ಫ್ಯಾನಿ ಚಂಡಮಾರುತ ಎಫೆಕ್ಟ್: ನಾಳೆಯಿಂದ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು, ಏ.29: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಫ್ಯಾನಿ ಚಂಡಮಾರುತವಾಗಿ ಬದಲಾಗಿದೆ. ಇದರ ಪರಿಣಾಮ ಈಗಾಗಲೇ ರಾಜ್ಯದ ಹಲವೆಡೆ ಮಳೆ ಆರಂಭವಾಗಿದೆ.
ಸೋಮವಾರ ಉತ್ತರ ಒಳನಾಡಿನ ಬೆಳಗಾವಿ, ಹಾಗೂ ದಕ್ಷಿಣ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಭಾನುವಾರ ಹಳಿಯಾಳದಲ್ಲಿ 30 ಮಿ.ಮೀ, ಬನವಾಸಿ, ಆನವಟ್ಟಿ, ಟಿ. ನರಸೀಪುರದಲ್ಲಿ 10 ಮಿ.ಮೀನಷ್ಟು ಮಳೆಯಾಗಿದೆ.
ಏ.30 ಮತ್ತು ಮೇ 1ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ಚಿತ್ರದುರ್ಗ, ಹಾಸನ ಸೇರಿದಂತೆ ಹಲವೆಡೆ ಮಳೆ ನಿರೀಕ್ಷಿಸಲಾಗಿದೆ. ಫ್ಯಾನಿ ಚಂಡಪಾರುತದಿಂದಾಗಿ ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ಮಳೆಯಾಗಲಿದೆ.
ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಸೂಚನೆ ನೀಡಿದರು.
ಮುಖ್ಯ ಕಾರ್ಯದರ್ಶಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿಗಳು ಕಳೆದ ವರ್ಷ ಮಳೆಗಾಲದಲ್ಲಿ ಕೊಡಗು ಸೇರಿದಂತೆ ಮಲೆನಾಡು, ಕರಾವಳಿ ಭಾಗಗಳಲ್ಲಿ ಭಾರಿ ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ಈ ಬಾರಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜನಪ್ರತಿಧಿಗಳು ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅವಕಾಶ ಇಲ್ಲದ ಕಾರಣ ಮುಖ್ಯ ಕಾರ್ಯದರ್ಶಿಗಳು ಅಧಿಕಾರಿಗಳ ತಂಡ ರಚಿಸಿ ಈ ಜಿಲ್ಲೆಗಳಲ್ಲಿ ಮುಂಗಾರಿನ ಪೂರ್ವಸಿದ್ಧತೆಯನ್ನು ಪರಿಶೀಲಿಸುವಂತೆ ತಿಳಿಸಿದರು.
ಅಲ್ಲದೆ ಕೊಡಗು ಜಿಲ್ಲೆಯಲ್ಲಿ ಕಳೆದ ಮಳೆಗಾಲದಲ್ಲಿ ಸಂಭವಿಸಿದ ಅನಾಹುತಗಳ ಹಿನ್ನೆಲೆಯಲ್ಲಿ ಕೈಗೆಟ್ಟಿಕೊಳ್ಳಲಾಗಿರುವ ಮೂಲಸೌಕರ್ಯ ಅಭಿವೃದ್ಧಿ, ದುರಸ್ತಿ ಹಾಗೂ ಪುನರ್ವಸತಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವನ್ನು ಖಾತರಿ ಪಡಿಸಿಕೊಳ್ಳುವಂತೆ ಸೂಚಿಸಿದರು.












Click it and Unblock the Notifications