ಕೆಎಂಎಫ್ ಹಾಲಿನ ದರ ಪರಿಷ್ಕರಣೆ: 3 ರೂ. ದರ ಹೆಚ್ಚಳ ಬೇಡ ಎಂದ ಸಿಎಂ ಬೊಮ್ಮಾಯಿ
ಬೆಂಗಳೂರು, ನವೆಂಬರ್ 21: 'ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಬೇಕೆಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ(ಕೆ ಎಂ ಫ್)ಕ್ಕೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಹಾಲಿನ ದರ ಪರಿಷ್ಕರಣೆ ವಿಚಾರವಾಗಿ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದರು.
ನಮ್ಮ ರಾಜ್ಯದಲ್ಲಿನ ಹಾಲಿನ ದರ ಹಾಗೂ ಇತರೆ ರಾಜ್ಯಗಳಲ್ಲಿನ ದರ ಮತ್ತು ಉತ್ಪಾದನಾ ವೆಚ್ಚದ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಹಾಲಿನ ದರವನ್ನು 3₹ ಹೆಚ್ಚಿಸುವ ಬದಲು ರೈತರಿಗೆ ನಷ್ಟವಾಗದಂತೆ, ಗ್ರಾಹಕರಿಗೆ ಹೆಚ್ಚಿನ ಹೊರೆ ಬೀಳದಂತೆ, ಸಂಸ್ಥೆಗೆ ನಷ್ಟವಾಗದಂತಹ ಒಂದು ಸಿದ್ದ ಸೂತ್ರದೊಂದಿಗೆ ಬನ್ನಿ ಎಂದು ತಿಳಿಸಿದ್ದೇನೆ. pic.twitter.com/HvBbY1RHhT
— Basavaraj S Bommai (@BSBommai) November 21, 2022
''ವಿವಿಧ ರಾಜ್ಯಗಳಲ್ಲಿರುವ ಹಾಲಿನ ದರ ಹಾಗೂ ಸಂಬಂಧಿಸಿದ ಸಂಪೂರ್ಣ ಮಾಹಿತಿ, ಕೆಎಂಎಫ್ ಸಂಸ್ಥೆಗೆ ತಗಲುತ್ತಿರುವ ವೆಚ್ಚ, ಹಾಲಿನ ದರ ಏರಿಕೆಗೆ ಕಾರಣಗಳು, ಸಂಸ್ಥೆಯಲ್ಲಿ ಆಗುತ್ತಿರುವ ಸೋರಿಕೆಗಳು,ನಷ್ಟಗಳನ್ನು ತಡೆಗಟ್ಟಲು ಸಂಸ್ಥೆಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ. ಗ್ರಾಹಕ ಹಾಗೂ ರೈತನಿಗೆ ಅನುಕೂಲವಾಗುವ ಸೂತ್ರವನ್ನು ಎರಡು ದಿನಗಳಲ್ಲಿ ರೂಪಿಸಿಕೊಂಡು, ಕೆಎಂಎಫ್ ನಿರ್ದೇಶಕರ ಮಂಡಳಿ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. 3 ರೂ. ದರ ಹೆಚ್ಚಳ ಮಾಡುವುದು ಬೇಡ, ಆದರೆ ರೈತರು ಹಾಗೂ ಗ್ರಾಹಕರ ಹಿತದೃಷ್ಟಿಯಿಂದ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕೆಂದು ಸಲಹೆ ನೀಡಲಾಗಿದೆ'' ಎಂದರು.
ಗ್ರಾಹಕ ಹಾಗೂ ರೈತನ ಹಿತಚಿಂತನೆ ಸರ್ಕಾರದ ಕರ್ತವ್ಯ
ಕೆಎಂಎಫ್ ಕೂಡ ಸರ್ಕಾರದ ಒಂದು ಅಂಗವಾಗಿದ್ದು, ರೈತರಿಗೆ ಪ್ರೋತ್ಸಾಹ ಧನ, ಶಾಲಾ ಮಕ್ಕಳಿಗೆ ಹಾಲು ನೀಡಲಾಗುತ್ತಿದೆ. ಗ್ರಾಹಕರ ಹಾಗೂ ರೈತರ ಹಿತಚಿಂತನೆ ಮಾಡುವ ಕರ್ತವ್ಯ ಸರ್ಕಾರದ್ದಾಗಿದ್ದು, ಕೆಎಂಎಫ್ಗೆ ಮಾರ್ಗದರ್ಶನ ನೀಡಲಾಗಿದೆ. ಹಾಲಿನ ದರ ಕಾಲಕಾಲಕ್ಕೆ ಬದಲಾವಣೆಯಾಗುತ್ತದೆ. ಈ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳೂ ಸ್ಪರ್ಧೆಯಲ್ಲಿವೆ. ಈ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕೆಂದು ಕೆಎಂಎಫ್ಗೆ ಸೂಚಿಸಿರುವುದಾಗಿ ತಿಳಿಸಿದರು.
ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿತ್ತು.

ಪ್ರೆಷರ್ ಕುಕ್ಕರ್ ಸ್ಪೋಟ ಪ್ರಕರಣ ತನಿಖೆ ಚುರುಕುಗೊಂಡಿದೆ
ಮಂಗಳೂರಿನಲ್ಲಿ ಸಂಭವಿಸಿದ ಪ್ರೆಷರ್ ಕುಕ್ಕರ್ ಸ್ಪೋಟದ ತನಿಖೆ ಚುರುಕುಗೊಂಡಿದೆ. ಪ್ರಮುಖ ಆರೋಪಿಯ ವೈಯಕ್ತಿಕ ಮಾಹಿತಿಗಳನ್ನು ಪೊಲೀಸರು ಪಡೆದಿದ್ದಾರೆ ಎಂದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಸಂಪರ್ಕ ಯಾವ ಊರುಗಳಲ್ಲಿದೆ ಎಂಬುದರ ಮಾಹಿತಿಯೂ ಲಭಿಸಿದೆ. ಆತನ ನಿಜವಾದ ಹೆಸರು ಹಾಗೂ ಗುರುತು ಪತ್ತೆಯಾದ ನಂತರ, ಆತ ಬೇರೆ ಯಾವ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ. ಆ ಜಾಡನ್ನು ಹಿಡಿದು ತನಿಖೆ ನಡೆಯುತ್ತಿದೆ ಎಂದರು.
ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರಿಗೆ ಸೂಚನೆ
ಆರೋಪಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಕುಟುಂಬ ವರ್ಗದವರು ಆತನ ಗುರುತಿಸಿರುವುದು ಪ್ರಮುಖ ಬೆಳೆವಣಿಗೆ. ಇಲ್ಲಿಯವರೆಗಿನ ಎಲ್ಲ ಮಾಹಿತಿಗಳನ್ನು ರಾಷ್ಟ್ರೀಯ ತನಿಖಾ ದಳ ಹಾಗೂ ಐಬಿ ಗೆ ನೀಡಲಾಗಿದೆ. ಇದೇ ರೀತಿಯ ಕೃತ್ಯಗಳು ಬೇರೆ ಕಡೆಯೂ ಮಾಡಿದ್ದರೆ ಎಂಬುದು, ಈ ಘಟನೆಯ ಹಿಂದಿನ ಸಂಘಟನೆ ಬಗ್ಗೆ ಮಾಹಿತಿಗಳು ತಿಳಿಯಬೇಕಿದೆ. ಈ ನಿಟ್ಟಿನಲ್ಲಿಯೂ ತನಿಖೆ ಮುಂದುವರೆದಿದ್ದು, ವಿಷಯಗಳು ಲಭ್ಯವಾದ ನಂತರ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರು, ಭಯೋತ್ಪಾದಕ ನಿಗ್ರಹ ದಳ, ಆಂತರಿಕ ಸುರಕ್ಷತಾ ವಿಭಾಗಗಳು ಸಂಯೋಜಿಸಿ ಕಾರ್ಯನಿರ್ವಹಿಸಬೇಕು. ತನಿಖೆಯನ್ನು ಚುರುಕುಗೊಳಿಸಿ, ಹಿಂದಿರುವ ಘಾತುಕ ಶಕ್ತಿಗಳನ್ನು ಬಹಿರಂಗಗೊಳಿಸಬೇಕು ಎಂದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವಿಫಲವಾಗಿದೆ ಎಂಬ ಸಿದ್ದರಾಮಯ್ಯನವರು ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಕಾಲದಲ್ಲಿಯೂ ಇಂತಹ ಹಲವಾರು ಘಟನೆಗಳು ಸಂಭವಿಸಿವೆ. ಇದು ರಾಜಕೀಯ ಪ್ರೇರಿತ ಹೇಳಿಕೆ. ಇಂತಹ ಹೇಳಿಕೆಗಳಿಗೆ ಮಹತ್ವ ನೀಡುವುದಿಲ್ಲ ಎಂದರು.












Click it and Unblock the Notifications