ಸಮನ್ವಯ ಸಮಿತಿಗೆ ಕೆಪಿಸಿಸಿ, ಜೆಡಿಎಸ್ ರಾಜ್ಯಾಧ್ಯಕ್ಷರ ಸೇರ್ಪಡೆ
ಬೆಂಗಳೂರು, ಆಗಸ್ಟ್ 02 : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವವರು ಸಮನ್ವಯ ಸಮಿತಿ ಸೇರಲಿದ್ದಾರೆ. ಸಮನ್ವಯ ಸಮಿತಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರು.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಮಸ್ವಯ ಸಮಿತಿಯನ್ನು ರಚನೆ ಮಾಡಲಾಗಿದೆ. ಪ್ರಸ್ತುತ ಸಮಿತಿಯಲ್ಲಿ ಕಾಂಗ್ರೆಸ್ನಿಂದ ಮೂವರು, ಜೆಡಿಎಸ್ನಿಂದ ಇಬ್ಬರು ನಾಯಕರು ಸೇರಿ 5 ಜನರಿದ್ದಾರೆ.
ಸಮಿತಿ ರಚನೆ ಆಗುವಾಗ ಜಿ.ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಆದ್ದರಿಂದ, ಸಮನ್ವಯ ಸಮಿತಿಗೆ ಅವರನ್ನು ಸೇರಿಸಿಕೊಳ್ಳಲಾಗಿತ್ತು. ಈಗ ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ.

ಕೆಪಿಸಿಸಿ ನೂತನ ಅಧ್ಯಕ್ಷರು, ಜೆಡಿಎಸ್ ಪಕ್ಷಕ್ಕೆ ಹೊಸದಾಗಿ ಆಯ್ಕೆಯಾಗುವ ರಾಜ್ಯಾಧ್ಯಕ್ಷರನ್ನು ಸಮನ್ವಯ ಸಮಿತಿಗೆ ಸೇರಿಸಬೇಕು ಎಂಬ ಬೇಡಿಕೆ ಮುಂದಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಈ ಕುರಿತು ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ.
ಕಾಂಗ್ರೆಸ್ ಸದಸ್ಯರು : ಸಮನ್ವಯ ಸಮಿತಿಯಲ್ಲಿ ಕಾಂಗ್ರೆಸ್ನಿಂದ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸದಸ್ಯರಾಗಿದ್ದಾರೆ. ಸಿದ್ದರಾಮಯ್ಯ ಅವರೇ ಸಮಿತಿಯ ಅಧ್ಯಕ್ಷರು.
ಜೆಡಿಎಸ್ ಸದಸ್ಯರು : ಜೆಡಿಎಸ್ ಪಕ್ಷದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಲ್ ಅಲಿ ಅವರು ಸದಸ್ಯರಾಗಿದ್ದಾರೆ.












Click it and Unblock the Notifications