ಕೊಪ್ಪಳದಲ್ಲಿ 12 ಸಾವಿರ ಜನರಿಂದ ಮಾನವ ಸರಪಳಿ
ಕೊಪ್ಪಳ, ಅ.11 : ಕೊಪ್ಪಳ ಜಿಲ್ಲೆಯನ್ನು ಅಕ್ಟೋಬರ್ 2ರೊಳಗೆ 'ಬಯಲು ಬಹಿರ್ದೆಸೆ ಮುಕ್ತ' ಜಿಲ್ಲೆಯಾಗಿ ಘೋಷಣೆ ಮಾಡಲು ಸಿದ್ಧತೆಗಳು ನಡೆಯುತ್ತಿವೆ. ಸ್ವಾತಂತ್ರ್ಯ ಸಪ್ತಾಹ ಜಾಗೃತಿ ಕಾರ್ಯಕ್ರಮದಡಿ ಜಿಲ್ಲಾ ಪಂಚಾಯತಿ ವತಿಯಿಂದ ಕೊಪ್ಪಳ ನಗರದ ಗವಿಮಠ ಮೈದಾನದಲ್ಲಿ ಶುಕ್ರವಾರ 12 ಸಾವಿರ ಜನರ ಬೃಹತ್ ಮಾನವ ಸರಪಳಿ ಆಯೋಜಿಸಿ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 'ವೈಯಕ್ತಿಕ ಶೌಚಾಲಯ ಜಾಗೃತಿಗೆ ಕೊಪ್ಪಳ ಜಿಲ್ಲೆ ಕೇವಲ ಕರ್ನಾಟಕ ರಾಜ್ಯದಲ್ಲಷ್ಟೇ ಅಲ್ಲ, ಇಡೀ ದೇಶದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಸಂಚಲನ ಮೂಡಿಸಿದ ಜಿಲ್ಲೆಯಾಗಿದೆ' ಎಂದರು.
ನಗರದ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ದೈಹಿಕ ಶಿಕ್ಷಕರು, ಸಾರ್ವಜನಿಕರು ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಜನರು ಶೌಚಾಲಯ ಜಾಗೃತಿಗಾಗಿ ನಿರ್ಮಿತವಾದ ಮಾನವ ಸರಪಳಿಯಲ್ಲಿ ಪಾಲ್ಗೊಂಡರು.
ಈ ಅಭೂತಪೂರ್ವ ದೃಶ್ಯ ಎಲ್ಲರ ಗಮನ ಸೆಳೆಯಿತು. ಡ್ರೋಣ್ ಕ್ಯಾಮೆರಾ ಮೂಲಕ ಕಾರ್ಯಕ್ರಮದ ಸಂಪೂರ್ಣ ಚಿತ್ರೀಕರಣವನ್ನು ಮಾಡುವ ವ್ಯವಸ್ಥೆಯನ್ನು ಜಿಲ್ಲಾ ಪಂಚಾಯತಿಯಿಂದ ಕೈಗೊಳ್ಳಲಾಗಿತ್ತು. ಕಾರ್ಯಕ್ರಮದ ವಿವರ ಚಿತ್ರಗಳಲ್ಲಿ...

ಎರಡು ಲಕ್ಷ ಶೌಚಾಲಯಗಳು ನಿರ್ಮಾಣವಾಗಿವೆ
ಶೌಚಾಲಯ ನಿರ್ಮಾಣದಲ್ಲಿ ಕೊಪ್ಪಳ ಜಿಲ್ಲೆ ಇಡೀ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ. ಈಗಾಗಲೇ ಜಿಲ್ಲೆಯಲ್ಲಿ ಸುಮಾರು 2 ಲಕ್ಷ ಶೌಚಾಲಯ ನಿರ್ಮಾಣವಾಗಿದ್ದು, ಇನ್ನೂ ಸುಮಾರು 50 ಸಾವಿರ ಶೌಚಾಲಯ ನಿರ್ಮಾಣ ಮಾತ್ರ ಬಾಕಿ ಇದೆ. ಇದುವರೆಗೂ ಶೌಚಾಲಯ ನಿರ್ಮಾಣ ಮಾಡಿಸಿಕೊಳ್ಳದೇ ಇರುವ ಕುಟುಂಬಗಳು ಎರಡು ತಿಂಗಳ ಒಳಗಾಗಿ ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂದು ಗಡುವು ನೀಡಲಾಗಿದೆ.

ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಘೋಷಣೆ
ಶೌಚಾಲಯ ನಿರ್ಮಾಣಕ್ಕಾಗಿ ಸ್ವಚ್ಛ ಭಾರತ ಅಭಿಯಾನದಲ್ಲಿ ಸಹಾಯಧನವನ್ನು ಸರ್ಕಾರ ನೀಡಲಿದೆ. ಅಕ್ಟೋಬರ್ 02 ರಂದು ಗಾಂಧಿ ಜಯಂತಿ ಕಾರ್ಯಕ್ರಮವಿದ್ದು, ಅಂದು ಸ್ವಚ್ಛ ಭಾರತ ನಿರ್ಮಾಣದ ಕನಸು ಕಂಡಿದ್ದ ಗಾಂಧೀಜಿಯವರ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯನ್ನು ಸಂಪೂರ್ಣ 'ಬಯಲು ಬಹಿರ್ದೆಸೆ ಮುಕ್ತ' ಜಿಲ್ಲೆಯಾಗಿ ಘೋಷಣೆ ಮಾಡಲಾಗುತ್ತದೆ.

ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸಿ
'ಶೌಚಾಲಯ ರಹಿತ ಕುಟುಂಬಗಳು ಕೂಡಲೇ ಸಂಬಂಧಪಟ್ಟ ಗ್ರಾಮ ಪಂಚಾಯತಿಗಳನ್ನು ಸಂಪರ್ಕಿಸಿ, ಶೌಚಾಲಯ ನಿರ್ಮಾಣಕ್ಕೆ ಮುಂದಾಗಬೇಕು. ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಶೌಚಾಲಯ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿ ವಹಿಸಬೇಕು' ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಶೇಖರ ಹಿಟ್ನಾಳ್ ಕರೆ ನೀಡಿದರು.

ಮಲ್ಲಮ್ಮನ ಹೊಗಳಿದ್ದ ಮೋದಿ
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಮಾತನಾಡಿ, 'ಕೊಪ್ಪಳ ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣದ ಜಾಗೃತಿಗೆ ಹಲವರು ತಮ್ಮದೇ ಆದ ಕೊಡುಗೆ ನೀಡಿದರ ಫಲವಾಗಿ ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣದ ಕ್ರಾಂತಿಯಾಗಿದೆ. ಗಂಗಾವತಿ ತಾಲೂಕು ಡಣಾಪುರದ ಮಲ್ಲಮ್ಮನ ಸಾಧನೆಯನ್ನು ಮೋದಿ ಶ್ಲಾಘಿಷಿಸಿದ್ದಾರೆ' ಎಂದರು.

ಗುರಿ ಸಾಧಿಸಲು ಎಲ್ಲಾ ಪ್ರಯತ್ನ
ಜಿಲ್ಲೆಯ ಜನರು ಶೌಚಾಲಯ ನಿರ್ಮಾಣಕ್ಕೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು, ಅಕ್ಟೋಬರ್ 2 ರ ಒಳಗಾಗಿ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಜಿಲ್ಲೆಯನ್ನಾಗಿಸುವ ಗುರಿ ಸಾಧಿಸಲು ಎಲ್ಲ ರೀತಿಯ ಯತ್ನ ಮಾಡಲಾಗುವುದು. ಕೇಂದ್ರ ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಆ. 15 ರವರೆಗೆ ಬಯಲು ಬಹಿರ್ದೆಸೆ ಮುಕ್ತ ಸ್ವಾತಂತ್ರ್ಯ ಸಪ್ತಾಹ ಆಚರಿಸಲಾಗುತ್ತಿದೆ.












Click it and Unblock the Notifications