ಜೆಡಿಎಸ್, ಕೆಜೆಪಿ ದೋಸ್ತಿ ಸುಳಿವು ಕೊಟ್ಟ ಯಡಿಯೂರಪ್ಪ!

ಶಾದಿಭಾಗ್ಯ ಯೋಜನೆ ವಿಸ್ತರಿಸರಣೆಗೆ ಹಾಗೂ ಎಪಿಎಲ್ ಕಾರ್ಡ್ದಾರರಿಗೂ ಪಡಿತರ ವಿತರಣೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡೆಸುತ್ತಿರುವ ಅಹೋರಾತ್ರಿ ಧರಣಿ ಮುಂದುವರೆದಿದೆ. ಗುರುವಾರ ಧರಣಿ ಸ್ಥಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಜೆಡಿಎಸ್ ಪ್ರತಿಭಟನೆ ಆರಂಭಿಸಿದರೆ ತಾವು ಸಹಕಾರ ನೀಡುವುದಾಗಿ ತಿಳಿಸಿದರು.
ಪ್ರತಿಪಕ್ಷ ನಾಯಕ ಕುಮಾರಸ್ವಾಮಿ ಕೂಡ ಶಾದಿ ಭಾಗ್ಯ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ರೈತರ ಹಿತಾಸಕ್ತಿಗಾಗಿ ಭತ್ತಕ್ಕೆ ಬೆಂಬಲ ಬೆಲೆ ನೀಡಬೇಕು, ಕಾಲುಬಾಯಿ ರೋಗಕ್ಕೆ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಅವರ ಎಲ್ಲಾ ಬೇಡಿಕೆಗಳಿಗೆ ನನ್ನ ಸಹಮತವಿದೆ ಎಂದರು.
ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡರೆ ಕೆಜೆಪಿ ಅವರಿಗೆ ಸಂಪೂರ್ಣ ಸಹಕಾರ ನೀಡುತ್ತದೆ. ರಾಜ್ಯದ ಜನರ ಒಳಿತಿಗಾಗಿ ನಾವು ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕಾಗಿದೆ ಎಂದು ಯಡಿಯೂರಪ್ಪ ಹೇಳಿದರು. ಕುಮಾರಸ್ವಾಮಿ ಅವರೊಂದಿಗೆ ಹೋರಾಟ ನಡೆಸಿರುವ ಯಡಿಯೂರಪ್ಪ ಲೋಕಸಭೆ ಚುನಾವಣೆಯಲ್ಲಿಯೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ? ಎಂಬ ಅನುಮಾನ ಹುಟ್ಟುಹಾಕಿದೆ.
ಕೆಲವು ದಿನಗಳ ಹಿಂದೆ ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರ ಗೆಲುವಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಯಡಿಯೂರಪ್ಪ ಹೇಳಿ ಮೈತ್ರಿ ಮಾತುಕತೆಯ ಸುಳಿವು ನೀಡಿದ್ದರು. ಸದ್ಯ ಕುಮಾರಸ್ವಾಮಿ ಅವರ ಜೊತೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳುವ ಮೂಲಕ ಮತ್ತೊಮ್ಮೆ ಅಚ್ಚರಿ ಮೂಡಿಸಿದ್ದರಾರೆ. (ನ.24ರವರೆಗೆ ಧರಣಿ ವಿಸ್ತರಿಸಿದ ಯಡಿಯೂರಪ್ಪ)
ಸಾಣೇಹಳ್ಳಿ ಶ್ರೀ ವಿರೋಧ : ಬಡ ಅಲ್ಪಸಂಖ್ಯಾತ ಹೆಣ್ಣು ಮಕ್ಕಳಿಗೆ ಸರ್ಕಾರ ರೂಪಿಸಿರುವ ಶಾದಿಭ್ಯಾಗ ಯೋಜನೆಯನ್ನು ತಾವು ವಿರೋಧಿಸುವುದಾಗಿ ಸಾಣೇಹಳ್ಳಿ ಮಠದ ಶ್ರೀಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ. ತರೀಕರೆಯಲ್ಲಿ ಗುರುವಾರ ಮಾತನಾಡಿದ ಅವರು, ಇಂತಹ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿರುವುದು ಸೂಕ್ತವಲ್ಲ ಎಂದು ಪ್ರತಿಪಾದಿಸಿರುವ ಶ್ರೀಗಳು, ಇಂತಹ ಯೋಜನೆಯನ್ನು ತಾವು ಬಲವಾಗಿ ವಿರೋಧಿಸುವುದಾಗಿ ಹೇಳಿದರು.












Click it and Unblock the Notifications