ಮಡಿಕೇರಿಯಲ್ಲಿ ಬೆಳಕಿನ ದಸರಾ ಆರಂಭ
ಮಡಿಕೇರಿ, ಅಕ್ಟೋಬರ್ 15 : ಮಂಜಿನ ನಗರಿ ಮಡಿಕೇರಿಯಲ್ಲಿ ಆಚರಿಸುವ ದಸರಾಕ್ಕೆ ಬುಧವಾರ ಸಂಜೆ ಚಾಲನೆ ದೊರೆತಿದೆ. ಕರಗಗಳಿಗೆ ಪೂಜೆ ಸಲ್ಲಿಸಿ, ನಾಡಿಗೆ ಸುಭಿಕ್ಷೆಯುಂಟಾಗಲೆಂದು ಪ್ರಾರ್ಥಿಸುವ ಮೂಲಕ ಐತಿಹಾಸಿಕ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗಿದೆ.
ಅಕ್ಟೋಬರ್ 14ರ ಬುಧವಾರ ಸಂಜೆ ಪಂಪಿನಕೆರೆ ಬಳಿ ಮಡಿಕೇರಿ ನಗರ ದಸರಾ ಸಮಿತಿ, ದಸರಾ ಉಪ ಸಮಿತಿ, ದಶಮಂಟಪ ಸಮಿತಿಯ ಪದಾಧಿಕಾರಿಗಳು ನೂರಾರು ಜನರ ಸಮ್ಮುಖದಲ್ಲಿ ಕರಗಗಳಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ನಗರ ದಸರಾ ಸಮಿತಿ ಅಧ್ಯಕ್ಷರು ಹಾಗೂ ನಗರಸಭಾ ಅಧ್ಯಕ್ಷರಾದ ಬಂಗೇರ, ಉಪಾಧ್ಯಕ್ಷೆ ಲೀಲಾ ಶೇಷಮ್ಮ ಮುಂತಾದವರು ಉಪಸ್ಥಿತರಿದ್ದರು. [ಅಕ್ಟೋಬರ್ 18ರಂದು ತಲಕಾವೇರಿಯಲ್ಲಿ ತೀರ್ಥೋದ್ಭವ]

ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ಕರಗವನ್ನು ವ್ರತಧಾರಿ ಪಿ.ಪಿ.ರಮೇಶ್, ಗೌಳಿಬೀದಿಯ ಶ್ರೀ ಕಂಚಿಕಾಮಾಕ್ಷಿ ಕರಗವನ್ನು ಗಿರೀಶ್, ನಗರಸಭೆ ಬಳಿಯ ಶ್ರೀ ದಂಡಿನ ಮಾರಿಯಮ್ಮ ಕರಗವನ್ನು ಮಧು ಮತ್ತು ಶ್ರೀ ಕೋಟೆ ಮಾರಿಯಮ್ಮ ಕರಗವನ್ನು ಶಶಿಕುಮಾರ್ ಹೊರುವ ಮೂಲಕ ಮೆರವಣಿಗೆಯನ್ನು ಆರಂಭಿಸಿದರು. [ಮೈಸೂರು ದಸರಾದ ಚಿತ್ರ ಸಂಪುಟ]
ನವರಾತ್ರಿ ಉತ್ಸವ ಆರಂಭದ ಬುಧವಾರ ಮಧ್ಯಾಹ್ನ ನಾಲ್ಕು ಶಕ್ತಿದೇವತೆಗಳ ವ್ರತಧಾರಿಗಳೊಂದಿಗೆ ದೇವಾಲಯ ಸಮಿತಿಯವರು ಮಂಗಳವಾದ್ಯ ಸಹಿತ ಕರಗ ನಿರ್ಮಾಣಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಹೊತ್ತು ಮೆರವಣಿಗೆಯ ಮೂಲಕ ಬನ್ನಿ ಮಂಟಪಕ್ಕೆ ತೆರಳಿ ಅಗತ್ಯ ಪೂಜಾ ವಿಧಿ-ವಿಧಾನಗಳೊಂದಿಗೆ ಅತ್ಯಾಕರ್ಷಕವಾಗಿ ಕರಗಗಳನ್ನು ಕಟ್ಟಿ ಹೂವುಗಳಿಂದ ಅಲಂಕರಿಸಿ ಸಂಜೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು.
ಪಂಪಿನ ಕೆರೆ ಆವರಣದಿಂದ ಹೊರ ಬಂದ ನಾಲ್ಕು ಕರಗಗಳ ಮೆರವಣಿಗೆಗೆ ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಈಡುಗಾಯಿ ಒಡೆಯುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಪಂಪಿನಕೆರೆ ಬಳಿಯಿಂದ ಹೊರಟ ಕರಗಗಳು ಎ.ವಿ.ಶಾಲೆ ಬಳಿಯ ಬನ್ನಿಮಂಟಪಕ್ಕೆ ತೆರಳಿ, ಅಲ್ಲಿಂದ ಮಹದೇವಪೇಟೆಯ ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸ್ವೀಕರಿಸಿದ ತಮ್ಮ ತಮ್ಮ ದೇವಾಲಯಗಳಿಗೆ ತೆರಳಿದವು.
ಕರಗಗಳು ಸಾಗುವ ದಾರಿಯುದ್ದಕ್ಕೂ ಸಾರ್ವಜನಿಕರು ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿದರು. ಬುಧವಾರದಿಂದ ವಿಜಯದಶಮಿವರೆಗೆ ಈ ಕರಗಗಳು ನಗರ ಪ್ರದಕ್ಷಿಣೆ ನಡೆಸಲಿದೆ. ಮಡಿಕೇರಿ ದಸರಾಕ್ಕೆ ಕರಗಪೂಜೆ ನಡೆಸಿ ವಿದ್ಯುಕ್ತವಾಗಿ ಚಾಲನೆ ನೀಡಲಾಗುತ್ತದೆ.
ಆ ನಂತರ 9 ದಿನಗಳ ಕಾಲ ಕರಗವು ನಗರ ಪ್ರದಕ್ಷಿಣೆ ಹಾಕುತ್ತದೆ. ಈ ಸಂದರ್ಭ ನಗರದ ಎಲ್ಲಾ ಜನರು ಜಾತಿ ಬೇಧ ಮರೆತು ಕರಗ ಬರುವ ದಾರಿಯನ್ನು ಗುಡಿಸಿ, ಸಾರಿಸಿ ರಂಗೋಲಿಯಿಟ್ಟು ಬರಮಾಡಿಕೊಳ್ಳುತ್ತಾರೆ. ಅಲ್ಲದೆ ಮಂಗಳಾರತಿ ಎತ್ತಿ ಪೂಜೆ ಸಲ್ಲಿಸುತ್ತಾರೆ.












Click it and Unblock the Notifications