Karnataka Rain : 5 ದಿನ ರಾಜ್ಯಾದ್ಯಂತ ಮಳೆ: ಎಲ್ಲಾ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ವಿವರ
ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದೆ, ಶುಕ್ರವಾರ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇನ್ನು ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಹೆಮ್ಮಿಗೆಪುರದಲ್ಲಿ 11 ಮಿಮೀ ಮಳೆಯಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗತಿಕಮಾಡೆನಹಳ್ಳಿಯಲ್ಲಿ 108.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೇ 7 ಮತ್ತು 8ರಂದು ಸಾಧಾರಣ ಮಳೆಯಾಗಲಿದ್ದು, ಮೇ 9 ರಿಂದ 11 ರವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 7 ರಂದು ಒಣಹವೆ ಇರಲಿದ್ದು, ಮೇ 8 ರಿಂದ 11 ರವರೆಗೆ ಉತ್ತಮ ಮಳೆಯಾಗುತ್ತದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೇ 10ರವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದು, ಬೀದರ್, ಕಲಬುರಗಿಯಲ್ಲಿ ಮೇ 7ರಂದು ಮಾತ್ರ ಮಳೆಯಾಗಲಿದ್ದು ನಂತರ ಒಣಹವೆ ಮುಂದುವುರೆಯುವುದಾಗಿ ತಿಳಿಸಿದೆ. ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮೇ 7ರಂದು ಒಣಹವೆ ಇರಲಿದ್ದು ಮೇ 8ರಿಂದ 11ರವರೆಗೆ ಉತ್ತಮ ಮಳೆಯಾಗಲಿದೆ. ವಿಜಯಪುರ ಮತ್ತು ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ
ದಕ್ಷಿಣ ಒಳನಾಡಿ ಬಳ್ಳಾರಿಯಲ್ಲಿ ಮೇ 10ರವರೆಗೆ ಉತ್ತಮ ಮಳೆಯಾಗಲಿದ್ದು, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಬಿಬಿಎಂಪಿ ವ್ಯಾಪ್ತಿಯ ಹಲವು ಭಾಗಗಳಲ್ಲಿ ಶನಿವಾರ ಮಧ್ಯಾಹ್ನ ಉತ್ತಮ ಮಳೆಯಾಗಿದ್ದು, ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಭಾನುವಾರ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications