ರಾಜ್ಯಾದ್ಯಂತ ಮುಂಗಾರು ಆರ್ಭಟ ಶುರು: ಇಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಕರುನಾಡಿಗೆ ಬಹುನಿರೀಕ್ಷಿತ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಲಿದ್ದು, ರಾಜ್ಯದ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದೆ. ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆಯಿಂದ ತಂಪಾಗಿದ್ದ ರಾಜ್ಯದಲ್ಲಿ, ಇದೀಗ ಮುಂಗಾರು ಮಳೆಯ ಅಬ್ಬರ ಶುರುವಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ವರದಿಯ ಪ್ರಕಾರ, ಜೂನ್ 5 ರಂದು (ಇಂದು) ರಾಜ್ಯಾದ್ಯಂತ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಹೈ-ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಮತ್ತು ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳು, ಹಾಗೂ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಣೆ ಮಾಡಿದೆ. ಈ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರು ಹವಾಮಾನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೂನ್ 5 ರವರೆಗೆ 'ಯೆಲ್ಲೋ ಅಲರ್ಟ್' ನೀಡಲಾಗಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗಲು ಹೊತ್ತಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.
ಪ್ರಮುಖ ನಗರಗಳ ಇಂದಿನ ತಾಪಮಾನ
ಇತರ ಪ್ರಮುಖ ನಗರಗಳ ಇಂದಿನ ತಾಪಮಾನವನ್ನು ಗಮನಿಸುವುದಾದರೆ;
ಮಂಗಳೂರಿನಲ್ಲಿ ಗರಿಷ್ಠ 29°C ಮತ್ತು ಕನಿಷ್ಠ 26°C
ಶಿವಮೊಗ್ಗದಲ್ಲಿ 29°C ಮತ್ತು ಕನಿಷ್ಠ 23°C,
ಬೆಳಗಾವಿಯಲ್ಲಿ 29°C ಮತ್ತು ಕನಿಷ್ಠ 23°C,
ಮೈಸೂರಿನಲ್ಲಿ 30°C ಮತ್ತು ಕನಿಷ್ಠ 23°C,
ಮಡಿಕೇರಿಯಲ್ಲಿ 24°C ಮತ್ತು ಕನಿಷ್ಠ 21°C
ಹಾಸನದಲ್ಲಿ 27°C ಮತ್ತು ಕನಿಷ್ಠ 22°C,
ಬಳ್ಳಾರಿಯಲ್ಲಿ 36°C ಮತ್ತು ಕನಿಷ್ಠ 26°C
ರಾಯಚೂರು ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 37-38 ಡಿಗ್ರಿ ಆಸುಪಾಸಿನಲ್ಲಿದ್ದರೂ, ಬಿಸಿಲಿನ ಝಳದ ನಡುವೆ ದಿಢೀರ್ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ರೈತರಿಗೆ ಮತ್ತು ಮೀನುಗಾರರಿಗೆ ಮುನ್ನೆಚ್ಚರಿಕೆ
ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಾದ ಮೈಸೂರು, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆಗಳಿಗೆ ಈ ಮಳೆ ಅತ್ಯಂತ ಪೂರಕವಾಗಿದ್ದು, ರೈತರು ಖಾರಿಫ್ ಬಿತ್ತನೆ ಕಾರ್ಯಗಳಿಗೆ ಸಿದ್ಧತೆ ನಡೆಸುತ್ತಿದ್ದಾರೆ.
ಮತ್ತೊಂದೆಡೆ, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಮುಂಗಾರು ಮಾರುತಗಳು ಹೆಚ್ಚು ಸಕ್ರಿಯವಾಗಿವೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯ ಪ್ರಮಾಣ ಮುಂದಿನ ಐದು ದಿನಗಳ ಕಾಲ ಹೆಚ್ಚಾಗಲಿದೆ. ಕರಾವಳಿ ಭಾಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮುಂದಿನ ಸೂಚನೆ ಬರುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಒಟ್ಟಾರೆಯಾಗಿ, ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯ ಆರ್ಭಟ ಮುಂದುವರಿಯಲಿದೆ. ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸಿಕೊಂಡು ಸುರಕ್ಷಿತವಾಗಿ ಪ್ರಯಾಣ ಬೆಳೆಸುವುದು ಸೂಕ್ತ.












Click it and Unblock the Notifications