರೆ. ಕೆಲವೆಡೆ ಆಲಿಕಲ್ಲು ಸಹಿತ ಸುರಿದ ಮಳೆಗೆ ಮನೆ, ಮಠಗಳು ಕುಸಿದು ಬಿದ್ದಿದ್ದರೆ, ಇನ್ನು ಹಲವೆಡೆ ಬೆಳೆಗಳನ್ನು ಕಳೆದುಕೊಂಡ ಕೃಷಿಕರು ಸೂಕ್ತ ಪರಿಹಾರ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗೆಯೆ ಇಂದು ಕೂಡ ರಾಜ್ಯದ ಕೆಲವು ಭಾಗಗಳಲ್ಲಿ ಮಳೆರಾಯ ಆರ್ಭಟ ಮುಂದುವರೆಸಲಿದ್ದು, ಮತ್ತೆ ಕೆಲವು ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 5 ದಿನಗಳಿಂದ ಬೆಳಗ್ಗೆಯಿಂದ ಸಂಜೆವರೆಗೂ ಮೋಡ ಕವಿದ ವಾತಾವರಣ ಇದ್ದು, ನಂತರ ರಾತ್ರಿ ವೇಳೆ ಜಿನುಗು ಹನಿ ಬೀಳುತ್ತಿದೆ. ಹಾಗೆಯೆ ಇಂದು ಕೂಡ ನಗರದಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೆ ರಾಜ್ಯದಲ್ಲಿ ಮುಂಗಾರು ಪೂರ್ವ ಆರಂಭವಾಗಿದ್ದು, ಮೇ 30 ಮತ್ತು ಮೇ 31ರಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮಳೆ ಪಡೆಯಲಿರುವ ಜಿಲ್ಲೆಗಳು
ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಂಜೆವರೆಗೂ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ರಾತ್ರಿ ವೇಳೆ ಗುಡುಗು ಸಹಿತ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಇನ್ನು ನಗರದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ. ವರೆಗೂ ಹೋಗುವ ಸಂಭವ ಇದೆ ಎಂದು ತಿಳಿಸಿದೆ.
ಈಗಾಗಲೇ ಮುಂಗಾರಿಗೂ ಮುಂಚೆಯೇ ಸುರಿದ ಮಳೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾಂತರವನ್ನು ಸೃಷ್ಟಿಸಿತ್ತು. ಬೆಂಗಳೂರಿನಲ್ಲಿ ಮರಗಳು ಧರೆಗುರುಳಿದರೆ, ಇನ್ನು ರಸ್ತೆಗಳು ಕೆರೆಯಂತಾಗಿ ಮಾರ್ಪಟ್ಟು ವಾಹನ ಸವಾರರು ಪರದಾಡಿದ ಘಟನೆಗಳು ಕೂಡ ಸಂಭವಿಸಿದ್ದವು. ಇನ್ನು ಕೆಲ ಜಿಲ್ಲೆಗಳಲ್ಲಿ ಬೆಳೆ ಹಾನಿಯಾಗಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹಾಗೆಯೆ ಮಂಗಳವಾರ, ಬುಧವಾರವೂ ಕೂಡ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಾಮರಾಜನಗರ, ಕೋಲಾರ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಿದೆ. ಅಲ್ಲದೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸಹ ಘೋಷಣೆ ಮಾಡಲಾಗಿದೆ. ಇನ್ನು ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ದಾಖಲಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ 30-40 ಕಿ.ಮೀ. ಇರಲಿದೆ ಎಂದು ತಿಳಿಸಿದೆ.
ಈಗಾಗಲೇ ಮೇ 29ರಂದು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಾಳೆ ಹೊನ್ನೂರಿನಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ಬಿದ್ದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಲ್ಲಿ 5 ಸೆಂ.ಮೀ. ಮಳೆಯ ಸುರಿದಿದೆ ಎಂದು ವರದಿ ಆಗಿದೆ. ಇನ್ನು ಬೆಳಗಾವಿ, ಹಾವೇರಿ, ಕೊಡಗು ಜಿಲ್ಲೆ ಗೋಣಿಕೊಪ್ಪಲು, ಶ್ರೀಮಂಗಲದಲ್ಲಿ ತಲಾ 2 ಸೆಂ. ಮೀ. ಮಳೆ, ಹಾವೇರಿಯ ಎಂಪಿಎಂಸಿ, ಬೆಳಗಾವಿ ನಗರ, ಕೊಡಗು ಜಿಲ್ಲೆಯ ಪೊನ್ನಂಪೇಟೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ 1 ಸೆಂ.ಮೀ. ಮಳೆ ಬಿದ್ದಿದೆ.
ತಾಪಮಾನ ದಾಖಲೆಯ ವಿವರ
ಮತ್ತೊಂದೆಡೆ ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ಕಲಬುರಗಿ ಜಿಲ್ಲೆಯಲ್ಲಿ ದಾಖಲು ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾಗಿದ್ದು, ಉತ್ತರ ಒಳನಾಡಿನ ಕೆಲವೆಡೆ ತಾಪಮಾನ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ ಎಂದು ತಿಳಿಸಿದೆ.
ಅಲ್ಲದೆ ಜೂನ್ 4ಕ್ಕೆ ನೈಋತ್ಯ ಮುಂಗಾರು ಮಳೆ ಕೇರಳವನ್ನು ಪ್ರವೇಶ ಮಾಡಲಿದೆ. ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮತ್ತೊಂದೆಡೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಜೋರಾಗಿದ್ದು, ಜೂನ್ ಮತ್ತು ಆಗಸ್ಟ್ನಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ ಆಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ತಿಳಿಸಿದೆ.
ಒಟ್ಟಾರೆಯಾಗಿ ಹೇಳುವುದಾದರೆ ಮುಂಗಾರು ಪ್ರವೇಶಕ್ಕೂ ಮುನ್ನವೇ ಈಗಾಗಲೇ ಸುರಿದಿರುವ ಮಳೆ ರಾಜ್ಯದ ಹಲವೆಡೆ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದೆ. ಇದೀಗ ಮುಂಗಾರು ಮಳೆ ಪ್ರವೇಶಕ್ಕೆ ದಿನಗಣನೆ ಆರಂಭವಾಗಿದ್ದು, ಇನ್ನು ಎಷ್ಟು ಅನಾಹುತಗಳನ್ನು ಸಂಭವಿಸುತ್ತವೆಯೋ ಗೊತ್ತಿಲ್ಲ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆಯಾ ಜಿಲ್ಲಾವಾರು ಈ ಬಾರಿಯ ಪ್ರವಾಹ ಬಿಕ್ಕಟ್ಟು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಂಡಿದ್ದಾರೆ.












Click it and Unblock the Notifications