ಚುನಾವಣೆ ಸಮಯದಲ್ಲೇ ಬಿಜೆಪಿಗೆ ಗುಡ್ಬೈ ಹೇಳಿದ ಸಂಸದ ಕರಡಿ ಸಂಗಣ್ಣ: ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಏಪ್ರಿಲ್ 16: 2024ರ ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದೆ. ಈ ಬಾರಿ ಟಿಕೆಟ್ ಸಿಗದೇ ಪಕ್ಷದ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದ ಕೊಪ್ಪಳ ಸಂಸದ ಕರಡಿ ಸಂಗಣ್ಣ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಜೀವನ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿರುವ ಅವರು, ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಕರಡಿ ಸಂಗಣ್ಣ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪತ್ರವನ್ನು ಸಲ್ಲಿಕೆ ಮಾಡಿರುವ ಕರಡಿ ಸಂಗಣ್ಣ ಇದನ್ನು ಅಂಗೀಕಾರ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಕೊಡದೇ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಬಸವರಾಜ್ ಕ್ಯಾವಟರ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಕರಡಿ ಸಂಗಣ್ಣ ಪಕ್ಷದ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದರು.
ಕೊಪ್ಪಳ ಕ್ಷೇತ್ರ ಲೋಕಸಭಾ ಅಭ್ಯರ್ಥಿಯನ್ನು ಪುನಃ ಬದಲಾಯಿಸಿ ತಮಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು. ಆದರೆ ರಾಜ್ಯ ಬಿಜೆಪಿ ನಾಯಕರು ಟಿಕೆಟ್ ಬದಲಿಸಿದೇ ಕರಡಿ ಸಂಗಣ್ಣ ಅವರ ಮನವೊಲಿಸಲು ಯತ್ನಿಸಿದ್ದರು. ಇದರಿಂದಾಗಿ ಬೇಸರಗೊಂಡಿರುವ ಕರಡಿ ಸಂಗಣ್ಣ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿರುವ ಕರಡಿ ಸಂಗಣ್ಣ ನಾಳೆ (ಏಪ್ರಿಲ್ 17) ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಲಿದ್ದು, ಆ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಆದರೆ ಕರಡಿ ಸಂಗಣ್ಣ ಅವರ ಜೊತೆ ಮಾತುಕತೆ ನಡೆಸಿ ಆಗಿದೆ, ಇವತ್ತಲ್ಲ ನಾಳೆ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.












Click it and Unblock the Notifications