Karnataka weather: ಮೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಇನ್ನುಳಿದ ಕಡೆ ತಾಪಮಾನ ಏರಿಕೆ ಮೂನ್ಸೂಚನೆ
ಕರ್ನಾಟಕ, ಅಕ್ಟೋಬರ್, 07: ಈ ಬಾರಿ ಮಳೆರಾಯ ಕೈಕೊಟ್ಟ ಹಿನ್ನೆಲೆ ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿಬಿಟ್ಟಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಮಾತ್ರ ಆಗಾಗ ಜಿನುಗು ಮಳೆಯಾಗುತ್ತಿದೆ ಅಷ್ಟೇ. ಇನ್ನು ಇಂದು ಕೆಲವೇ ಕಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆ, ಇನ್ನು ಕೆಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ ತಿಂಗಳಿನಿಂದ ಇಲ್ಲಿಯವರೆಗೂ ಅಂದರೆ ಅಕ್ಟೋಬರ್ ತಿಂಗಳು ಆರಂಭವಾದರೂ ಮಳೆರಾಯ ಕರುಣೆ ತೋರದೇ ಮೋಡದ ಮರೆಯಲ್ಲಿ ಮುನಿಸಿಕೊಂಡು ಅವಿತು ಕುಳಿತಿದ್ದಾನೆ. ಇದರಿಂದ ಅನ್ನದಾತರ ಜೀವನ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಭಾರತದ ಹವಾಮಾನ ಇಲಾಖೆ ನೀಡಿರುವ ಹವಾಮಾನ ಮುನ್ಸೂಚನೆ ಪ್ರಕಾರ, ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಹಜ ಹವಾಮಾನ ಇರಲಿದೆ. ಕೆಲವು ಕಡೆ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣಹವೆ ಇರಲಿದ್ದು, ಕೆಲವು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ತಾಪಮಾನ ಹೆಚ್ಚಳವಾಗುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದಲ್ಲಿ ನಿನ್ನೆ ಕಲಬುರಗಿ ಮತ್ತು ಚಿಕ್ಕನಹಳ್ಳಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ 34.8 ಡಿಗ್ರಿ ಸೆಲ್ಸಿಯಸ್ ದಾಖಲು ಆಗಿದೆ. ಸಮತಟ್ಟು ಪ್ರದೇಶಗಳ ಪೈಕಿ ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ 15.2 ಡಿಗ್ರಿ ಸೆಲ್ಸಿಯಸ್ ದಾಖಲು ಆಗಿದೆ ಎಂದು ತಿಳಿದುಬಂದಿದೆ.
ಇಂದು ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ರಾಯಚೂರು, ದಕ್ಷಿಣ ಒಳನಾಡಿನ ಮಂಡ್ಯ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗೆ ಸಾಮಾನ್ಯಕ್ಕಿಂತ 1ರಿಂದ 2 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗೆಯೇ ಕೊಪ್ಪಳ, ಕೋಲಾರ, ಮೈಸೂರು, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿಗಳಷ್ಟು ಕಡಿಮೆ ಕಾಣುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಇಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯನ್ ದಾಖಲು ಆಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಈಗಾಗಲೇ ಮಳೆಯಿಲ್ಲದೆ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಲಿದ್ದರೆ, ಕೆಲವು ಕಡೆ ಮಾತ್ರ ಸಾಧಾರಣ ಮಳೆಯಿಂದ ನೀರಿನ ಮೂಲಗಳು ತುಂಬಿ ಹರಿಯುತ್ತಿವೆ. ಒಟ್ಟಿನಲ್ಲಿ ಹವಾಮಾನ ಇಲಾಖೆಯ ಪ್ರಕಾರ ಈ ತಿಂಗಳ ಮಧ್ಯದಿಂದ ರಾಜ್ಯದಲ್ಲಿ ಭಾರೀ ಮಾಳೆಯಾದರೆ ಜನರಿಗೆ ನೀರಿನ ಅಭಾವ ತಪ್ಪಿದಂತಾಗುತ್ತದೆ. ಮತ್ತೊಂದೆಡೆ ಬತ್ತಿ ಹೋಗುತ್ತಿರುವ ಜಲಾಶಯಗಳಿಗೂ ಜೀವಕಳೆ ಬಂದಾಂತಾಗುತ್ತದೆ.












Click it and Unblock the Notifications