ಏ.11ರಿಂದ ಎರಡು ದಿನಗಳ ಕಾಲ ಆನೆಗೊಂದಿ ಉತ್ಸವ
ಕೊಪ್ಪಳ, ಫೆ. 27 : ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಗತ ವೈಭವ ಮರುಕಳಿಸುವ ರೀತಿಯಲ್ಲಿ ಆನೆಗೊಂದಿ ಉತ್ಸವವನ್ನು ಏ. 11 ಮತ್ತು 12 ರಂದು ಆಚರಿಸಲಾಗುತ್ತದೆ ಎಂದು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಉತ್ಸವವನ್ನು ಉದ್ಘಾಟಿಸಲಿದ್ದಾರೆ.
ಆನೆಗೊಂದಿ ಉತ್ಸವ ಆಚರಣೆ ಕುರಿತು ಗಂಗಾವತಿಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಇಕ್ಬಾಲ್ ಅನ್ಸಾರಿ ಅವರು ಏ. 11 ಮತ್ತು 12 ರಂದ ಎರಡು ದಿನಗಳ ಕಾಲ ಉತ್ಸವ ನಡೆಸಲಾಗುತ್ತದೆ ಎಂದು ತಿಳಿಸಿದರು.
ಕಳೆದ ವರ್ಷ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಿದ್ದರಿಂದ ಆನೆಗೊಂದಿ ಉತ್ಸವವನ್ನು ಆಚರಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ವಿದ್ಯಾರ್ಥಿಗಳ ಪರೀಕ್ಷೆ, ಚುನಾವಣೆ ನೀತಿ ಸಂಹಿತೆ ಸೇರಿದಂತೆ ಎಲ್ಲ ನಿಟ್ಟಿನಲ್ಲಿ ಆಲೋಚನೆ ನಡೆಸಿ ದಿನಾಂಕ ನಿಗದಿಪಡಿಲಾಗಿದೆ ಎಂದು ಶಾಸಕರು ಹೇಳಿದರು.

ಏ. 11 ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಅಂದು ಬೆಳಗ್ಗೆ ಆನೆಗೊಂದಿಯ ಶ್ರೀ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವವಿದ್ದು, ಬೆಳಗ್ಗೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 6 ಗಂಟೆಗೆ ಉತ್ಸವದ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ ಎಂದರು.
ವಿವಿಧ ಕ್ರೀಡಾಕೂಟಗಳು : ಉತ್ಸವದ ಜೊತೆಗೆ ಏ. 12 ರಂದು ಕಬಡ್ಡಿ, ಕುಸ್ತಿ ಮುಂತಾದ ಕ್ರೀಡಾಕೂಟಗಳು ನಡೆಯಲಿದ್ದು, ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗುವುದು. ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಇಕ್ಬಾಲ್ ಅನ್ಸಾರಿ ಹೇಳಿದರು.
ಸರ್ಕಾರ ಉತ್ಸವಕ್ಕಾಗಿ 60 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ಉತ್ಸವ ಸಂದರ್ಭದಲ್ಲಿ ಆನೆಗೊಂದಿಯ ಮುಖ್ಯದ್ವಾರ, ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ವಿಶೇಷ ಹೂವಿನ ಅಲಂಕಾರ, ಸಾರ್ವಜನಿಕರ ಅನುಕೂಲಕ್ಕಾಗಿ ಹೈಮಾಸ್ಟ್ ದೀಪದ ವ್ಯವಸ್ಥೆ, ಗಂಗಾವತಿಯಿಂದ ವಿಶೇಷ ಬಸ್ ವ್ಯವಸ್ಥೆ ಮುಂತಾದ ವ್ಯವಸ್ಥೆಗಳನ್ನು ಮಾಡಲು ನಿರ್ಧರಿಸಲಾಗಿದೆ.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ಕೈಗೊಳ್ಳಲು ಸಾಕಷ್ಟು ಕಾಲಾವಕಾಶವಿದೆ. ನೆರೆಹೊರೆ ಜಿಲ್ಲೆ ಹಾಗೂ ರಾಜ್ಯಗಳಿಂದಲೂ ಖ್ಯಾತ ಕಲಾವಿದರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.












Click it and Unblock the Notifications