ಶಾಶ್ವತ ಕುಡಿಯುವ ನೀರಿನ ಹೋರಾಟ ತಾತ್ಕಾಲಿಕ ಸ್ಥಗಿತ
ಚಿಕ್ಕಬಳ್ಳಾಪುರ, ಮಾರ್ಚ್ 08 : ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರೈತರು ನಡೆಸುತ್ತಿದ್ದ ಧರಣಿಯನ್ನು ವಾಪಸ್ ಪಡೆಯಲಾಗಿದೆ. 169 ದಿನಗಳಿಂದ ರೈತರು ಧರಣಿ ನಡೆಸುತ್ತಿದ್ದರು.
ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಮಾತನಾಡಿದ ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು, 'ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರೈತರು ಹಾಗೂ ಬಯಲುಸೀಮೆ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆಯಲ್ಲಿ ಧರಣಿಯನ್ನು ತಾತ್ಕಾಲಿಕವಾಗಿ ಕೈಬಿಡುವ ನಿರ್ಧಾರ ಕೈಗೊಳ್ಳಲಾಗಿದೆ' ಎಂದರು. [ಕೋಲಾರ ಸೇರಿ 4 ಜಿಲ್ಲೆಗಳಿಗೆ 24 ಟಿಎಂಸಿ 'ಜಲಭಾಗ್ಯ' : ಸಿದ್ದರಾಮಯ್ಯ]

'ಸಭೆಯಲ್ಲಿ ಬಯಲುಸೀಮೆ ನೀರಾವರಿ ನಿಗಮ ಸ್ಥಾಪನೆ, ಎತ್ತಿನಹೊಳೆ ಯೋಜನೆಯ ತಾಂತ್ರಿಕ ಲೋಪದೋಷ ಸರಿಪಡಿಸುವಿಕೆ, ಶರಾವತಿ, ಮೇಕೆದಾಟು, ಭದ್ರಾ ಮೇಲ್ದಂಡೆ ಸೇರಿದಂತೆ ಸಾಧ್ಯವಿರುವ ಎಲ್ಲಾ ಜಲ ಮೂಲಗಳಿಂದ ಬಯಲುಸೀಮೆ ಜಿಲ್ಲೆಗಳಿಗೆ ನೀರು ಒದಗಿಸುವ ಸಾಧ್ಯಾಸಾಧ್ಯತೆ ಪರಿಶೀಲನೆಗೆ ಸಮಿತಿ ರಚನೆ ಭರವಸೆ ನೀಡಲಾಯಿತು' ಎಂದು ಹೇಳಿದರು. [ಕರ್ನಾಟಕದಲ್ಲಿ ಭೀಕರ ಬರಗಾಲ, ಹೇಳುವವರಿಲ್ಲ ಕೇಳುವವರಿಲ್ಲ]
'2016-17ನೇ ಸಾಲಿನ ಬಜೆಟ್ನಲ್ಲಿ ತೆಗೆದುಕೊಳ್ಳುವ ತೀರ್ಮಾನ ಪರಿಶೀಲಿಸಿದ ನಂತರ ಧರಣಿ ಮುಂದುವರೆಸುವ ಕುರಿತು ನಿರ್ಧರಿಸಲಾಗುತ್ತದೆ, ಪರಮಶಿವಯ್ಯ ವರದಿಗೆ ಪೂರಕವಾದ ಸಾಧ್ಯತೆಗಳನ್ನು ಪರಿಶೀಲಿಸಲು ಸಮಿತಿ ರಚನೆಗೆ ಸರ್ಕಾರ ನಿರ್ಧರಿಸಿರುವುದು ಧರಣಿ ತಾತ್ಕಾಲಿಕ ಸ್ಥಗಿತಕ್ಕೆ ಕಾರಣ' ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. ["ನೀರು ಕೇಳಿದವರ ರಕ್ತ ಬಸಿದ ನಿಮಗೆ ನಾಚಿಕೆಯಾಗಲ್ವಾ"?]
ರೈತರಿಗೆ ಲಾಠಿ ಏಟು : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಮಾರ್ಚ್ 3ರಂದು ಬೆಂಗಳೂರಿಗೆ ಪ್ರತಿಭಟನೆ ನಡೆಸಲು ಆಗಮಿಸಿದ್ದರು. ಆಗ ಅವರ ಮೇಲೆ ಲಾಠಿ ಚಾರ್ಜ್ ನಡೆದಿತ್ತು. [ಬಂಗಾರಪೇಟೆಯ 4 ಗ್ರಾಮಗಳಿಗೆ ನೀರಿನ ತಲೆಬಿಸಿ ಇಲ್ಲ]
ಮಾರ್ಚ್ 6ರ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಯ ಜನತೆಗೆ ಕುಡಿಯುವ ನೀರು ಒದಗಿಸಲು ಸರ್ಕಾರ ಬದ್ಧವಾಗಿದೆ. ವಿವಿಧ ಯೋಜನೆಗಳಿಂದ ನಾಲ್ಕು ಜಿಲ್ಲೆಗಳಿಗೆ 24 ಟಿಎಂಸಿ ನೀರನ್ನು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು.












Click it and Unblock the Notifications