ಕಾಂಗ್ರೆಸ್ ಗೊಂದಲ ಬಗೆಹರಿಸಲು ಸಭೆ ಕರೆದ ವೇಣುಗೋಪಾಲ್!
ಬೆಂಗಳೂರು, ಆಗಸ್ಟ್ 29 : 'ನಾನು ಮತ್ತೆ ಮುಖ್ಯಮಂತ್ರಿಯಾಗುತ್ತೇನೆ. ನನಗೆ ಭರವಸೆ ಇದೆ, ಜನರು ನನಗೆ ಆಶೀರ್ವಾದ ಮಾಡುತ್ತಾರೆ' ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಈ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್-ಜೆಡಿಸ್ ಮೈತ್ರಿ ಸರ್ಕಾರದಲ್ಲಿ ಎಲ್ಲರೂ ಸರಿ ಇಲ್ಲ ಎಂಬ ಸುದ್ದಿಯನ್ನು ಹೇಳಿಕೆ ಹುಟ್ಟುಹಾಕಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉಳಿಸಿಕೊಂಡು ಹೋಗುವ ಅನಿವಾರ್ಯತೆ ಇದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿನ ಗೊಂದಲವನ್ನು ಮೊದಲು ಬಗೆಹರಿಸಬೇಕು. ಅದಕ್ಕಾಗಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಭೆ ಕರೆದಿದ್ದಾರೆ.
ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಪಕ್ಷ ಹೇಳಿದೆ. ಆದರೆ, ನಿಜವಾಗಿಯೂ ನಡೆಯುವ ಚರ್ಚೆ ಸಿದ್ದರಾಮಯ್ಯ ಅವರ ಹೇಳಿಕೆ ಮತ್ತು ಅದಕ್ಕೆ ಕಾಂಗ್ರೆಸ್ ಶಾಸಕರು, ಸಚಿವರು ನೀಡುತ್ತಿರುವ ಪ್ರತಿಕ್ರಿಯೆಗಳು.
ಕಾಂಗ್ರೆಸ್ ನಾಯಕರ ಮಾತಿಗೆ ಕಡಿವಾಣ ಹಾಕಿ ಇಲ್ಲವಾದಲ್ಲಿ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಅವರು ಕೆ.ಸಿ.ವೇಣುಗೋಪಾಲ್ ಅವರಿಗೆ ತಿಳಿಸಿದ್ದಾರೆ. ಇದರಿಂದಾಗಿ ಪಕ್ಷದ ನಾಯಕರ ಸಭೆಯನ್ನು ವೇಣುಗೋಪಾಲ್ ಕರೆದಿದ್ದಾರೆ.

ಸೆ.1 ಮತ್ತು 2ರಂದು ಸಭೆ
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸೆ.1 ಮತ್ತು 2ರಂದು ಬೆಂಗಳೂರಿನಲ್ಲಿ ಪಕ್ಷದ ನಾಯಕರ ಸಭೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರು ಸೆ.3ರಿಂದ ವಿದೇಶ ಪ್ರವಾಸಕ್ಕೆ ತೆರಳಲಿದ್ದು, ಅದಕ್ಕೂ ಮೊದಲು ಈ ಸಭೆ ನಡೆಯಲಿದೆ.
ಲೋಕಸಭೆ ಚುನಾವವಣೆ ಸಿದ್ಧತೆ, ಸಿದ್ದರಾಮಯ್ಯ ಹೇಳಿಕೆ, ವಿವಿಧ ಸಚಿವರು ಮತ್ತು ಶಾಸಕರ ಹೇಳಿಕೆಗಳು ಮುಂತಾದ ಪಕ್ಷದ ವಿದ್ಯಮಾನಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಹಲವು ಕಾರಣಗಳಿಗಾಗಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಸರ್ಕಾರದ ಮೇಲೆ ಪ್ರಭಾವ ಬೀರಬಾರದು
ಸಿದ್ದರಾಮಯ್ಯ ಹೇಳಿಕೆಗಳ ಬಳಿಕ ಪಕ್ಷದಲ್ಲಿ ಹಲವಾರು ವಿದ್ಯಮಾನಗಳು ನಡೆಯುತ್ತಿವೆ. ಸಚಿವ ಸ್ಥಾನದ ಆಕಾಂಕ್ಷಿಗಳು ಬಣ ರಾಜಕೀಯ ನಡೆಸಲು ಮುಂದಾಗುತ್ತಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೇಲೆ ಆಗಲಿದೆ. ಆದ್ದರಿಂದ, ಎಲ್ಲಾ ಗೊಂದಲ ಬಗೆಹರಿಸಲು ಕೆ.ಸಿ.ವೇಣುಗೋಪಾಲ್ ಸಭೆ ಕರೆದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ. ಇಂತಹ ಹೇಳಿಕೆಗಳಿಂದ ಮೈತ್ರಿಗೆ ಧಕ್ಕೆ ಆಗಬಾರದು ಎಂದು ಎಲ್ಲಾ ನಾಯಕರ ಸಭೆಯನ್ನು ಕರೆಯಲಾಗಿದೆ.

ಸರ್ಕಾರಕ್ಕೆ 100 ದಿನ
ಆಗಸ್ಟ್ 30ಕ್ಕೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು 100 ದಿನವಾಗಲಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಹಿರಿಯ ನಾಯಕರು ಪಕ್ಷದ ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಮತ್ತೊಂದು ಕಡೆ ನಿಗಮ-ಮಂಡಳಿ ನೇಮಕಾತಿ ಆಗಿಲ್ಲ ಎಂದು ಶಾಸಕರು ಅಸಮಾಧಾನಗೊಂಡಿದ್ದಾರೆ.
ಕೆ.ಸಿ.ವೇಣುಗೋಪಾಲ್ ಅವರು ಆ.31ರಂದು ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆ.1 ಮತ್ತು 2ರಂದು ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿ, ಸಂಪುಟ ರಚನೆ, ನಿಗಮ-ಮಂಡಳಿ ನೇಮಕದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಪರಮೇಶ್ವರ ಹೇಳುವುದೇನು?
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು, 'ಮೈತ್ರಿ ಸರ್ಕಾರ ಅಭದ್ರವಲ್ಲ ಸುಭದ್ರವಾಗಿದೆ. ಈ ಬಗ್ಗೆ ಯಾವುದೇ ಆತಂಕ ಬೇಡ. ಮೂರು ತಿಂಗಳಿಗೊಮ್ಮೆ ಸಚಿವರ ಮೌಲ್ಯ ಮಾಪನ ಮಾಡಲು ಹೈಕಮಾಂಡ್ ಸೂಚಿಸಿದೆ ಅದರಂತೆ ಮೌಲ್ಯ ಮಾಪನ ನಡೆಯುತ್ತಿದೆ' ಎಂದು ಹೇಳಿದರು.
ಶ್ರಾವಣದ ಬಳಿಕ ಸರ್ಕಾರ ಪತನವಾಗಲಿದೆ ಎಂಬ ಬಿ.ಎಸ್.ಯಡಿಯೂರಪ್ಪ ಮಾತಿಗೆ ವ್ಯಂಗ್ಯವಾಡಿದ ಅವರು, 'ನೋಡೋಣ ಶ್ರಾವಣದ ಬಳಿಕ ಭಾದ್ರಪದ, ನಂತರ ಕಾರ್ತಿಕ ಹೀಗೆ ಬರುತ್ತದೆ' ಎಂದು ಕುಟುಕಿದರು.

ಕೆಪಿಸಿಸಿ ಅಧ್ಯಕ್ಷರ ಹೇಳಿಕೆ
'ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ ಮಾಡಲಾಗಿದೆ. ಮೈತ್ರಿ ಸರ್ಕಾರದಲ್ಲಿ ಯಾವುದೇ ಅಸಮಾಧಾನವಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸಲು ಪ್ರಯತ್ನ ನಡೆಸುತ್ತಿದೆ ಎಂದು ಕುಮಾರಸ್ವಾಮಿ ಅವರು ಎಂದೂ ಹೇಳಿಲ್ಲ. ಅವರ ಆರೋಪ ಮಾಡಿರುವುದು ಬಿಜೆಪಿಯ ವಿರುದ್ಧ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.












Click it and Unblock the Notifications