ಉಪ ಚುನಾವಣೆಯಿಂದ ಜೆಡಿಎಸ್ ಹಿಂದೆ ಸರಿಯಲು ಏನು ಕಾರಣ?
ಬೆಂಗಳೂರು, ಫೆಬ್ರವರಿ 10: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಾಗಿದ್ದು, ಜಾತ್ಯಾತೀತ ಜನತಾ ದಳ ಸ್ಪರ್ಧೆಯಿಂದ ಹಿಂದೆ ಸರಿದಿದೆ. ಯಾವುದೇ ಸ್ಪರ್ಧಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಪುನರುಚ್ಚರಿಸಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಜೊತೆಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧಾನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಬೇಕಿದೆ.
ಉಪ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ದೇವೇಗೌಡರ ಪ್ರತಿಕ್ರಿಯೆ!
ರಾಜ್ಯದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಬ್ಯರ್ಥಿಗಳನ್ನ ಹಾಕುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದು ಸೂಕ್ತ ನಿರ್ಧಾರ. ಹೀಗಾಗಿ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.
ಸ್ಪರ್ಧೆಯಿಂದ ಹಿಂದೆ ಸರಿದಿದ್ದೇಕೆ: ಈ ನಾಲ್ಕು ಉಪ ಚುನಾವಣೆಯಿಂದ ಹಿಂದೆ ಸರಿಯಲು ಮುಖ್ಯ ಕಾರಣ ಜೆಡಿಎಸ್ ಬಳಿ ಚುನಾವಣೆ ಸ್ಪರ್ಧಿಸಲು ಬೇಕಾದ ನಿಧಿಯಿಲ್ಲ. ಉಪ ಚುನಾವಣೆ ಸ್ಪರ್ಧಿಸಲು ನಮ್ಮ ಬಳಿ ಹಣವಿಲ್ಲ ಎಂದು ದೇವೇಗೌಡರ ಕಚೇರಿಯ ಪ್ರಕಟಣೆ ಹೇಳಿದೆ. ಜೊತೆಗೆ 2023ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಖುದ್ದು ದೇವೇಗೌಡರ ಮುಂದಾಳತ್ವದಲ್ಲಿ ಸಂಘಟನೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.