Karnataka Weather: ರಾಜ್ಯದಲ್ಲಿ ವರುಣನ ಆರ್ಭಟ ಶುರು? 21 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದ ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಇದರಿಂದ ಕಂಗೆಟ್ಟಿರುವ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ಕೊಂಚ ನೆಮ್ಮದಿಯ ಸುದ್ದಿ ನೀಡಿದ್ದು, ಇಂದು (ಏಪ್ರಿಲ್ 25) ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಗಳ ಪ್ರಕಾರ, ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ 21 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಸಿದೆ.
ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಬೆಳಗಾವಿ, ಗದಗ, ಬಳ್ಳಾರಿ ಮುಂತಾದ ಭಾಗಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಎಚ್ಚರಿಕೆಯನ್ನೂ ನೀಡಲಾಗಿದ್ದು, ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದಿಢೀರ್ ಹವಾಮಾನ ಬದಲಾವಣೆಯಿಂದಾಗಿ ತಾಪಮಾನದಲ್ಲಿ ಕೊಂಚ ಇಳಿಕೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡು ಮತ್ತು ಕರಾವಳಿಯ ಸ್ಥಿತಿಗತಿ
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಸೇರಿದಂತೆ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅತಿ ಹೆಚ್ಚು ಶಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವು ಸ್ಥಳಗಳಲ್ಲಿ ಮಾತ್ರ ಗುಡುಗು ಸಹಿತ ಮಳೆಯಾಗಬಹುದು ಎಂದು ವರದಿ ಸ್ಪಷ್ಟಪಡಿಸಿದೆ.
ಬೆಂಗಳೂರು ಹವಾಮಾನ ಹೇಗಿದೆ?
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣನ ಸಿಂಚನವಾಗುತ್ತಿದ್ದರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾತ್ರ ಸದ್ಯಕ್ಕೆ ಮಳೆಯಾಗುವ ಯಾವುದೇ ಲಕ್ಷಣಗಳಿಲ್ಲ. ಹವಾಮಾನ ವರದಿಯ ಪ್ರಕಾರ, ಏಪ್ರಿಲ್ 28 ರವರೆಗೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಒಣಹವೆ ಮುಂದುವರಿಯಲಿದೆ. ಮೋಡ ಕವಿದ ವಾತಾವರಣ ಕಂಡುಬಂದರೂ, ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ. ನಗರದ ಗರಿಷ್ಠ ತಾಪಮಾನ 36.4 ರಿಂದ 37 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ತಾಪಮಾನದಲ್ಲಿ ಏರಿಕೆ ಎಚ್ಚರಿಕೆ
ಒಂದೆಡೆ ಮಳೆಯಾಗುತ್ತಿದ್ದರೆ, ಮತ್ತೊಂದೆಡೆ ಮಳೆ ಇಲ್ಲದ ಬಹುತೇಕ ಪ್ರದೇಶಗಳಲ್ಲಿ ಮುಂದಿನ 5 ದಿನಗಳಲ್ಲಿ ರಾಜ್ಯದ ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ತಾಪಮಾನ ಹೆಚ್ಚಿರುವ ಕಡೆಗಳಲ್ಲಿ ಜನರು ಮಧ್ಯಾಹ್ನದ ವೇಳೆ ಹೊರಬರುವಾಗ ಎಚ್ಚರಿಕೆ ವಹಿಸಬೇಕು.













Click it and Unblock the Notifications