KPCC President Post: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ: ಹೈಕಮಾಂಡ್ ಜೊತೆಗಿನ ಚರ್ಚೆ ಬಿಚ್ಚಿಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಏಪ್ರಿಲ್ 11: ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎನ್ನುವ ಮಾತುಗಳು ಕೈ ಪಾಳಯದಲ್ಲಿ ಕೇಳಿ ಬರುತ್ತಿದೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದು, ಎಲ್ಲಾ ಬಹಿರಂಗ ಹೇಳಿಕೆಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದ್ದಾರೆ. ಆದರೆ, ಪದೇ ಪದೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಇತರೇ ಚರ್ಚೆಗಳಾಗಿವೆ ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ, ಯಾವುದೇ ಬದಲಾವಣೆಯಿಲ್ಲ. ಒಂದಷ್ಟು ಪದಾಧಿಕಾರಿಗಳನ್ನು ನೇಮಕ ಮಾಡುತ್ತಾರೆ. ಒಂದಷ್ಟು ಜಿಲ್ಲಾ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತಾರೆ. ಇದು ಹೊರತಾಗಿ ಯಾರೂ ಸಹ ಯಾವುದೇ ವಿಷಯವನ್ನು ನನ್ನ ಬಳಿ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಬಿಜೆಪಿಯವರು ಯಾತ್ರೆ ಹೊರಟ ದಿನವೇ ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಗೆ ತಲಾ 2 ರೂಪಾಯಿ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಜಾಸ್ತಿ ಮಾಡಿ ಉದ್ಘಾಟನೆ ಮಾಡಿ, ಇವರ ಯಾತ್ರೆಗೆ 'ಗಿಫ್ಟ್' ಕಳಿಸಿದ್ದಾರೆ. ಇದರ ಬಗ್ಗೆ ಜನಸಾಮಾನ್ಯರು ಮಾಡುತ್ತಿರುವ ಗುಣಗಾನವನ್ನು ಎಲ್ಲರು ಕೇಳಬೇಕು. ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿರುವ ಜನಾಕ್ರೋಶ ಯಾತ್ರೆ ಎಂದು ಬಿಜೆಪಿಯವರು ಬೋರ್ಡ್ ಹಾಕಿಕೊಳ್ಳಬೇಕು" ಎಂದರು.
ಬುಧವಾರದಂದು ಕಚ್ಚಾ ತೈಲದ ಬೆಲೆ ಶೇ. 4.23 ರಷ್ಟು ಇಳಿಕೆಯಾಗಿದೆ. ಆದರೂ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ನ ಮೂಲ ದರ ಪ್ರತಿ ಲೀಟರ್ ಗೆ 42.60 ಪೈಸೆ ಇದೆ. ದೇಶದಾದ್ಯಂತ ಪ್ರತಿ ಲೀಟರ್ ಪೆಟ್ರೋಲ್ 103 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಒಂದು ಲೀಟರ್ ಗೆ ರೂ.60 ರೂಪಾಯಿ ಲಾಭ ಸರ್ಕಾರಕ್ಕೆ ಸಿಗುತ್ತಿದೆ. ಡೀಸಲ್ ಬೆಲೆ ರೂ.91 ರೂಪಾಯಿ ಇದೆ. ರೂ. 43 ಲಾಭ ಮಾಡುತ್ತಿದ್ದಾರೆ. ಶೇಕಡ 60 ರಷ್ಟು ತೆರಿಗೆ ಪೆಟ್ರೋಲ್, ಡೀಸೆಲ್ ಮೇಲೆ ಹಾಕಿದ್ದಾರೆ ಎಂದರು.
ನಮ್ಮ ಸರ್ಕಾರ ರೈತರ ಬದುಕನ್ನು ಉಳಿಸಲು ಹಾಲಿನ ದರ ಏರಿಕೆ ಮಾಡಿದ್ದೇವೆ. ಶಾಸಕರಾದ ವಿನಯ್ ಕುಲಕರ್ಣಿ ಅವರು ಪಶುಸಂಗೋಪನೆ ಮಾಡುತ್ತಿದ್ದಾರೆ. ಎಷ್ಟು ಖರ್ಚು ವೆಚ್ಚಗಳು ಹೆಚ್ಚಾಗಿವೆ ಎಂದು ಅವರನ್ನೇ ಕೇಳಬೇಕು. ಬಿಜೆಪಿಯವರು ಜಾನುವಾರುಗಳ ಬೂಸಾ, ಹಿಂಡಿ ಬೆಲೆಯನ್ನು ಏಕೆ ಕಡಿಮೆ ಮಾಡಿಸಲಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಹಾಲಿನ ದರ ನಮ್ಮ ರಾಜ್ಯದಲ್ಲಿ ಅತ್ಯಂತ ಕಡಿಮೆಯಿದೆ. ಕರ್ನಾಟಕದಲ್ಲಿ 42 ರೂಪಾಯಿ ಇದ್ದರೆ. ಕೇರಳ 52 ರೂ, ಗುಜರಾತ್ 53 ರೂ, ದೆಹಲಿ 55 ರೂ, ಮಹಾರಾಷ್ಟ್ರ 52 ರೂ, ತೆಲಂಗಾಣ 58 ರೂ, ಅಸ್ಸಾಂ 60 ರೂ, ಹರಿಯಾಣ 56 ರೂ, ರಾಜಸ್ಥಾನ 50 ರೂ, ಮಧ್ಯಪ್ರದೇಶ 52 ರೂ, ಪಂಜಾಬ್ 56 ರೂ, ಉತ್ತರ ಪ್ರದೇಶ 56 ರೂಪಾಯಿ ಬೆಲೆಯಿದೆ ಎಂದರು.
ನೀರಿನ ಬೆಲೆ ಏರಿಕೆಯನ್ನು ಅತ್ಯಂತ ಕಡಿಮೆ ಮಾಡಿದ್ದೇವೆ. ಕಸ ಸಂಗ್ರಹಣೆ ಶುಲ್ಕವನ್ನು ಈ ಹಿಂದಿನ ಬಿಜೆಪಿ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಕಡಿಮೆ ನಿಗದಿ ಮಾಡಿ ಬಡವರ ಪರವಾಗಿ ನಾವು ನಿರ್ಧಾರ ತೆಗೆದುಕೊಂಡಿದ್ದೇವೆ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಜನರ ಬದುಕು ಹಸನಾಗಲಿ ಎಂದು ಗ್ಯಾರಂಟಿ ಯೋಜನೆ ಮೂಲಕ ರೂ.52 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎಂದರು.
ಯುಪಿಎ ಸರ್ಕಾರದ ಅವಧಿಯಲ್ಲಿ ಚಿನ್ನದ ಬೆಲೆ ರೂ. 28 ಸಾವಿರವಿತ್ತು ಈಗ ರೂ.92 ಸಾವಿರವಿದೆ. 10 ಸಾವಿರವಿದ್ದ ಮೊಬೈಲ್ ದರ 30 ಸಾವಿರಕ್ಕೆ ಏರಿಕೆಯಾಗಿದೆ. ರೂ.13 ಸಾವಿರವಿದ್ದ 32 ಇಂಚಿನ ಟಿವಿ ರೂ.36 ಸಾವಿರವಾಗಿದೆ. 1.5 ಟನ್ ಸಾಮರ್ಥ್ಯದ ಎಸಿ ಬೆಲೆ ರೂ.25 ಸಾವಿರದಿಂದ ರೂ.44 ಸಾವಿರಕ್ಕೆ ಏರಿಕೆಯಾಗಿದೆ. ಫ್ರಿಡ್ಜ್ ಬೆಲೆ ರೂ. 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಾಗಿದೆ. ರೂ.59 ಇದ್ದ ಡಾಲರ್ ಬೆಲೆ ಈಗ ರೂ. 89 ಆಗಿದೆ. ಸಿಮೆಂಟ್ ಬೆಲೆ 268 ಇದ್ದಿದ್ದು ಈಗ ರೂ.410 ಕ್ಕೆ ಹೆಚ್ಚಳಗಿದೆ. ಈ ಬೆಲೆಯನ್ನೆಲ್ಲಾ ಯಾರೂ ನಿಯಂತ್ರಣ ಮಾಡುವವರು ಎಂದರು.












Click it and Unblock the Notifications