ಶೀಘ್ರದಲ್ಲೇ ಕೊಪ್ಪಳ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ
ಕೊಪ್ಪಳ, ಜುಲೈ 29 : ಕೊಪ್ಪಳ ತಾಲೂಕಿನ ಹೊರತಟ್ನಾಳ ಗ್ರಾಮದಲ್ಲಿ ಬಯಲು ಬಹಿರ್ದೆಸೆಗೆ ಹೊರಟಿದ್ದ ಗ್ರಾಮಸ್ಥರನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ತಡೆದು, ಮನೆಯಲ್ಲಿ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಬುದ್ಧಿವಾದ ಹೇಳಿದ್ದಾರೆ.
ಗ್ರಾಮಗಳಲ್ಲಿ ಶೌಚಾಲಯ ಜಾಗೃತಿ ಅಭಿಯಾನವನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ಹಮ್ಮಿಕೊಂಡಿದ್ದಾರೆ. ಪ್ರತಿದಿನ ಬೆಳಗ್ಗೆ ಒಂದೊಂದು ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರಲ್ಲಿ ಶೌಚಾಲಯದ ಕುರಿತಂತೆ ಅರಿವು ಮೂಡಿಸುತ್ತಿದ್ದಾರೆ.
ಹೊರತಟ್ನಾಳ ಗ್ರಾಮದಲ್ಲಿ ಒಟ್ಟು 177 ಕುಟುಂಬಗಳಿದ್ದು ಅದರಲ್ಲಿ ಈಗಾಗಲೇ 84 ಕುಟುಂಬಗಳು ಶೌಚಾಲಯ ಹೊಂದಿವೆ. ಉಳಿದ ಕುಟುಂಬಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅವರಿಂದ ಅರ್ಜಿ ಸ್ವೀಕರಿಸಿದ್ದು ಕಾಮಗಾರಿ ಕೈಗೊಳ್ಳಲು ಆದೇಶ ನೀಡಲಾಗಿದೆ.
ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕೊಪ್ಪಳ ಜಿಲ್ಲೆಯನ್ನು 2016-17 ನೇ ಸಾಲಿಗೆ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸುವ ಗುರಿಯನ್ನು ಹೊಂದಲಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಪ್ರತಿ ಮನೆಯಲ್ಲಿಯೂ ಶೌಚಾಲಯ ನಿರ್ಮಾಣ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ....
ಮಲ್ಲಮ್ಮನ ಉಪವಾಸ ಸತ್ಯಾಗ್ರಹ
ಗಂಗಾವತಿ ತಾಲೂಕಿನ ಡಣಾಪುರ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮಲ್ಲಮ್ಮ ಮನೆಯಲ್ಲಿ ಶೌಚಾಲಯ ನಿರ್ಮಿಸುವಂತೆ ಒತ್ತಾಯಿಸಿ ಉಪವಾಸ ಮಾಡಿ ರಾಜ್ಯದ ಗಮನ ಸೆಳೆದಿದ್ದಳು. ಮಲ್ಲಮ್ಮಳ ಸತ್ಯಾಗ್ರಹಕ್ಕೆ ಫಲ ಸಿಕ್ಕಿದ್ದು ಬೇಡಿಕೆಯಂತೆ ಮನೆಯಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಜಿಲ್ಲಾ ಪಂಚಾಯಿತಿ ಸಿಇಓ ಆರ್. ರಾಮಚಂದ್ರನ್ ಅವರು ಮಲ್ಲಮ್ಮಳ ಮನೆಗೆ ಭೇಟಿ ನೀಡಿ, ಪೂರ್ಣಗೊಂಡ ಶೌಚಾಲಯವನ್ನು ವೀಕ್ಷಿಸಿದ್ದಾರೆ.
ಕಾಲಿಗೆ ಬಿದ್ದು ಜಾಗೃತಿ ಮೂಡಿಸುತ್ತಿದ್ದಾರೆ
ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ ಕರಟೂರಿ ಅವರು ಮುಂಜಾನೆ ಬಯಲು ಬಹಿರ್ದೆಸೆಗೆ ತೆರಳುವ ಸಾರ್ವಜನಿಕರನ್ನು ನಿಲ್ಲಿಸಿ, ಅವರ ಕಾಲಿಗೆ ನಮಸ್ಕರಿಸಿ, ದಯವಿಟ್ಟು ಮನೆಯಲ್ಲಿ ಶೌಚಾಲಯ ನಿರ್ಮಿಸಿಕೊಂಡು, ಅದನ್ನು ಬಳಕೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದಾರೆ.
ಸರ್ಕಾರದಿಂದ ಸಹಾಯಧನ
ಮನೆಯಲ್ಲಿ ಶೌಚಾಲಯ ಕಟ್ಟಿಸಿಕೊಳ್ಳಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸರ್ಕಾರ 15 ಸಾವಿರ ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಶೌಚಾಲಯ ನಿರ್ಮಾಣ ಕಾಮಗಾರಿಗೆ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸುವ ಕಾರ್ಯಕ್ರಮವನ್ನೂ ಮಾಡುತ್ತಿದ್ದಾರೆ
ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾರ್ಯಕ್ರಮ
ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕೊಪ್ಪಳ ಜಿಲ್ಲೆಯನ್ನು 2016-17 ನೇ ಸಾಲಿಗೆ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸುವ ಗುರಿಯನ್ನು ಹೊಂದಲಾಗಿದೆ. ಇದಕ್ಕಾಗಿ ಜಿಲ್ಲಾ ಪಂಚಾಯಿತಿ ಸಿಇಓ ಆರ್. ರಾಮಚಂದ್ರನ್ ಮತ್ತು ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ಪ್ರತಿ ಮನೆಯಲ್ಲಿಯೂ ಶೌಚಾಲಯ ನಿರ್ಮಾಣ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಶೌಚಾಲಯ ಕಟ್ಟಿಸಿಕೊಳ್ಳುವಂತೆ ಬುದ್ಧಿವಾದ
ಕೊಪ್ಪಳ ತಾಲೂಕಿನ ಹೊರತಟ್ನಾಳ ಗ್ರಾಮದಲ್ಲಿ ಬಯಲು ಬಹಿರ್ದೆಸೆಗೆ ಹೊರಟಿದ್ದ ಗ್ರಾಮಸ್ಥರನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ ಅವರು ತಡೆದು, ಮನೆಯಲ್ಲಿ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಬುದ್ಧಿವಾದ ಹೇಳುತ್ತಿದ್ದಾರೆ. ಆ ಮೂಲಕ ಕೊಪ್ಪಳ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ.