Karnataka Rain: ರಾಜ್ಯದಲ್ಲಿ ಬರ ಮತ್ತು ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆ
ಬೆಂಗಳೂರು, ಜುಲೈ 26: ಕರ್ನಾಟಕದಲ್ಲಿ ಈ ಬಾರಿ ಪ್ರವಾಹ ಮತ್ತು ಬರ ಪರಿಸ್ಥಿತಿ ಒಟ್ಟೊಟ್ಟಿಗೆ ಎದುರಾಗಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಉಂಟಾಗಿದ್ದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಬರ ಪರಿಸ್ಥಿತಿ ಉಂಟಾಗಿದೆ.
14 ಜಿಲ್ಲೆಗಳ ಕೆಲವು ಭಾಗಗಳಲ್ಲಿ ಕೊರತೆ ಮಳೆ ದಾಖಲಾಗಿದ್ದರೆ, 13 ಜಿಲ್ಲೆಗಳ ಕೆಲವು ಭಾಗಗಳಲ್ಲಿ ಈಗ ಭಾರೀ ಮಳೆಯಾಗುತ್ತಿದೆ. ಬರ ಮತ್ತು ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಳೆ ಸಂಬಂಧಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ಹಾಸನ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ವಿಜಯನಗರದ ಕೆಲವು ಭಾಗಗಳಲ್ಲಿ ಜೂನ್ 24 ರಿಂದ ಜುಲೈ 24 ರವರೆಗೆ ಮಳೆ ಕೊರತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ತಿಳಿಸಿದ್ದರು ಆದರೆ, (ಜುಲೈ 1 ರಿಂದ ಜುಲೈ 24) ಇದೀಗ ಭಾರೀ ಮಳೆಯಾಗುತ್ತಿದೆ. ಆದರೂ, ಈ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಕೊರತೆ ಮಳೆ ದಾಖಲಾಗಿದೆ, ಪರಿಸ್ಥಿತಿಯನ್ನು ನಿಭಾಯಿಸುವುದು ಸರ್ಕಾರಕ್ಕೆ ಸವಾಲಾಗಿದೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
''ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಮತ್ತು ಉತ್ತರ-ಆಂತರಿಕ ಭಾಗಗಳಲ್ಲಿ ಹಠಾತ್ ಪ್ರವಾಹ ಉಂಟಾಗಬಹುದು ಎಂದು ಎಚ್ಚರಿಕೆಯನ್ನು ನೀಡಿದೆ. ರಾಜ್ಯ ಸರ್ಕಾರವು ಅಪಾಯ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದೆ ಮತ್ತು ಮಳೆ ಸಂಬಂಧಿತ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಸನ್ನದ್ಧವಾಗಿದೆ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಜೂನ್ ತಿಂಗಳಿನಲ್ಲಿ ಮಳೆ ಕೊರತೆ
ಅಂಕಿಅಂಶಗಳ ಪ್ರಕಾರ, 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರಿಗೆ ರೆಡ್ ಅಲರ್ಟ್ ಘೋಷಿಸಿದ್ದರೆ, ಬೆಳಗಾವಿ, ಕೊಡಗು ಮತ್ತು ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬಳ್ಳಾರಿ ಮತ್ತು ಹಾಸನದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆದರೂ ರಾಜ್ಯದ 500ಕ್ಕೂ ಹೆಚ್ಚು ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಅದನ್ನು ನಿಭಾಯಿಸಲು ಕ್ರಮ ಕೈಗೊಳ್ಳಲಾಗಿದೆ. ಅದೇ ಸಮಯದಲ್ಲಿ, ಕೆಲವು ಜಿಲ್ಲೆಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಚಾಲ್ತಿಯಲ್ಲಿದೆ ಎಂದು ಕಂದಾಯ ಇಲಾಖೆ ಹೇಳಿದೆ.
ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದ ಮಾಜಿ ಕುಲಸಚಿವ ಪ್ರೊ.ಎಂ.ಬಿ.ರಾಜೇಗೌಡ ಮಾತನಾಡಿ, 'ದಕ್ಷಿಣ ಒಳನಾಡು ಕರ್ನಾಟಕ (ಶೇ.1) ಮತ್ತು ಕರಾವಳಿ ಕರ್ನಾಟಕದಲ್ಲಿ (ಶೇ.5) ಕೊರತೆ ಕಡಿಮೆಯಾಗಿದ್ದರೆ, ಮಲೆನಾಡಿನಲ್ಲಿ (ಶೇ.25) ಹೆಚ್ಚು ಮಳೆಯಾಗಿದೆ. ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಾಗಿದೆ. ಜೂನ್ನಲ್ಲಿ ಆಗಿರುವ ಮಳೆ ಕೊರತೆಯನ್ನು ಈಗ ಸರಿದೂಗಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಆಗಸ್ಟ್ 1ರ ವರೆಗೆ ಬಿತ್ತನೆ ಮಾಡಬಹುದು' ಎಂದು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಮಳೆ ಸಂಬಂಧಿತ ದುರ್ಘಟನೆಯಲ್ಲಿ ಮೂವರು ಸಾವು
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಸುರಿದ ಮಳೆಗೆ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂಬಳೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಒಂದೂವರೆ ವರ್ಷದ ಸ್ಪೂರ್ತಿ ಸಾವನ್ನಪ್ಪಿದ್ದಾಳೆ. ಎರಡು ದಿನಗಳ ಹಿಂದೆ ಹಾವೇರಿ ಜಿಲ್ಲೆಯ ಮಾಲಾಪುರ ಗ್ರಾಮದಲ್ಲಿ ಮನೆ ಕುಸಿದು ಬಿದ್ದು ರಕ್ಷಿಸಲಾಗಿದ್ದ ಭಾಗ್ಯ ಚಳ್ಳಮರದ್ (3) ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬೀರಾಳ ಗ್ರಾಮದಲ್ಲಿ ಬಸಮ್ಮ (35) ಎಂಬುವರು ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.












Click it and Unblock the Notifications