ಕನ್ನಡದ ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ
ಈ ಬಾರಿ ಇಬ್ಬರು ಕನ್ನಡ ಲೇಖಕರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪ್ರಕಟವಾಗಿದ್ದು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಶಿರಸಿ-ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿಯು 50 ಸಾವಿರ ರೂಪಾಯಿ ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ. ದಾದಾಪೀರ್ ಅವರ 'ನೀಲಕುರಿಂಜಿ' ಕಥಾ ಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಬಂದಿದ್ದರೆ ತಮ್ಮಣ್ಣ ಬೀಗಾರ ಅವರ 'ಬಾವಲಿ ಗುಹೆ' ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಸಂದಿದೆ. 'ನೀಲಕುರಿಂಜಿ' ಯನ್ನು ರಾಯಚೂರು ಜಿಲ್ಲೆಯ ಕೆ.ಗುಡುದಿನ್ನಿಯ ವೈಷ್ಣವಿ ಪ್ರಕಾಶನ ಹಾಗೂ 'ಬಾವಲಿ ಗುಹೆ'ಯನ್ನು ಬೆಂಗಳೂರಿನ ಅಭಿನವ ಪ್ರಕಾಶನವು ಪ್ರಕಟಿಸಿವೆ.

ಯುವ ಸಾಹಿತ್ಯ ಪ್ರಶಸ್ತಿಯ ಜ್ಯೂರಿಗಳಾಗಿ ಉಷಾ, ನಗರಗೆರೆ ರಮೇಶ್ ಹಾಗೂ ಎನ್.ಎಸ್. ಗುಂಡೂರ ಕಾರ್ಯ ನಿರ್ವಹಿಸಿದ್ದರೆ ಬಾಲ ಸಾಹಿತ್ಯ ಪ್ರಶಸ್ತಿಗೆ ಶಿವಲಿಂಗಪ್ಪ ಹಂದಿಹಾಳು, ಲೋಹಿತ್ ನಾಯ್ಕರ್ ಹಾಗೂ ಎಂ.ಎಚ್ ನಾಗರಾಜು ಅವರು ಜ್ಯೂರಿಗಳಾಗಿದ್ದರು. ಪುಸ್ತಕ ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕರಾದ ಡಾ. ಸರಜೂ ಕಾಟ್ಕರ್ ಅವರು ಉಸ್ತುವಾರಿಯಲ್ಲಿ ನಡೆಯಿತು. ಪ್ರಶಸ್ತಿಗಳನ್ನು ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು.












Click it and Unblock the Notifications