ಮೋದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿನಂದನೆ!
ಬೆಂಗಳೂರು, ಡಿ. 25: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ (ಪಿಎಂ ಕಿಸಾನ್ ಯೋಜನೆ) ಇಂದು 9 ಕೋಟಿ ರೈತರಿಗೆ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು 18 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸರಕಾರ ಜಮಾ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ಬಿಡುಗಡೆ ಮಾಡಿ ತಮ್ಮ ರೈತಪರ ಕಳಕಳಿಯನ್ನು ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಶ್ಲಾಘಿಸಿದ್ದಾರೆ.
ಪಿಎಂ ಕಿಸಾನ್ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂರು ಕಂತುಗಳಲ್ಲಿ ವರ್ಷಕ್ಕೆ ಒಟ್ಟು 6,000 ರೂಪಾಯಿ ನೀಡಲಾಗುತ್ತಿದೆ. ಈ ಯೋಜನೆ ಆರಂಭವಾದ ದಿನದಿಂದ ಇದುವರೆಗೆ 1 ಲಕ್ಷ 10 ಸಾವಿರ ಕೋಟಿ ರೂಪಾಯಿ ರೈತರ ಖಾತೆಗಳಿಗೆ ಜಮಾ ಆಗಿದೆ. ಇದು ಕೇಂದ್ರದ ಬಿಜೆಪಿ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಅನುಷ್ಠಾನಕ್ಕೆ ಬಂದ ಅತ್ಯಂತ ಮಹತ್ವದ ಯೋಜನೆಯಾಗಿದೆ ಎಂದು ವಿವರಿಸಿದ್ದಾರೆ.
ರೈತರ ಖಾತೆಗೆ 18000 ಕೋಟಿ ರೂ ನೇರ ಜಮಾ; ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರವು ಕೃಷಿ ಉತ್ಪಾದನಾ ವೆಚ್ಚ ಕಡಿಮೆ ಮಾಡಿದೆ. ಮಣ್ಣಿನ ಆರೋಗ್ಯ ಕಾರ್ಡ್, ಕೋಟ್ಯಂತರ ರೈತರಿಗೆ ಫಸಲ್ ಬಿಮಾ ಯೋಜನೆ ಮೂಲಕ ನೆರವು, ಬೇವು ಲೇಪಿತ ಯೂರಿಯಾ ಸೇರಿದಂತೆ ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ಕಳೆದ 2014ರಿಂದ ರೈತಪರವಾಗಿ ನಿರಂತರ ಚಿಂತನೆ, ಯೋಜನೆ ಅನುಷ್ಠಾನದ ಮೂಲಕ ತಮ್ಮ ಕಾಳಜಿ ವ್ಯಕ್ತಪಡಿಸಿದ್ದಾರೆಂದು, ಪ್ರಧಾನಿ ನರೇಂದ್ರ ಮೋದಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇದೆ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
Recommended Video