ರಾತ್ರಿ 10 ಗಂಟೆಯಿಂದ ವಾರಾಂತ್ಯದ ಕರ್ಫ್ಯೂ; ಮಾರ್ಗಸೂಚಿ
ಬೆಂಗಳೂರು, ಜನವರಿ 07; ಕರ್ನಾಟಕ ಸರ್ಕಾರ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಘೋಷಣೆ ಮಾಡಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ವಾರಾಂತ್ಯ ಕರ್ಫ್ಯೂ ಜಾರಿಗೆ ಬರುತ್ತಿದೆ.
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೆ ಸಿದ್ಧತೆಗಳು ನಡೆದಿವೆ. ಜನವರಿ 8, 9 ಮತ್ತು 15, 16ರಂದು ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಗಳ ಹೊರತುಪಡಿಸಿ ಜನರ ಒಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲು ಜಿಲ್ಲಾಡಳಿತಗಳು ಕ್ರಮ ಕೈಗೊಂಡಿವೆ.
ತುರ್ತು, ಅತ್ಯಾವಶ್ಯಕ ಸೇವೆಗಳು ಮತ್ತು ಕೋವಿಡ್ ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸತಕ್ಕದ್ದು. ಅಧಿಕಾರಿಗಳು, ಸಿಬ್ಬಂದಿಗೆ ಓಡಾಟಕ್ಕೆ ಅವಕಾಶವಿದೆ.

ಎಲ್ಲಾ ಪಾರ್ಕ್ಗಳು ಬಂದ್ ಆಗಲಿವೆ
* ಎಲ್ಲಾ ಸಾರ್ವಜನಿಕ ಉದ್ಯಾನಗಳು ಬಂದ್ ಆಗಿರಲಿವೆ.
* ಮಾಹಿತಿ ತಂತ್ರಜ್ಞಾನ ಉದ್ದಿಮೆಗಳು ಒಳಗೊಂಡಂತೆ ಎಲ್ಲಾ ಉದ್ದಿಮೆಗಳ ಕಾರ್ಯಾಚರಣೆಗೆ ವಾರಾಂತ್ಯದ ಕರ್ಫ್ಯೂ ಇಂದ ವಿನಾಯತಿ ಇದೆ. ನೌಕರರು ಆಯಾ ಸಂಘ, ಸಂಸ್ಥೆಗಳು ನೀಡುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸಿ ಸಂಚಾರ ನಡೆಸಬಹುದುದು.
* ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು, ರೋಗಿಗಳನ್ನು ಕರೆದುಕೊಂಡು ಹೋಗುವವರು, ಲಸಿಕೆ ಹಾಕಿಸಿಕೊಳ್ಳಲು ಉದ್ದೇಶಿಸಿರುವ ವ್ಯಕ್ತಿಗಳು ದಾಖಲೆ ತೋರಿಸಿ ಸಂಚರಿಸಬಹುದು.

ಹೋಟೆಲ್ಗಳಲ್ಲಿ ಪಾರ್ಸೆಲ್ಗಳು ಮಾತ್ರ
* ಬೇಕರಿ, ಆಹಾರ, ದಿನಸಿ, ಹಣ್ಣು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತ್ಗಳು, ಮಾಂಸ ಮತ್ತು ಮೀನು, ಪಶು ಆಹಾರದ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸಹ ಅನುಮತಿ ನೀಡಲಾಗಿದೆ.
* ಸಾರ್ವಜನಿಕ ವಿತರಣೆಯ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿ ಇದೆ. ಜನರು ತಮ್ಮ ಮನೆಯ ಹೊರಗೆ ಓಡಾಡುವುದನ್ನು ಕಡಿಮೆ ಮಾಡುವುದಕ್ಕಾಗಿ 24x7 ಅವಧಿಯಲ್ಲಿ ಸಾಮಗ್ರಿಗಳನ್ನು ಮನೆಮನೆಗೆ ವಿತರಿಸಲು (Home Delivery) ಪ್ರೋತ್ಸಾಹಿಸಬೇಕು.
* ರೆಸ್ಟೋರೆಂಟ್ ಮತ್ತು ಹೋಟೆಲ್ಗಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮಾತ್ರ ಅನುಮತಿ ಇದೆ.

ರೈಲು, ವಿಮಾನ ಸಂಚಾರಕ್ಕೆ ಅನುಮತಿ
ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ಇದೆ. ವಿಮಾನ, ರೈಲುನಿ ಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ (ಕಂಪನಿಗಳು ನಿರ್ವಹಿಸುವ ಕ್ಯಾಬ್ಗಳು ಸೇರಿದಂತೆ) ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಪ್ರಯಾಣ ದಾಖಲೆ ಅಥವಾ ಟಿಕೆಟ್ ಪ್ರದರ್ಶಿಸಿದ ನಂತರ ಮತ್ತು ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಸಂಚಾರ ನಡೆಸಬೇಕು.

ವಿವಾಹ ಸಮಾರಂಭಗಳು
ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನೊಂದಿಗೆ ಹೊರಾಂಗಣಗಳಲ್ಲಿ 200 ಜನರು ಮೀರದಂತೆ ಹಾಗೂ ಒಳಾಂಗಣಗಳಲ್ಲಿ 100 ಜನರು ಮೀರದಂತೆ ಮದುವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅವಕಾಶವಿದೆ.
ಜನರು ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಜೊತೆಗೆ ಸರ್ಕಾರದ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಗೃಹ ಸಚಿವರ ಎಚ್ಚರಿಕೆ
ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ, "ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications