Karnataka Weather: ರಾಜ್ಯಾದ್ಯಂತ ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಹೇಳಿದ್ದೇನು?
ಬೆಂಗಳೂರು, ಜನವರಿ 08: ಕರ್ನಾಟಕ ರಾಜ್ಯದಲ್ಲಿ ಚಳಿಗಾಲ ಆವರಿಸಿದ್ದರ ಮಧ್ಯೆ ಇದೀಗ ಮಳೆಯು ಆಗುತ್ತಿದೆ. ರಾಜ್ಯಾದ್ಯಂತ ದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹೀಗೆ ವ್ಯಾಪಕ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣವಿರಲಿದ್ದು ಮುಂದಿನ ಎರಡು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚನ್ನರಾಯಪಟ್ಟಣ, ತಿಪಟೂರು, ಗೋಕಾಕ್, ಬೈಲಹೊಂಗಲ, ಮೂರ್ನಾಡು, ಭಾಗಮಂಡಲ, ಸಕಲೇಶಪುರ, ಹುಣಸೂರು, ಗೋಕರ್ಣ, ಅರಕಲಗೂಡು, ತರೀಕೆರೆ, ಅಜ್ಜಂಪುರ, ಯುಗಟಿ, ಬೇಲೂರು, ಹಿರಿಯೂರು, ಕೃಷ್ಣರಾಜಪೇಟೆ, ಕೃಷ್ಣರಾಜಸಾಗರ, ಸಾಗರದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ಪ್ರಕಾರ ದಕ್ಷಿಣ ಒಳಾನಾಡಿನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹೊರತು ಪಡಿಸಿ,ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆ ಸಾಧಾರಣದಿಂದ ಭಾರಿ ಮಳೆಯಾಗಬಹುದು. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರಗಳಲ್ಲಿ ಸೋಮವಾರದಂದು ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ.
ಕರ್ನಾಟಕದ 19 ಜಿಲ್ಲೆಗಳಲ್ಲಿ ಜನವರಿ 8 ರಿಂದ ಮಳೆ ಬೀಳುವ ಸಾಧ್ಯತೆ ಇದೆ. ಈ ಪೈಕಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ 13 ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಉಳಿದ ಜಿಲ್ಲೆಗಳಲ್ಲಿ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಭಾರತದ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ನೀಡಿದೆ. ಕರಾವಳಿ ಕರ್ನಾಟಕದ ಭಾಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂಧ ಸಾಧಾರಣದಿಂದ ಭಾರಿ ಮಳೆಯಾಗಲಿದೆ.
ಇನ್ನು ಉತ್ತರ ಒಳನಾಡಿನ ಜಿಲ್ಲೆಗಳನ್ನು ಗಮನಿಸಿದರೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು. ಉಳಿದಂತೆ ಹಾವೇರಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗಳಲ್ಲಿ ಒಣಹವೆ ಇರಲಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಜನವರಿ 09 ರವರೆಗೆ ರಾಜ್ಯದಾದ್ಯಂತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.












Click it and Unblock the Notifications