ಗಣರಾಜ್ಯೋತ್ಸವ ಪರೇಡ್; ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆ
ಬೆಂಗಳೂರು, ಜನವರಿ 16; ಈ ಬಾರಿಯ ಗಣರಾಜ್ಯೋತ್ಸವ ಪರೇಡ್ಗೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆಯಾಗಿದೆ. 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. 'ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ಎಂಬ ವಿಷಯಾಧಾರಿತ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವಕ್ಕೆ ಆಯ್ಕೆಯಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ ಎಂದು ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಸ್ತಬ್ಧಚಿತ್ರ ತಿರಸ್ಕಾರ; ಇನ್ನು ಗಣರಾಜ್ಯೋತ್ಸವದ ಪರೇಡ್ಗಾಗಿ ಕೇರಳ ಸರ್ಕಾರ ರಚನೆ ಮಾಡಿದ್ದ ಸ್ತಬ್ಧಚಿತ್ರವನ್ನು ರಕ್ಷಣಾ ಸಚಿವಾಲಯ ತಿರಸ್ಕರಿಸಿದೆ. ಪ್ರವಾಸೋದ್ಯಮದ ಜೊತೆಗೆ ಮಹಿಳಾ ಸಬಲೀಕರಣದ ಸಂದೇಶವನ್ನು ಸಾರುವ ಚಡಯಮಂಗಲಂ ಜಟಾಯುಪಾರ ಮಾದರಿ ಸಿದ್ಧಪಡಿಸಲಾಗಿತ್ತು.
ಕೇರಳ ಸರ್ಕಾರದ ಈ ಸ್ತಬ್ಧ ಚಿತ್ರದ ಮುಂದೆ ಶ್ರೀ ನಾರಾಯಣ ಗುರು ಪ್ರತಿಮೆಯನ್ನು ಇರಿಸಲು ಕರ್ನಾಟಕವು ಉದ್ದೇಶಿಸಿತ್ತು. ಆದರೆ ಈ ಸ್ತಬ್ಧಚಿತ್ರ ತಿರಸ್ಕಾರಗೊಂಡಿದೆ. ಕರ್ನಾಟಕ ಸರ್ಕಾರದ 'ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ಎಂಬ ವಿಷಯಾಧಾರಿತ ಸ್ತಬ್ಧಚಿತ್ರ ಆಯ್ಕೆಗೊಂಡಿದೆ.
ಎಚ್. ಡಿ. ಕುಮಾರಸ್ವಾಮಿ ಟ್ವೀಟ್; ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಈ ಕುರಿತು ಟ್ವೀಟ್ ಮಾಡಿದ್ದಾರೆ.
ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ,"ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ" ಎಂದು ಹೇಳಿದ್ದಾರೆ.
"ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ. ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್ʼಗೆ ಸಮಿತಿಯು ಅಂಗೀಕಾರ ಮಾಡಬೇಕು. ಕೂಡಲೇ ಸಂಬಂಧಪಟ್ಟ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕು ಎಂದು ಒತ್ತಾಯ ಮಾಡುತ್ತೇನೆ" ಎಂದು ಶನಿವಾರ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ಮೂಲಕ ಸಿದ್ದರಾಮಯ್ಯ ಆಕ್ರೋಶ; ಗಣರಾಜ್ಯೋತ್ಸವ ಪರೇಡ್ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ತಳಸಮುದಾಯದ ಮಹಾಪುರುಷರ ಬಗ್ಗೆ ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ?. ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ?. ಅಂತಹ ಅಭಿಪ್ರಾಯವನ್ನು ಬಿಜೆಪಿ ಪಕ್ಷ ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಹಿಂದೂ ಧರ್ಮದ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿ ಅವಮಾನಿಸಿರುವುದು 'ಹಿಂದು ಹೃದಯ ಸಾಮ್ರಾಟ' ಎಂದು ಕರೆಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಇನ್ನೂ ಬಂದಿಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಶತಮಾನದ ಹಿಂದೆಯೇ ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.












Click it and Unblock the Notifications