Karnataka Weather: ವಾರಾಂತ್ಯದಲ್ಲಿ ಯಾವ ಜಿಲ್ಲೆಗಳಲ್ಲಿ ಮಳೆ ತಿಳಿಯಿರಿ
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು ವಾರಾಂತ್ಯದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.
ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆ ಸುರಿಯಲಿದೆ. ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ. ಚದರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸುರಿಯಲಿದೆ.

ಜುಲೈ ತಿಂಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆ ಸದ್ಯ ಕಡಿಮೆಯಾಗಿದ್ದು, ಕರಾವಳಿ ಜಿಲ್ಲೆಗಳಲ್ಲೂ ಮಳೆಯ ಆರ್ಭಟಕ್ಕೆ ಬ್ರೇಕ್ ಬಿದ್ದಿದೆ. ಉಕ್ಕಿ ಹರಿಯುತ್ತಿದ್ದ ನದಿಗಳು ಶಾಂತವಾಗಿದ್ದು, ಜಲಾಶಯಗಳಿಗೆ ಒಳಹರಿವು ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ.
ಮಳೆಯಾದ ಪ್ರದೇಶಗಳು
ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ ಮತ್ತು ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಡಕಣಿ ಎನ್ನುವಲ್ಲಿ ಕಳೆದ 24 ಗಂಟೆಗಳಲ್ಲಿ 101.5 ಮಿಮೀ ಮಳೆಯಾಗಿದ್ದು ಅತಿ ಹೆಚ್ಚು ಮಳೆ ಬಿದ್ದ ಪ್ರದೇಶ ಎನಿಸಿಕೊಂಡಿದೆ.
ಇದನ್ನು ಹೊರತುಪಡಿಸಿ ಉತ್ತರ ಕನ್ನಡ ಜಿಲ್ಲೆಯ ನೀಲ್ಕುಂಡ, ಮಾಗೋಡ, ಹಾರ್ಸಿಕಟ್ಟ, ಕೊಡಣಿ, ಕುಡ್ರಿಗಿ, ಚಿಕ್ಕನಕೋಡು, ನಾಗರಬಸ್ತಿಕೇರಿ, ಶಿವಮೊಗ್ಗ ಜಿಲ್ಲೆಯ ಸುಳಗೋಡು, ಬೆಳಗಾವಿ ಜಿಲ್ಲೆಯ ಕಣಕುಂಬಿ, ಅಮಟೆ, ನೇಸರೆ, ಬೆಳವಟ್ಟಿ, ಗುಂಜಿ, ಮಾಂತುರ್ಗ, ಶಿಂಧೊಳ್ಳಿಯಲ್ಲಿ ಉತ್ತಮ ಮಳೆಯಾಗಿದೆ.
ಇನ್ನು ಉಡಪಿ ಜಿಲ್ಲೆಯ ಕಾರ್ಕುಂಜೆ, ಯೆಡಮೊಗೆ, ಹಾಕ್ಲಾಡಿ, ಹಟ್ಟಿಯಂಗಡಿ, ಅಂಪಾರು, ಹಳ್ಳಿಹೊಳೆ, ಶಿರೂರು, ನಲ್ಲೂರು, ಹೆಂಗವಳ್ಳಿಯಲ್ಲಿ ಉತ್ತಮ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.
ಯಾವ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ?
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಶಿವಮೊಗ್ಗ ಮತ್ತು ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೂಡ ಚದುರಿದಂತೆ ಉತ್ತಮ ಮಳೆ ಸುರಿಯಲಿದೆ. ಬೆಳಗಾವಿ, ವಿಜಯಪುರ, ಹಾಸನ, ಮೈಸೂರು, ಯಾದಗಿರಿ, ಧಾರವಾಡ, ಹಾವೇರಿ ಬಳ್ಳಾರಿ, ವಿಜಯನಗರ, ಕಲಬುರಗಿ, ದಾವಣೆಗೆರೆ, ಚಾಮರಾಜನಗರ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸುರಿಯಲಿದೆ.
ಗದಗ, ಕೊಪ್ಪಳ, ಬಾಗಲಕೋಟೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.











Click it and Unblock the Notifications