ಕೆಂಪೇಗೌಡ ಅಧ್ಯಯನ ಕೇಂದ್ರ ವಿವಾದ: ಹಾಲಿ Vs ಮಾಜಿ ಸರ್ಕಾರ ತಿಕ್ಕಾಟ
ಬೆಂಗಳೂರು, ಡಿಸೆಂಬರ್ 4: ನಾಡಪ್ರಭು ಕೆಂಪೇಗೌಡ ಅಧ್ಯಯನ ಕೇಂದ್ರ ಸ್ಥಾಪಿಸಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಈಗಿನ ಯಡಿಯೂರಪ್ಪನವರ ಸರ್ಕಾರ ಹಿಂಪಡೆದಿದೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡಿ.ಕೆ ಶಿವಕುಮಾರ್, 'ಕೆಂಪೇಗೌಡ ಅವರ ಹೆಸರಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವುದು ನಾಡನ್ನು ಕಟ್ಟಿದ ಮಹಾನ್ ವ್ಯಕ್ತಿಗೆ ಸಲ್ಲಿಸುವ ಗೌರವ. ಈ ವಿಚಾರದಲ್ಲೂ ಯಡಿಯೂರಪ್ಪ ಸರ್ಕಾರ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ವಿಚಾರ' ಎಂದು ವಾಗ್ದಾಳಿ ನಡೆಸಿದರು.
ಆದರೆ, ರಾಜ್ಯದಲ್ಲಿ ನೆರೆ ಹಾವಳಿ ಉಂಟಾಗಿದ್ದರಿಂದ ಅನುದಾನದ ಕೊರತೆಯುಂಟಾಗಿ ಯೋಜನೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಪ್ರಸ್ತಾಪಿಸಲಾಗಿತ್ತು. ಈಗ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಮುಂದಿನ ಬಜೆಟ್ನಲ್ಲಿ ಕೆಂಪೇಗೌಡ ಅಧ್ಯಯನ ಕೇಂದ್ರಕ್ಕೆ 50 ಕೋಟಿ ಅನುದಾನ ಮೀಸಲಿಡುವಂತೆ ಸರ್ಕಾರಕ್ಕೆ ಮರು ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಈ ಯೋಜನೆಯನ್ನು ಕೈಬಿಟ್ಟಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಅಧ್ಯಯನ ಕೇಂದ್ರ ರಚನೆ
'ವಿಶ್ವಮಾನ್ಯ ಬೆಂಗಳೂರು ನಗರವನ್ನು ಕಟ್ಟಿ ಜಾಗತಿಕ ಭೂಪಟದಲ್ಲಿ ಗುರುತಿಸುವಂತಹ ಕೆಲಸ ಮಾಡಿದ ನಾಡಪ್ರಭು ಕೆಂಪೇಗೌಡರ ಹೆಸರಲ್ಲಿ ನಮ್ಮ ಸರ್ಕಾರ, ನಾನು ಹಿಂದೆ ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿದ್ದಾಗ ಅಧ್ಯಯನ ಕೇಂದ್ರ ರಚನೆ ಮಾಡಿ ಆದೇಶ ಹೊರಡಿಸಿತ್ತು. ಅದಕ್ಕೆ ಅಗತ್ಯ ಹಣಕಾಸನ್ನು ಕೂಡ ಬಿಡುಗಡೆ ಮಾಡಿತ್ತು' ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಯಡಿಯೂರಪ್ಪ ದ್ವೇಷ ರಾಜಕಾರಣ
ಆದರೆ ದ್ವೇಷದ ರಾಜಕಾರಣ ಮುಂದುವರಿಸಿರುವ ಯಡಿಯೂರಪ್ಪನವರ ಸರ್ಕಾರ ಈಗ ಈ ಆದೇಶವನ್ನು ಕೂಡ ರದ್ದು ಮಾಡಿದೆ. ನಾಡು ಕಟ್ಟುವ ಮೂಲಕ ನಮ್ಮ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಗೆ ಅಭೂತಪೂರ್ವ ಕೊಡುಗೆ ನೀಡಿದ್ದ ಹೆಮ್ಮೆಯ ವ್ಯಕ್ತಿ ಕೆಂಪೇಗೌಡರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ ಬಿಜೆಪಿ ಸರ್ಕಾರ ಅದನ್ನು ಹಿಂಪಡೆದಿರುವುದು ಖಂಡನೀಯ ಹಾಗೂ ಕೆಂಪೇಗೌಡರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದರು.

ಉಗ್ರ ಹೋರಾಟದ ಎಚ್ಚರಿಕೆ
ಸರ್ಕಾರದ ಈ ನಿರ್ಧಾರ ಕೇವಲ ಒಂದು ಸಮುದಾಯದ ವಿರುದ್ಧ ಮಾಡಿರುವ ಪ್ರಹಾರ ಮಾತ್ರವಲ್ಲ. ಇಡೀ ನಾಡಿಗೇ ಮಾಡಿರುವ ಅವಮರ್ಯಾದೆ. ಸರ್ಕಾರ ಈ ಕೂಡಲೇ ದ್ವೇಷದ ರಾಜಕಾರಣವನ್ನು ನಿಲ್ಲಿಸಬೇಕು. ತಮ್ಮ ಈ ನಿರ್ಧಾರವನ್ನು ಹಿಂಪಡೆದು, ಕೆಂಪೇಗೌಡರ ಹೆಸರಲ್ಲಿ ಅಧ್ಯಯನ ಕೇಂದ್ರ ರಚನೆಯ ಮರು ಆದೇಶವನ್ನು ಹೊರಡಿಸಬೇಕು. ಇಲ್ಲವಾದರೆ ನಾವು ಈ ವಿಚಾರವಾಗಿ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಡಿಕೆ ಶಿವಕುಮಾರ್ ಎಚ್ಚರಿಸಿದರು.

ಯೋಜನೆ ತಾತ್ಕಾಲಿಕ ಮುಂದೂಡಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾಡ್೯ 129 ರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠ ಮತ್ತು ಸಂಶೋಧನಾ ಕೇಂದ್ರ ಸ್ಥಾಪನೆ ಕುರಿತು 2018-19 ರ ಸಾಲಿನಲ್ಲಿ ಕೇವಲ 10 ಲಕ್ಷ ರೂ. ಅನುದಾನ ಮೀಸಲಿಟ್ಟಿದ್ದರಿಂದ, ಅನುದಾನದ ಕೊರತೆಯುಂಟಾಗಿತ್ತು. ಹಾಗೂ ನೆರೆ ಹಾವಳಿಯಿಂದ ತಾತ್ಕಾಲಿಕವಾಗಿ ಯೋಜನೆಯನ್ನು ಮುಂದೂಡಲು ಪ್ರಸ್ತಾಪಿಸಲಾಗಿತ್ತು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

ಸರ್ಕಾರ ಯೋಜನೆ ಕೈಬಿಟ್ಟಿಲ್ಲ
ಆದರೆ ಸದರಿ ಯೋಜನೆ ವರದಿ ಈಗಾಗಲೇ ಸಿದ್ದಪಡಿಸಿದ್ದು, ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠ ಮತ್ತು ಸಂಶೋಧನ ಕೇಂದ್ರ ಅವಶ್ಯಕತೆಯಿರುವ ಹಿನ್ನಲೆಯಲ್ಲಿ ಮುಂದಿನ ಅಯ್ಯವ್ಯಯದಲ್ಲಿ ರೂ 50 ಕೋಟಿ ಗಳ ಅನುದಾನ ಮೀಸಲಿಡುವ ನಿರೀಕ್ಷೆಗೊಳಪಟ್ಟು ಸದರಿ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ಕೋರಿ ಸರ್ಕಾರಕ್ಕೆ ಮರು ಪ್ರಸ್ತಾವನೆಯನ್ನು ಮರು ಸಲ್ಲಿಸಿದೆ. ಸರ್ಕಾರ ಯಾವುದೇ ಕಾರಣಕ್ಕೂ ಯೋಜನೆ ಕೈಬಿಟ್ಟಿಲ್ಲ ಇದರ ಬಗ್ಗೆ ತಪ್ಪು ಮಾಹಿತಿಯನ್ನು ನೀಡಲಾಗಿದೆ ಎಂದು ಸ್ಪಷ್ಟೀಕರಣ ನೀಡಲಾಗಿದೆ.












Click it and Unblock the Notifications