ಸಭೆಗೆ ಗೈರಾದವರಿಗೆ ಷೋಕಾಸ್ ನೋಟಿಸ್: ದಿನೇಶ್ ಗುಂಡೂರಾವ್
ಬೆಂಗಳೂರು, ಜನವರಿ 18: ಯಾವುದೇ ವಿವರಣೆ ನೀಡದೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಶಾಸಕರಿಗೆ ಷೋಕಾಸ್ ನೋಟಿಸ್ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಒಂದು ವೇಳೆ ಷೋಕಾಸ್ ನೋಟಿಸ್ಗೂ ಸೂಕ್ತ ವಿವರಣೆ ನೀಡದೆ ಇದ್ದರೆ ಅವರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯ ಬಳಿಕ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ನಮ್ಮ 80 ಶಾಸಕರ ಪೈಕಿ 76 ಮಂದಿ ಸಭೆಗೆ ಹಾಜರಾಗಿದ್ದರು. ಅನಾರೋಗ್ಯದ ಕಾರಣ ಬರಲು ಸಾಧ್ಯವಾಗುತ್ತಿಲ್ಲ ಎಂದು ಒಬ್ಬ ಶಾಸಕ ಡಾ. ಉಮೇಶ್ ಜಾಧವ್ ಪತ್ರ ಬರೆದಿದ್ದರು. ಮತ್ತೊಬ್ಬ ಶಾಸಕ ಬಿ. ನಾಗೇಂದ್ರ ತಮ್ಮ ಕೋರ್ಟ್ ಕೇಸ್ ಕಾರಣದಿಂದ ಬರಲು ಸಾಧ್ಯವಾಗಿಲ್ಲ. ಇನ್ನು ಎರಡು ದಿನಗಳಲ್ಲಿ ಬರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು ಎಂದು ದಿನೇಶ್ ಹೇಳಿದ್ದಾರೆ.

ಇನ್ನು ಸಭೆಗೆ ಯಾವುದೇ ಪೂರ್ವ ಮಾಹಿತಿ, ವಿವರಣೆ ನೀಡದೆ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮ್ಟಳ್ಳಿ ಗೈರುಹಾಜರಾಗಿದ್ದಾರೆ. ನಮ್ಮ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿವರಣೆ ಕೇಳಿ ಷೋಕಾಸ್ ನೋಟಿಸ್ ಜಾರಿ ಮಾಡಲಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡುವಲ್ಲಿ ಅವರು ವಿಫಲರಾದರೆ ಕಾನೂನಿನ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.












Click it and Unblock the Notifications