ಚುನಾವಣಾ ಪ್ರಚಾರದ ಅಖಾಡಕ್ಕೆ ಕಿಚ್ಚ ಎಂಟ್ರಿ; ಬೊಮ್ಮಾಯಿ ಪರ ಸುದೀಪ್ ಪ್ರಚಾರ ವರ್ಕೌಟ್ ಆಗಲ್ಲ; ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು,ಏಪ್ರಿಲ್5: ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ.ಇತ್ತ ರಾಜ್ಯಾದ್ಯಂತ ಪ್ರಚಾರವನ್ನ ನಡೆಸುತ್ತಿರು ರಾಜಕೀಯ ಪಕ್ಷಗಳು ಹಲವು ತಂತ್ರಗಾರಿಕೆಯನ್ನ ನಡೆಸುತ್ತಿದ್ದು, ಸಿನಿಮಾ ನಟರನ್ನ ಸ್ಟಾರ್ ಪ್ರಚಾರಕರನ್ನಾಗಿ ಕರೆತರುವ ಪ್ಲಾನ್ ನಡೆಯುತ್ತಿದೆ.
ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಪ್ರಚಾರವನ್ನ ನಡೆಸುತ್ತೇವೆ ಎಂದು ನಟ ಕಿಚ್ಚ ಸುದೀಪ್ ಹೇಳಿಕೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಈ ಕುರಿತು ಬುಧವಾರ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಾಧ್ಯಮಗಳ ಜೊತೆಗೆ ಮಾತನಾಡಿ, ನಟ ಸುದೀಪ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ನಡೆಸುವುದಾಗಿ ಹೇಳಿರುವುದು ಅವರ ವೈಯಕ್ತಿಕ ವಿಚಾರ. ಆದರೆ, ಇದರಿಂದ ಯಾವುದೇ ದೊಡ್ಡ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲಿನ ವಿಶ್ವಾಸದಿಂದ ಅವರ ಪರ ಪ್ರಚಾರ ಮಾಡುತ್ತೇನೆ ಎಂದು ಸುದೀಪ್ ಹೇಳಿದ್ದಾರೆ. ಅದು ಅವರ ವೈಯಕ್ತಿಕ ವಿಚಾರ. ಬಿಜೆಪಿಯವರು ಅಭಿವೃದ್ಧಿ ವಿಚಾರದಲ್ಲಿ ವೈಫಲ್ಯ ಕಂಡಿದ್ದು, ಇಂಥ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಇದರಿಂದ ಪ್ರಯೋಜನವಾಗದು ಎಂದು ಹೇಳಿದ್ದಾರೆ.
ನಾನು ಸಿನಿಮಾ ನಟರ ಬಗ್ಗೆ ಲಘುವಾಗಿ ಮಾತನಾಡುವುದಿಲ್ಲ. ನಟರನ್ನು ನೋಡಲು ಜನರು ಬರುತ್ತಾರೆ. ಕೆಲವು ಕಡೆ ಕಾಂಗ್ರೆಸ್ ಪರ, ಕೆಲವು ಕಡೆ ಬಿಜೆಪಿ ಪರ ಪ್ರಚಾರ ಮಾಡುವ ನಟರು ಇದ್ದಾರೆ. ಆದರೆ ಅವರೆಲ್ಲ ಒಂದು ಪಕ್ಷಕ್ಕೆ ಸ್ಥಿರವಾಗಿ ಪ್ರಚಾರ ಮಾಡುವುದಿಲ್ಲ. ಅವರವರ ಬಾಂಧವ್ಯದ ಮೇಲೆ ಪ್ರಚಾರಕ್ಕೆ ಬರುತ್ತಾರೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನನಗೆ ನನ್ನ ಕಾರ್ಯಕರ್ತರೇ ನನ್ನ ಸ್ಟಾರ್ ಪ್ರಚಾರಕರು. ಪಂಚರತ್ನ ಯೋಜನೆಗಳನ್ನು ಇಟ್ಟುಕೊಂಡು ಜನರ ಬಳಿ ಹೋಗುತ್ತೇನೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಕೆಲವು ಕಡೆ ಪ್ರಚಾರಕ್ಕೆ ಬರಲಿದ್ದಾರೆ. ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವಶ್ಯಕತೆ ಇದ್ದ ಕಡೆ ಚುನಾವಣಾ ಪ್ರಚಾರಕ್ಕೆ ಬರ್ತೀನಿ ಅಂತ ಹೇಳಿದ್ದಾರೆ. ನಾನು ಯಾವ ಚಿತ್ರ ನಟರನ್ನು ಕೂಡಾ ವೈಯಕ್ತಿಕವಾಗಿ ದುರುಪಯೋಗಪಡಿಸಿಕೊಳ್ಳುವುದಿಲ್ಲ. ನಟರಲ್ಲಿ ಎಲ್ಲಾ ವರ್ಗದ ಜನರಿಗೂ ಬೇಕಾದವರು ಇರುತ್ತಾರೆ. ಹೀಗೆ ದುರುಪಯೋಗ ಪಡಿಸಿಕೊಂಡು ಅವರ ಘನತೆ ಹಾಳು ಮಾಡಬಾರದು ಎಂದು ಹೇಳಿದರು.
ಸಿಎಂ ಪರ ಸುದೀಪ್ ಪ್ರಚಾರ: ಕಾಂಗ್ರೆಸ್ ವ್ಯಂಗ್ಯ
ಇನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಪ್ರಚಾರ ಮಾಡುವ ವಿಚಾರವಾಗಿ ಕಾಂಗ್ರೆಸ್ ವ್ಯಂಗ್ಯವಾಡಿದೆ. ಪ್ರಧಾನಿ ನರೇಂದ್ರ ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ತಮ್ಮ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೀಗ ಚಿತ್ರ ನಟರ ಎದುರು ಶರಣಾಗಿದ್ದಾರೆ ಎಂದು ಬಿಜೆಪಿ ವಿರುದ್ದ ಕಾಂಗ್ರೆಸ್ ಲೇವಡಿ ಮಾಡಿದೆ.
ಬಿಜೆಪಿಯಲ್ಲಿ ವರ್ಚಸ್ಸು ಹೊಂದಿರುವ ರಾಜಕೀಯ ನಾಯಕರಿಲ್ಲದ ಕಾರಣ ಸಿನಿಮಾ ನಟರ ಮೇಲೆ ಬಿಜೆಪಿ ನಾಯಕರು ಮೊರೆ ಹೋಗಿದೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.












Click it and Unblock the Notifications